ಕೊಚ್ಚಿ: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್ಸಿ ವಿರುದ್ಧದ ಹೋರಾಟದಲ್ಲಿ ಜೊತೆಗೂಡಿ ಎಂದು ಕೇರಳದ ಮುಖ್ಯಮಂತ್ರಿ 11 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಕೇರಳದಲ್ಲಿ ಸಿಎಎ ಹಾಗೂ ಎನ್ಆರ್ಸಿ ಜಾರಿ ಮಾಡುವುದಿಲ್ಲ ಎಂಬ ನಿರ್ಣಯವನ್ನು ವಿಧಾನಸಭೆಯಲ್ಲಿ ಕೈಗೊಂಡ ಬೆನ್ನಲ್ಲೇ ಸಿಎಎ ವಿರುದ್ಧ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಜೊತೆಗೂಡಿ ಎಂದು ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ. ಸಿಎಎ ಹಾಗೂ ಎನ್ಆರ್ಸಿ ವಿರುದ್ಧ ದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ದೇಶದ ಜಾತ್ಯತೀತತೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಜೊತೆಗೂಡಬೇಕಾದ ಅಗತ್ಯವಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಡಿಸೆಂಬರ್ 31 ರಂದು ಕೇರಳ ವಿಧಾನಸಭೆಯಲ್ಲಿ ಸಿಎಎ ವಿರುದ್ಧ ನಿರ್ಣಯ ಕೈಗೊಂಡ ವಿಚಾರವನ್ನು ಪತ್ರದಲ್ಲಿ ಉಲ್ಲೇಖಿಸಿರುವ ಅವರು ಕಾಯ್ದೆ ಜಾರಿಯಿಂದ ದೇಶದ ಜಾತ್ಯತೀತ ಪರಂಪರೆಯ ಮೇಲಾಗುವ ಪರಿಣಾಮಗಳ ಕುರಿತಾಗಿ ಎಚ್ಚರಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಗೆ ಈಗಾಗಲೇ 12 ರಾಜ್ಯಗಳು ವಿರೋಧ ವ್ಯಕ್ತಪಡಿಸಿದ್ದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಯ್ದೆ ವಿರೋಧಿಸಿ ಶುಕ್ರವಾರ ಸಿಲುಗುರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ನಡುವೆ ಯಾವುದೇ ಕಾರಣಕ್ಕೂ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
from India & World News in Kannada | VK Polls https://ift.tt/2FtmTqZ