ಹೊಸದೆಹಲಿ : ದೆಹಲಿಯ ಪ್ರತಿಷ್ಠಿತ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಮೇಲೆ ಭಾನುವಾರ ರಾತ್ರಿ ನಡೆದ ಹಲ್ಲೆ ದಾಂಧಲೆ ದೇಶಾದ್ಯಂತ ಭಾರೀ ಸುದ್ದಿಯಾಗುತ್ತಿದೆ. ಘಟನೆಯನ್ನು ಹಲವರು ಖಂಡಿಸಿದ್ದು ಪ್ರತಿಭಟನೆಯ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಿವಿಧ ಕೋರ್ಸ್ಗಳಿಗೆ ಶುಲ್ಕ ಹೆಚ್ಚಳ, ಎನ್ಆರ್ಸಿ, ಸಿಎಎ ಕಾಯ್ದೆಗಳ ಜಾರಿ ವಿಚಾರಗಳನ್ನು ಮುಂದಿಟ್ಟುಕೊಂಡು ಜೆಎನ್ಯು ವಿದ್ಯಾರ್ಥಿಗಳು ಕಳೆದ ಒಂದೂವರೆ ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಭಾನುವಾರ ರಾತ್ರಿ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದ್ದು ಮುಸುಕುಧಾರಿಗಳ ತಂಡ ಲಾಠಿ, ರಾಡ್ಗಳ ಜೊತೆಗೆ ಕ್ಯಾಂಪಸ್ ಆವರಣದೊಳಗೆ ಪ್ರವೇಶಿಸಿ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಜೆಎನ್ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಆಯಿಷ್ ಘೋಷ್ ಸೇರಿದಂತೆ ಸುಮಾರು 30 ಮಂದಿ ಗಾಯಗೊಂಡಿದ್ದಾರೆ. ಘಟನೆಗೆ ಎಬಿವಿಪಿ ಕಾರಣ ಎಂದು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿದರೆ, ಎಬಿವಿಪಿ ಸಂಘಟನೆ ಎಡಪಂಥೀಯ ವಿದ್ಯಾರ್ಥಿಗಳ ಮೇಲೆ ಬೊಟ್ಟು ಮಾಡುತ್ತಿದೆ. ಈ ಘಟನೆಯ ಕುರಿತಾಗಿ ವಿಜಯ ಕರ್ನಾಟಕದ ಜೊತೆ ಮಾತನಾಡಿದ ಜೆಎನ್ಯು ಕನ್ನಡ ಪೀಠದ ಮುಖ್ಯಸ್ಥರಾಗಿರುವ ಪ್ರೊ. ಪುರುಷೋತ್ತಮ ಬಿಳಿಮಲೆ "ಇದೊಂದು ವ್ಯವಸ್ಥಿತವಾಗಿ ನಡೆದ ದಾಳಿ ಎಂದಿದ್ದಾರೆ. ಶುಲ್ಕ ಹೆಚ್ಚಳ ವಿರೋಧಿಸಿ ತಿಂಗಳಿಂದ ಕ್ಯಾಂಪಸ್ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಯುತ್ತಿದೆ. ವಿದ್ಯಾರ್ಥಿಗಳ ಜೊತೆಗೆ ಮಾತನಾಡಿ ಸಮಸ್ಯೆ ಬಗೆಹರಿಸಿ ಎಂದು ಮಾನವ ಸಂಪನ್ಮೂಲ ಅಭಿವೃದ್ದಿ ಇಲಾಖೆ ಸಚಿವಾಲಯದಿಂದ ವಿವಿ ಉಪಕುಲಪತಿಗೆ ಪತ್ರದ ಮೂಲಕ ಸೂಚನೆ ಬಂದಿದೆ. ಆದರೆ ಉಪಕುಲಪತಿಗಳು ಇದಕ್ಕೆ ಸ್ಪಂದನೆ ನೀಡಲಿಲ್ಲ. ಈ ನಡುವೆ ವಿದ್ಯಾರ್ಥಿಗಳು ಸೆಂಟರ್ಗಳಿಗೆ ಬೀಗ ಜಡಿದು ಪ್ರತಿಭಟನೆ ಮಾಡುತ್ತಿದ್ದರು. ಅವರ ಮೇಲೆ ಎಬಿವಿಪಿ ಹಾಗೂ ಹೊರಗಿನಿಂದ ಬಂದ ಗೂಂಡಾಗಳು ಹಲ್ಲೆ ಮಾಡಿದ್ದಾರೆ. ಇದು ಖಂಡನೀಯ ಹಾಗೂ ಘಟನೆಗೆ ವಿವಿ ಆಡಳಿತ ಮಂಡಳಿ ನೇರ ಹೊಣೆ" ಎಂದು ಆರೋಪಿಸಿದ್ದಾರೆ. ಇನ್ನು ಘಟನೆ ಕುರಿತಾಗಿ ಲೇಖಕರಾದ ಸಂಪಿಗೆ ಶ್ರೀನಿವಾಸ್ ಪ್ರತಿಕ್ರಿಯೆ ನೀಡಿ “ ಜೆಎನ್ಯು ಘಟನೆಯ ಹಿಂದೆ ರಾಜಕೀಯ ಕೈವಾಡವಿದೆ. ನೋಂದಣಿ ಮಾಡಲು ಮುಂದಾದ ವಿದ್ಯಾರ್ಥಿಗಳಿಗೆ ಪ್ರತಿಭಟನಾಕಾರರು ತಡೆದಿದ್ದಾರೆ. ಎಡಪಂಥೀಯ ಪಕ್ಷಗಳ ಪ್ರಚೋದನೆಯಿಂದ ಘಟನೆ ನಡೆದಿದೆ. ಇಂತಹ ಘಟನೆಗಳು ಮುಂದುವರಿಯದಂತೆ ನೋಡಿಕೊಳ್ಳಬೇಕಾದರೆ ಎಲ್ಲಾ ವಿಶ್ವ ವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿ ಸಂಘಟನೆಗಳನ್ನು ನಿಷೇಧ ಮಾಡಬೇಕು. ವಿವಿಗಳು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಬೇಕೇ ಹೊರತು ರಾಜಕೀಯ ಮಾಡಬಾರದು ಎಂದಿದ್ದಾರೆ. ಭಾನುವಾರ ಜೆಎನ್ಯುನಲ್ಲಿ ನಡೆದ ದಾಂದಲೆ ಸರಿಯಲ್ಲ. ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದರು. ಸದ್ಯ ಜೆಎನ್ಯು ಆವರಣದಲ್ಲಿ ಸ್ಮಶಾನ ಮೌನ ಆವರಿಸಿದೆ. ಕ್ಯಾಂಪಸ್ನಲ್ಲಿ ಪೊಲೀಸ್ ಭದ್ರತೆಯಲ್ಲಿ ಹೆಚ್ಚಿಸಲಾಗಿದೆ. ಜೆಎಎನ್ಯು ವಿವಿ ಉಪಕುಲಪತಿ ಹಾಗೂ ಆಡಳಿತ ಮಂಡಳಿಯ ಪ್ರಮುಖರು ದೆಹಲಿ ಲೆಫ್ಟಿನೆಂಟ್ ಜನರಲ್ ಅವರನ್ನು ಭೇಟಿ ಮಾಡಿ ಘಟನೆಯ ಕುರಿತಾಗಿ ಮಾಹಿತಿ ನೀಡಿದ್ದಾರೆ. ಈ ನಡುವೆ ಮುಂಬೈ, ಹೈದರಾಬಾದ್, ಕರ್ನಾಟದ ಸೇರಿದಂತೆ ಹಲವು ರಾಜ್ಯಗಳಲ್ಲಿ ಜೆಎನ್ಯು ಘಟನೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
from India & World News in Kannada | VK Polls https://ift.tt/2uoziKr