ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕಾರ್ಮಿಕರ ಕಾನೂನು ಮತ್ತು ಹಕ್ಕುಗಳ ರಕ್ಷಣೆಗಾಗಿ ಜ.8ರಂದು ದೇಶವ್ಯಾಪಿ ನಡೆಯುವ ಕಾರ್ಮಿಕರ ಮುಷ್ಕರ ಬೆಂಬಲಿಸಿ ಬಂದರು ಶ್ರಮಿಕರ ಸಂಘ ನೇತೃತ್ವದಲ್ಲಿ ಮಂಗಳವಾರ ನಗರದ ಕಾರ್ಮಿಕರ ಕಟ್ಟೆ ಬಳಿ ಸಭೆ ನಡೆಸಿದರು. ಹಳೆ ಬಂದರು ಸಗಟು ಮಾರುಕಟ್ಟೆಯಲ್ಲಿ ಬೆಳಿಗ್ಗೆ ವಾಣಿಜ್ಯ ವಹಿವಾಟು ಆರಂಭಗೊಳ್ಳುತ್ತಿದ್ದಂತೆ ಹಳೆ ಬಂದರು ಕಾರ್ಮಿಕರ ಕಟ್ಟೆ ಬಳಿ ಸಮಾವೇಶಗೊಂಡ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದರು. ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಬಂದರು ಶ್ರಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್, ''ನರೇಂದ್ರ ಮೋದಿ ಸರಕಾರದ ತಪ್ಪು ಆರ್ಥಿಕ ನೀತಿಯಿಂದಾಗಿ ಜಿಡಿಪಿ ಪಾತಾಳಕ್ಕೆ ಕುಸಿದಿದೆ ಉತ್ಪಾದನಾ ಮತ್ತು ನಿರ್ಮಾಣ ಕ್ಷೇತ್ರಗಳು ಜೀವನ್ಮರಣ ಸ್ಥಿತಿಯಲ್ಲಿದೆ. ಇದರಿಂದಾಗಿ ಇತಿಹಾಸದಲ್ಲೇ ಕಂಡರಿಯದ ನಿರುದ್ಯೋಗ ಸಮಸ್ಯೆ ಉಂಟಾಗಿದೆ. ಬೆಲೆ ಏರಿಕೆಯನ್ನು ನಿಯಂತ್ರಿಸಲಾಗುತ್ತಿಲ್ಲ. ದೇಶದ ಜನರು ಆರ್ಥಿಕ ಮುಗ್ಗಟ್ಟಿನಿಂದ ಹೊಟ್ಟೆಯ ಹಸಿವು ತಣಿಸಲು ಪರದಾಡುತ್ತಿರುವಾಗ ನರೇಂದ್ರ ಮೋದಿ ಸರಕಾರ ಜನರಿಗೆ ಬೇಡವಾದ ಎನ್ಆರ್ಸಿ, ಸಿಎಎ, ಎನ್ಪಿಆರ್ನಂತಹ ಕೋಮುವಾದಿ ಅಜೆಂಡಾವನ್ನು ಜಾರಿಗೊಳಿಸಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಮೋದಿ ಸರಕಾರದ ಎಲ್ಲಾ ಹುನ್ನಾರಗಳು ವಿಫಲಗೊಳ್ಳಲಿದೆ'' ಎಂದರು. ನಾಳೆ ಹಳೆ ಬಂದರು ಸಗಟು ಮಾರುಕಟ್ಟೆಯಲ್ಲಿ ಹಮಾಲಿ ಕಾರ್ಮಿಕರು ಯಾವುದೇ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳದೆ ಮುಷ್ಕರದಲ್ಲಿ ಸ್ವಯಂಪ್ರೇರಿತವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಇಮ್ತಿಯಾಝ್ ತಿಳಿಸಿದರು. ಬಂದರು ಶ್ರಮಿಕರ ಸಂಘದ ಉಪಾಧ್ಯಕ್ಷ ಹಸನ್ ಮೋನು, ಖಜಾಂಚಿ ಹರೀಶ್ ಕೆರೆಬೈಲ್ ಮುಖಂಡರಾದ ಮೊಯಿದಿನ್ ಕಲ್ಕಟ್ಟ, ಮಾಧವ ಕಾವೂರು,ಚಂದ್ರಹಾಸ ಕುತ್ತಾರ್, ಮಜೀದ್ ಉಳ್ಳಾಲ, ಫಾರೂಕ್ ಉಳ್ಳಾಲ, ಯಲ್ಲಪ್ಪ ಹಂಝ ಜಪ್ಪಿನಮೊಗರು ಮುಂತಾದವರು ಉಪಸ್ಥಿತರಿದ್ದರು.
from India & World News in Kannada | VK Polls https://ift.tt/2QLnYPO