ಬೆಂಗಳೂರು: ಶನಿವಾರ ಸಂಜೆ 4 ಗಂಟೆಯಿಂದ ಮಾರ್ಚ್ 31ರ ವರೆಗೆ ಹೋಟೆಲ್ಗಳಲ್ಲಿ ಯಾರೂ ಊಟ, ತಿಂಡಿ ಮಾಡುವಂತಿಲ್ಲ ಎಂದು ರಾಜ್ಯ ಸರಕಾರ ಕಟ್ಟುನಿಟ್ಟಿನ ಆದೇಶ ಜಾರಿ ಮಾಡಿದ್ದು, ಹೋಟೆಲ್ನ ಕಿಚನ್ ಮಾತ್ರ ತೆರೆದಿರಬೇಕು. ಗ್ರಾಹಕರಿಗೆ ಊಟ, ತಿಂಡಿಯನ್ನು ಪಾರ್ಸೆಲ್ ಕೊಡಬಹುದು, ಅಲ್ಲೇ ಸೇವಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಪಬ್, ಬಾರ್ಗಳ ಬಾಗಿಲು ತೆರೆದರೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ಕೊರೊನಾ ಮುನ್ನೆಚ್ಚರಿಕೆ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಇದೇ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾನಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಶುಕ್ರವಾರ ಸಂಜೆ ವಿಡಿಯೊ ಸಂವಾದ ನಡೆಸಿದರು. ಈ ವೇಳೆ ರಾಜ್ಯದಲ್ಲಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮದ ಬಗ್ಗೆ ಪ್ರಧಾನಿ ಅವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದರು. ವಿಡಿಯೊ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ವೈ, ''ಕೋವಿಡ್-19 ಪ್ರಕರಣ ಹೆಚ್ಚುತ್ತಿರುವುದು ನಮಗೆ ಎಚ್ಚರಿಕೆಯ ಗಂಟೆಯಾಗಿದೆ. ಈ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲಿ ಕ್ವಾರಂಟೈನ್ ಕೈಗೊಳ್ಳಲು ಸೂಚಿಸಿದರು. ಕೊರೊನಾ ಕುರಿತ ಮಾರ್ಗಸೂಚಿಯನ್ನು ಜನರು ಪಾಲಿಸಲು ಮುಖ್ಯಮಂತ್ರಿಗಳು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಅಗತ್ಯವೆನಿಸಿದರೆ ಒತ್ತಡ ಹೇರುವಂತೆ ಪ್ರಧಾನಿ ನಿರ್ದೇಶಿಸಿದ್ದಾರೆ,'' ಎಂದರು. 500 ವೆಂಟಿಲೇಟರ್ ಖರೀದಿರಾಜ್ಯದಲ್ಲಿ 500 ವೆಂಟಿಲೇಟರ್, ಆಕ್ಸಿಜನ್ ಸೌಲಭ್ಯವಿರುವ 5 ಸಾವಿರ ಹಾಸಿಗೆ ಖರೀದಿಸಲಾಗುವುದು. ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆಹಾರ ಧಾನ್ಯದ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು. ಈ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ. ಆಹಾರ ಮತ್ತು ಔಷಧ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕು. ಈ ಸಂಬಂಧ ವರ್ತಕರು, ಔಷಧ ಕಂಪನಿ ಮಾಲೀಕರೊಂದಿಗೆ ಸಂಪರ್ಕ ಇಟ್ಟುಕೊಳ್ಳುವಂತೆ ಪ್ರಧಾನಿ ಅವರೂ ಸೂಚಿಸಿದ್ದಾರೆ. ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು. ಹೆಚ್ಚುವರಿ ಪ್ರಯೋಗಾಲಯಕಲಬುರ್ಗಿ, ಬಳ್ಳಾರಿಯಲ್ಲಿ ರೀಜೆಂಟ್ಗಳ ಅಗತ್ಯವಿದೆ. ಹುಬ್ಬಳ್ಳಿ, ಮಂಗಳೂರಿನಲ್ಲಿ ಪ್ರಯೋಗಾಲಯ ಸ್ಥಾಪಿಸಬೇಕೆಂದು ಮನವಿಗೆ ಪ್ರಧಾನಿ ಸಮ್ಮತಿಸಿದ್ದಾರೆ ಎಂದು ಸಿಎಂ ತಿಳಿಸಿದರು. ಉದ್ಯೋಗ ಭದ್ರತೆಗೆ ಮನವಿಅಸಂಘಟಿತ ವಲಯದ ಕಾರ್ಮಿಕ ಹಿತ ಕಾಯಬೇಕು. ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡಬೇಕು. ಕ್ವಾರಂಟೈನ್ ಸಂದರ್ಭದಲ್ಲಿ ಅಗತ್ಯ ಆಹಾರ ಧಾನ್ಯ ಒದಗಿಸಬೇಕು. ಪ್ರಯೋಗಾಲಯ, ಔಷಧ ಇನ್ನಿತರ ಸೌಕರ್ಯ ನೀಡಬೇಕು. ಅಂತಾರಾಷ್ಟ್ರೀಯ ಪ್ರಯಾಣವನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಪ್ರಧಾನಿ ಅವರಿಗೆ ನಾನಾ ರಾಜ್ಯಗಳ ಮುಖ್ಯಮಂತ್ರಿಗಳು ಮನವಿ ಮಾಡಿಕೊಂಡರು. ಕೊರೊನಾ ನಿಯಂತ್ರಣಕ್ಕೆ ರಾಜ್ಯದಿಂದ ಎಲ್ಲ ರೀತಿಯ ಮುಂಜಾಗ್ರತೆ ತೆಗೆದುಕೊಳ್ಳಲಾಗಿದೆ. ಕೇಂದ್ರದ ನೆರವಿಗಾಗಿ ಕಾಯುತ್ತ ಕುಳಿತುಕೊಳ್ಳುವುದಿಲ್ಲ. ಪೂರ್ಣ ಸಹಕಾರ ನೀಡುವುದಾಗಿ ಪ್ರಧಾನಿ ಅವರೇ ಹೇಳಿದ್ದಾರೆ. ಹಾಗಾಗಿ ವಿಶೇಷ ನೆರವಿಗೂ ಬೇಡಿಕೆಯಿಟ್ಟಿಲ್ಲ. ಸದ್ಯಕ್ಕೆ ರಾಜ್ಯದ ಜನರಿಗೆ ಅಗತ್ಯ ಸೇವೆ ನೀಡುವುದೇ ನಮ್ಮ ಆದ್ಯತೆ. - ಬಿ.ಎಸ್.ಯಡಿಯೂರಪ್ಪ, ಸಿಎಂ
from India & World News in Kannada | VK Polls https://ift.tt/3bg0gUF