ಅಹಮದಾಬಾದ್: ಜೆಎನ್ಯು ವಿದ್ಯಾರ್ಥಿಗಳ ಮೇಲೆ ಭಾನುವಾರ ನಡೆದ ದಾಳಿಯನ್ನು ಖಂಡಿಸಿ ಅಹಮದಾಬಾದ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಎಬಿವಿಪಿ ಮತ್ತು ಎನ್ಎಸ್ಯುಐ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ. ಜೆಎನ್ಯು ಮೇಲಿನ ದಾಳಿಯನ್ನು ಖಂಡಿಸಿ ಪಾಲ್ಡಿ ಬಳಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್ಯುಐ) ಎರಡೂ ಸಂಘಟನೆಗಳು ಮಂಗಳವಾರ ಏಕಕಾಲದಲ್ಲಿ ಪ್ರತಿಭಟನೆಗೆ ಇಳಿದಿದ್ದವು. ಈ ಸಂದರ್ಭದಲ್ಲಿ ಎರಡೂ ಸಂಘಟನೆಗಳ ನಡುವೆ ವಾಗ್ವಾದ ಏರ್ಪಟ್ಟಿದ್ದು, ಘರ್ಷಣೆಗೆ ಕಾರಣವಾಗಿದೆ. ಎರಡೂ ಸಂಘಟನೆಗಳ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದು, ಕಲ್ಲು ತೂರಾಟ ನಡೆಸಿದ್ದಾರೆ. ಇ ಸಂಘರ್ಷದಲ್ಲಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅಹಮದಾಬಾದ್ನ ಪಾಲ್ಡಿ ಬಳಿಯ ಎಬಿವಿಪಿ ಕಚೇರಿ ಬಳಿ ಮಂಗಳವಾರ ಬೆಳಗ್ಗೆ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಎನ್ಎಸ್ಯುವಿ ಸಂಘಟನೆಯ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಎಬಿವಿಪಿ ವಿದ್ಯಾರ್ಥಿಗಳು ಬಡಿಗೆ ಹಿಡಿದು ಹೊಡೆದಾಟಕ್ಕೆ ನಿಂತಿದ್ದಾರೆ. ಹೀಗೆ ಎರಡೂ ಸಂಘಟನೆಗಳ ನಡುವೆ ಸಂಘರ್ಷ ಮೊದಲಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದಾವಿಸಿ ಸಂಘರ್ಷವನ್ನು ನಿಯಂತ್ರಿಸಿದ್ದಾರೆ. ಹೊಡೆದಾಡುತ್ತಿದ್ದ ವಿದ್ಯಾರ್ಥಿಗಳನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ರುಚಿ ತೋರಿಸಬೇಕಾಯಿತು. ದಿಲ್ಲಿಯ ಜೆಎನ್ಯು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹೊಸ ಪೌರತ್ವ ಕಾಯಿದೆ ವಿರೋಧಿ ಪ್ರತಿಭಟಿಸುತ್ತಿದ್ದ ವೇಳೆ, ಜೆಎನ್ಯು ಕಾಲೇಜು ಆರಣಕ್ಕೆ ಮುಸುಕುಧಾರಿ ಗೂಂಡಾಗಳು ನುಗ್ಗಿ ಹಲ್ಲೆ ನಡೆಸಿದ್ದರು. ಇದರಿಂದ ಸುಮಾರು 35 ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
from India & World News in Kannada | VK Polls https://ift.tt/39Pii0e