ದ್ವಿತೀಯ ಟಿ20 ಕದನ; ಗಣರಾಜ್ಯೋತ್ಸವ ಉಡುಗೊರೆ ನೀಡುವ ತವಕದಲ್ಲಿ ಟೀಮ್ ಇಂಡಿಯಾ

ಆಕ್ಲೆಂಡ್: ಭಾರತ ಹಾಗೂ ಆತಿಥೇಯ ನ್ಯೂಜಿಲೆಂಡ್ ನಡುವಣ ದ್ವಿತೀಯ ಟ್ವೆಂಟಿ-20 ಪಂದ್ಯವು ಇಲ್ಲಿನ ಈಡನ್ ಪಾರ್ಕ್ ಮೈದಾನದಲ್ಲಿ ಜನವರಿ 26 ಭಾನುವಾರದಂದು ಆಯೋಜನೆಯಾಗಲಿದೆ. ಇದೇ ಮೈದಾನದಲ್ಲಿ ಶುಕ್ರವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಆರು ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿರುವ ಟೀಮ್ ಇಂಡಿಯಾ ಗೆಲುವಿನ ಓಟ ಮುಂದುವರಿಸುವ ಇರಾದೆಯಲ್ಲಿದೆ. ಹಾಗೆಯೇ ದೇಶದ ಕ್ರೀಡಾಭಿಮಾನಿಗಳಿಗೆ ಗಣರಾಜ್ಯೋತ್ಸವದ ಉಡುಗೊರೆ ನೀಡುವ ತವಕದಲ್ಲಿದೆ. ಮೊದಲ ಟಿ20 ಪಂದ್ಯದಂತೆ ದ್ವಿತೀಯ ಪಂದ್ಯದಲ್ಲೂ ರನ್ ಪ್ರವಾಹವನ್ನು ನಿರೀಕ್ಷಿಸಬಹುದಾಗಿದೆ. ಹಾಗಾಗಿ ಟಾಸ್ ಗೆದ್ದರೆ ಟೀಮ್ ಇಂಡಿಯಾ ನಾಯಕ ಮೊದಲು ಫೀಲ್ಡಿಂಗ್ ಆಯ್ದುಕೊಳ್ಳುವುದು ಸುನಶ್ಚಿತವೆನಿಸಿದೆ. ಇನ್ನು ಮೊದಲು ಬ್ಯಾಟಿಂಗ್ ನಡೆಸಿದರೆ ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ದೊಡ್ಡ ಮೊತ್ತ ಕಲೆ ಹಾಕುವುದು ಅನಿವಾರ್ಯವೆನಿಸಿದೆ. ಮೊದಲ ಪಂದ್ಯ ವಿಜೇತ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಕಂಡುಬರುವ ಸಾಧ್ಯತೆ ಕಡಿಮೆಯಾಗಿದೆ. ಅಂದರೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಕೆಎಲ್ ರಾಹುಲ್ ನಿರ್ವಹಿಸಲಿದ್ದಾರೆ. ಇದರಿಂದ ಉದಯೋನ್ಮುಖ ರಿಷಬ್ ಪಂತ್ ಅವಕಾಶ ವಂಚಿತವಾಗಲಿದ್ದಾರೆ. ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್‌ನಲ್ಲಿ ರಾಹುಲ್ ಪರಿಪೂರ್ಣ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಮೊದಲ ಪಂದ್ಯದಲ್ಲಿ ನಿರಾಸೆ ಅನುಭವಿಸಿರುವ ರೋಹಿತ್ ಶರ್ಮಾ ಲಯಕ್ಕೆ ಮರಳುವ ಇರಾದೆಯಲ್ಲಿದ್ದಾರೆ. ಇವರ ಜೊತೆಗೆ ಕೆಎಲ್ ರಾಹುಲ್ ಹಾಗೂ ನಾಯಕ ವಿರಾಟ್ ಕೊಹ್ಲಿ ತಂಡದ ಆಧಾರ ಸ್ತಂಭವಾಗಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಫಿನಿಶರ್ ಜವಾಬ್ದಾರಿಯನ್ನು