ಬೆಂಗಳೂರು: ಸಂಪುಟ ವಿಸ್ತರಣೆ ದಿನಾಂಕ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಸಚಿವಾಕಾಂಕ್ಷಿಗಳ ಲಾಬಿ ತೀವ್ರಗೊಂಡಿವೆ. ಗೆದ್ದ ನೂತನ ಶಾಸಕರ ಜೊತೆಗೆ ಮೂಲ ಬಿಜೆಪಿ ಶಾಸಕರು ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಒತ್ತಡ ತಂತ್ರದ ಮೊರೆ ಹೋಗಿದ್ದಾರೆ. ಈ ನಡುವೆ ಬಿಜೆಪಿ ಶಾಸಕ ಆನಂದ್ ಮಾಮನಿ 'ಪಕ್ಷ ನಿಷ್ಠರಿಗೆ ಇದು ಕಾಲವಲ್ಲ' ಎಂಬ ಟ್ವೀಟ್ ಕುತೂಹಲ ಕೆರಳಿಸಿದೆ. “ಇನ್ನಾದರೂ ನನ್ನ ಕ್ಷೇತ್ರವನ್ನು ಹಾಗೂ ನಮ್ಮಂಥವರನ್ನು ಬೆಳೆಸಲು, ಈಗಾಗಲೇ ಸಾಕಷ್ಟು ಬಾರಿ ಇಲ್ಲಿವರೆಗೆ ಸರ್ಕಾರದಲ್ಲಿ ಅಧಿಕಾರ ಅನುಭವಿಸಿದವರು ಯಾವತ್ತೂ ತಾವು ಪಡೆದ ಸ್ಥಾನಮಾನ ಕಿಂಚಿತ್ತೂ ತ್ಯಜಿಸಲು ಹಿಂದೇಟು ಹಾಕುತ್ತಿರುವುದು ಒಂದೆಡೆಯಾದರೆ, ಪಕ್ಷದ ಮುಖಂಡರೂ ಸಹ ನನ್ನ ಕ್ಷೇತ್ರವನ್ನು ಹಾಗೂ ನಮ್ಮಂಥವರನ್ನು ಬೆಳೆಸಲು ಯಾವುದೇ ಆಸಕ್ತಿ ತೋರಿಸದಿರುವುದು ಇನ್ನೊಂದೆಡೆ. ಇನ್ಮೇಲೆ ಪಕ್ಷ ನಿಷ್ಠರಿಗೆ ಕಾಲವಿಲ್ಲವೇ, ಎಂಬುದು ಯಕ್ಷಪ್ರಶ್ನೆ. ಇದು ಪಕ್ಷ ನಿಷ್ಠರಿಗೆ ಹಾಗೂ ಮತದಾರರಿಗೆ ಆದ ಘೋರ ಅಪಮಾನ ಅಲ್ಲದೇ ಇನ್ನೇನು, ಎಂಬ ವಿಚಾರ ಎಲ್ಲರಲ್ಲೂ ಸ್ಪಷ್ಟ ಮೂಡಿದೆ. ಕಾಯ್ದು ನೋಡಬೇಕು. ಆದರೆ, ಮುಂದಿನ ನಡೆ ವಿಚಾರ ಮಾಡುವಂತದ್ದು” ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಹೊಸತಾಗಿ ಪಕ್ಷ ಸೇರಿ ಮಂತ್ರಿಯಾಗುವವರೆದುರಿಗೆ, ಪಕ್ಷಕ್ಕೆ ಅಡಿಪಾಯ ಹಾಕಿ, ಕಟ್ಟಿ, ನಿಷ್ಠಾವಂತರಾಗಿ ದುಡಿದು ಸಾಕಷ್ಟು ಬಾರಿ ಶಾಸಕರಾದರೂ ಲೆಕ್ಕಕ್ಕಿಲ್ಲ. ಪಕ್ಷದ ಮೇಲಿಟ್ಟಿರುವ ಕ್ಷೇತ್ರದ ಜನತೆಯ ಅಮೂಲ್ಯ ಪ್ರೀತಿ-ಅಭಿಮಾನಕ್ಕೂ, ಪಕ್ಷದಲ್ಲಿ ಬೆಲೆಯಿಲ್ಲದಾಯಿತೆ ಎಂದು ಪ್ರಶ್ನಿಸಿದ್ದಾರೆ. ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಾರಗಿದ್ದು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಈಗಾಗಲೇ ನೂತನ ಬಿಜೆಪಿ ಶಾಸಕರ ಪೈಕಿ 10 ಮಂದಿಗೆ ಹಾಗೂ ಮೂವರು ಮೂಲ ಬಿಜೆಪಿಗರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಕುರಿತಾಗಿ ಸಿಎಂ ಯೋಚನೆ ನಡೆಸುತ್ತಿದ್ದಾರೆ.
from India & World News in Kannada | VK Polls https://ift.tt/36XkzDQ