ಬೆಳಗಾವಿ : ತುರ್ತು ಸಂದರ್ಭಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ರಾಜ್ಯ ವಿಪತ್ತು ನಿರ್ವಹಣಾ ದಳ (ಎಸ್ .ಡಿ.ಆರ್.ಎಫ್) ಬಲಪಡಿಸಲು 20 ಕೋಟಿ ರೂಪಾಯಿ ಅನುದಾನ ಒದಗಿಸಲು ಸಚಿವಸಂಪುಟ ಸಭೆ ಅನುಮೋದನೆ ನೀಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್.ಡಿ.ಆರ್.ಎಫ್.) ಮಾದರಿಯಲ್ಲಿ ಸಿಬ್ಬಂದಿ ನೇಮಕ, ತರಬೇತಿ, ಸಾಧನ-ಸಲಕರಣೆಗಳನ್ನು ಒದಗಿಸಲಾಗುವುದು ಎಂದು ಗೃಹಸಚಿವ ತಿಳಿಸಿದರು. ಅಗ್ನಿಶಾಮಕ ಮತ್ತು ತುರ್ತುಸೇವೆಗಳ ನಿಪ್ಪಾಣಿಯ ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಹಾಗೂ ಸಿಬ್ಬಂದಿಯ ವಸತಿಗೃಹಗಳನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿರುವ ಶೇ.60 ರಷ್ಟು ಸಿಬ್ಬಂದಿಗೆ ವಸತಿಗೃಹ ಕಲ್ಪಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಶೇ.80 ಸಿಬ್ಬಂದಿಗೆ ವಸತಿಗೃಹ ಒದಗಿಸುವುದು ಸರ್ಕಾರದ ಗುರಿ. ಪೊಲೀಸ್ ಸುಧಾರಣೆ ಮತ್ತು ಮೂಲಸೌಕರ್ಯಗಳನ್ನು ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಸರ್ಕಾರದ ನೆರವಿನಿಂದ ಎಲ್ಲ ಸೌಲಭ್ಯ ಒದಗಿಸಲಾಗುವುದು. ಜನಸ್ನೇಹಿ ಠಾಣೆ ನಿರ್ಮಾಣ ಮಾಡಲಾಗುವುದು. ದೂರು ದಾಖಲಿಸಲು ಸೂಚನೆ: ಠಾಣೆಗೆ ಯಾರೇ ಸಾರ್ವಜನಿಕರು ದೂರು ನೀಡಲು ಬಂದಾಗ ಕಡ್ಡಾಯವಾಗಿ ದೂರು ದಾಖಲಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾಖಲಾಗುವ ಪ್ರತಿಯೊಂದು ಪ್ರಕರಣವೂ ನಿಗದಿತ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸಬೇಕು. ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವವರ ಜತೆ ರಾಜೀ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಗಡಿ ಜಿಲ್ಲೆಗಳಲ್ಲಿ ನಡೆಯಬಹುದಾದ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಸೂಚನೆ ನೀಡಿದ್ದೇನೆ. ಸೈಬರ್ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಆದ್ಯತೆ ನೀಡಿ ಎಲ್ಲ ಜಿಲ್ಲೆಗಳಲ್ಲಿ ಸೈಬರ್ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ಪೊಲೀಸರಿಗೆ ಆಧುನಿಕ ಶಸ್ತ್ರಾಸ್ತ್ರ, ವಾಹನ ಮತ್ತಿತರ ಸೌಲಭ್ಯಗಳನ್ನು ಸರ್ಕಾರ ಒದಗಿಸಲಿದೆ ಎಂದರು. ಚಿಕ್ಕೋಡಿಗೆ ಎ.ಎಸ್.ಪಿ ಹುದ್ದೆ ಮಂಜೂರು: ಈ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಚಿಕ್ಕೋಡಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಯನ್ನು ಶೀಘ್ರದಲ್ಲೇ ಮಂಜೂರು ಮಾಡಲಾಗುವುದು. ಅದೇ ರೀತಿ ನಿಪ್ಪಾಣಿಯ ಮೂರು ಪೊಲೀಸ್ ಠಾಣೆಗಳ ನೂತನ ಕಟ್ಟಡ ನಿರ್ಮಿಸಲು ಮುಂದಿನ ಆಯವ್ಯಯ ಸಂದರ್ಭದಲ್ಲಿ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಪೊಲೀಸ್, ಅಗ್ನಿಶಾಮಕ, ಅಪಘಾತ ಮತ್ತಿತರ ತುರ್ತು ಸಂದರ್ಭಗಳಲ್ಲಿ 112 ದೂರವಾಣಿ ಸಂಖ್ಯೆಯನ್ನು ವ್ಯವಸ್ಥೆ ಮಾಡಲಾಗಿದೆ. ರಾಜ್ಯಮಟ್ಟದಲ್ಲಿ ಕರೆ ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದ್ದು, ಎಲ್ಲ ತುರ್ತು ಸೇವೆಗಳನ್ನು ಒಂದೇ ದೂರವಾಣಿ ಸಂಖ್ಯೆಯಡಿ ಒದಗಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು. ಕರ್ನಾಟಕ ಸರ್ಕಾರದ ವಿಧಾನಪರಿಷತ್ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಅವರು, ಪ್ರವಾಹ ಸಂದರ್ಭದಲ್ಲಿ ಜನರ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಎಸ್.ಡಿ.ಆರ್.ಎಫ್. ತಂಡಕ್ಕೆ ಅಭಿನಂದನೆ ಸಲ್ಲಿಸಿದರು. ನೆರೆಸಂತ್ರಸ್ತರ ಹಿತರಕ್ಷಣೆ ನಿಟ್ಟಿನಲ್ಲಿ ಸರ್ಕಾರ ಎಲ್ಲ ಕ್ರಮ ಕೈಗೊಂಡಿದೆ ಎಂದರು. ಮಾದರಿ ಎಸ್ಡಿಆರ್ಎಫ್ ರಚನೆ: ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಲು ಎಸ್.ಡಿ.ಆರ್.ಎಫ್.ಗೆ 200 ಜನರನ್ನು ಆಯ್ಕೆ ಮಾಡಿ ಸೂಕ್ತ ತರಬೇತಿಯನ್ನು ನೀಡಿ ದೇಶದಲ್ಲಿಯೇ ಮಾದರಿ ಎಸ್.ಡಿ.ಆರ್.ಎಫ್. ತಂಡವನ್ನು ರಚಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಅಗ್ನಿಶಾಮಕ ದಳದ ಹೆಚ್ಚುವರಿ ಮಹಾನಿರ್ದೇಶಕರಾದ ಸುನಿಲ್ ಅಗರವಾಲ್ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶಶಿಕಲಾ, ರಾಯಬಾಗ ಶಾಸಕರಾದ ದುರ್ಯೋಧನ ಐಹೊಳೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಐಜಿಪಿ ಎಚ್.ಜಿ.ರಾಘವೇಂದ್ರ ಸುಹಾಸ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ನಿಪ್ಪಾಣಿ ನಗರಸಭೆಯ ಜನಪ್ರತಿನಿಧಿಗಳು, ಅಗ್ನಿಶಾಮಕ ದಳದ ಉಪ ನಿರ್ದೇಶಕ ಸಿ. ಬಸವಣ್ಣ ಮತ್ತಿತರರು ಉಪಸ್ಥಿತರಿದ್ದರು.
from India & World News in Kannada | VK Polls https://ift.tt/2NtSpbO