ವಹಿಸಲಿದ್ದಾರೆ. ಇವರಿಗೆ ಕೆಳ ಕ್ರಮಾಂಕದಲ್ಲಿ ಮನೀಶ್ ಪಾಂಡೆ ಬಲ ತುಂಬಲಿದ್ದಾರೆ. ಆಲ್‌ರೌಂಡರ್ ಸ್ಥಾನದಲ್ಲಿ ರವೀಂದ್ರ ಜಡೇಜಾ ಹಾಗೂ ಶಿವಂ ದುಬೆ ಮುಂದುವರಿಯುವ ಸಾಧ್ಯತೆಯಿದೆ. ಇನ್ನು ರಿಸ್ಟ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಪರಿಣಾಮಕಾರಿ ಎನಿಸಿದ್ದಾರೆ. ವೇಗದ ಪಡೆಯನ್ನು ಜಸ್ಪ್ರೀತ್ ಬುಮ್ರಾ ಮುನ್ನಡೆಸಲಿದ್ದು, ಮೊಹಮ್ಮದ್ ಶಮಿ ಸಾಥ್ ನೀಡಲಿದ್ದಾರೆ. ಈ ಮಧ್ಯೆ ಶಾರ್ದೂಲ್ ಠಾಕೂರ್ ಸ್ಥಾನಕ್ಕೆ ನವದೀಪ್ ಸೈನಿ ಆಯ್ಕೆಯಾದರೂ ಅಚ್ಚರಿಯಿಲ್ಲ. ಇನ್ನೊಂದೆಡೆ ಕುಲ್‌ದೀಪ್ ಯಾದವ್ ಜೊತೆಗೆ ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್ ತಮ್ಮ ಅವಕಾಶಕ್ಕಾಗಿ ಕಾಯಬೇಕಾಗುತ್ತದೆ. ಅತ್ತ ಕಿವೀಸ್ ತಂಡವು ಬ್ಯಾಟಿಂಗ್‌ನಲ್ಲಿ 200ಕ್ಕೂ ಹೆಚ್ಚು ರನ್ ಕಲೆ ಹಾಕಿದರೂ ಬೌಲಿಂಗ್ ವಿಭಾಗವು ಕೈಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಪಡಿಸಲು ಗುರಿಯಾಗಿಸಲಿದೆ. ಒಟ್ಟಿನಲ್ಲಿ ಆಕ್ಲೆಂಡ್‌ನಲ್ಲಿ ಮಗದೊಂದು ರೋಚಕ ಕದನ ನಿರೀಕ್ಷಿಸಬಹುದಾಗಿದೆ. ಪಂದ್ಯಾರಂಭ: ಮಧ್ಯಾಹ್ನ 12.20ಕ್ಕೆ ಸರಿಯಾಗಿ (ಭಾರತೀಯ ಕಾಲಮಾನ) ತಂಡಗಳು ಇಂತಿದೆ: ಭಾರತ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಲ್, ಸಂಜು ಸ್ಯಾಮ್ಸನ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ಕುಲ್‌ದೀಪ್ ಯಾದವ್ ಮತ್ತು ಶಿವಂ ದುಬೆ. ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಮಾರ್ಟಿನ್ ಗಪ್ಟಿಲ್, ಕಾಲಿನ್ ಮನ್ರೊ, ಟಿಮ್ ಸೀಫರ್ಟ್, ರಾಸ್ ಟೇಲರ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಡ್ಯಾರೆಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಬ್ಲೇರ್ ಟಿಕ್ನರ್, ಸ್ಕಾಟ್ ಕುಗ್ಗೆಲೆಜಿನ್ ಮತ್ತು ಹ್ಯಾಮಿಶ್ ಬೆನೆಟ್.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/38El2vK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...