ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟವನ್ನು ನಾಟಕ ಎಂದು ಕರೆಯುವ ಮೂಲಕ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ ಬಿಜೆಪಿ ಸಂಸದ ವಿರುದ್ಧ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಸಂಸದ ಹೆಗಡೆಗೆ ಬಿಜೆಪಿ ಶೋಕಾಸ್ ನೋಟಿಸ್ ನೀಡಿದ್ದು ಕ್ಷಮೆ ಕೇಳುವಂತೆ ಸೂಚಿಸಿದೆ. ಅನಂತ್ ಕುಮಾರ್ ಹೆಗಡೆ ಹೇಳಿಕೆ ಕುರಿತಾಗಿ ದೆಹಲಿಯಲ್ಲಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹೆಗಡೆ ಹೇಳಿಕೆಯನ್ನು ತಿರಸ್ಕರಿಸುತ್ತೇವೆ, ಕೂಡಲೇ ಕ್ಷಮೆ ಕೇಳುವಂತೆ ಸೂಚನೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಪಕ್ಷದ ವ್ಯವಸ್ಥೆಯಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮತ್ತೆ ಮತ್ತೆ ಸಾವರ್ಕರ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅನಂತ್ ಕುಮಾರ್ ಹೆಗಡೆ ಸ್ವಾತಂತ್ರ್ಯ ಹೋರಾಟ, ಮಾಹಾತ್ಮ ಗಾಂಧಿ ಹಾಗೂ ಅಹಿಂಸಾ ತತ್ವದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಇತಿಹಾಸದ ಪ್ರಕಾರ ಬ್ರಿಟಿಷರು ಉಪವಾಸಕ್ಕೆ ಹೆದರಿ ದೇಶ ಬಿಟ್ಟು ಹೋದರು, ಇದನ್ನು ಕೇಳಿದರೆ ತಣ್ಣಗಿರುವ ರಕ್ತ ಹೆಪ್ಪುಗಟ್ಟಿ ಹೋಗುತ್ತದೆ. ಸ್ವಾತಂತ್ರ್ಯ ಹೋರಾಟದಲ್ಲಿ ಲಾಠಿ ನೋಡದ, ಏಟು ತಿನ್ನದವರನ್ನು ಹಾಗೂ ಬ್ರಿಟಿಷರ ಜೊತೆಗೆ ಒಳಒಪ್ಪಂದ ಮಾಡಿಕೊಂಡವರನ್ನು ಇತಿಹಾಸದ ಪುಟದಲ್ಲಿ ಸ್ವಾತಂತ್ರ್ಯ ಹೋರಾಟಗಾರರೆಂದು ಬಿಂಬಿಸಲಾಗುತ್ತಿದೆ ಎಂಬ ಹೇಳಿಕೆ ನೀಡಿದ್ದರು. ಸಂಸದರ ಹೇಳಿಕೆಗೆ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಬ್ರಿಜೇಶ್ ಕಾಳಪ್ಪ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಪತ್ರವೊಂದನ್ನು ಬರೆದಿದ್ದು ಅನಂತ್ ಕುಮಾರ್ ಹೆಗಡೆ ಸಂಸದರಾಗಲು ಯೋಗ್ಯರಲ್ಲ ಈ ನಿಟ್ಟಿನಲ್ಲಿ ಅವರ ವಿರುದ್ಧ ಸೂಕ್ತ ಕ್ರಮವನ್ನುಉ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
from India & World News in Kannada | VK Polls https://ift.tt/2RUWMQr