ಹೊಸದಿಲ್ಲಿ: ತಾಜ್ ಮಹಲ್ ನಗರ ಆಗ್ರಾದ ಬಳಿ ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಸೋಮವಾರ ನಸುಕಿನ ಜಾವ ಭೀಕರ ದುರಂತ ಸಂಭವಿಸಿದ್ದು, ಸಾರಿಗೆ ಸಂಸ್ಥೆಯ ಬಸ್ ಕಂದಕಕ್ಕೆ ಉರುಳಿ ಕನಿಷ್ಠ 29 ಜನ ಸಾವನ್ನಪ್ಪಿ, 16 ಜನ ಗಾಯಗೊಂಡಿದ್ದಾರೆ. ಚಾಲಕ ನಿದ್ದೆಯ ಮಂಪರಿಗೆ ಜಾರಿದ್ದೇ ಈ ಭೀಕರ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ವರದಿಯಾಗಿದೆ. ನಸುಕಿನ ಜಾವ ಸುಮಾರು 4.15ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಮೇಲ್ಸೇತುವೆಗೆ ಡಿಕ್ಕಿ ಹೊಡೆದು 40 ಅಡಿ ಆಳದ ಕಂದಕಕ್ಕೆ ಉರುಳಿದೆ. ಉತ್ತರ ಪ್ರದೇಶದ ರಾಜಧಾನಿ ಲಖನೌನಿಂದ ದಿಲ್ಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ನಲ್ಲಿ ಸುಮಾರು 50 ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತದೆ. ದುರ್ಘಟನೆಗೆ ತೀವ್ರ ದುಃಖ ವ್ಯಕ್ತ ಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಯ ಭರವಸೆ ನೀಡಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ಪೊಲೀಸರು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.
from India & World News in Kannada | VK Polls https://ift.tt/2JimMkp