ಬೆಂಗಳೂರು: ಬಗ್ಗೆ ರಾಜ್ಯಾದ್ಯಂತ ಎಲ್ಲಾ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಅರಿವು ಮೂಡಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಮಕ್ಕಳು ವೈರಾಣು ಸೋಂಕಿಗೆ ಶೀಘ್ರ ತುತ್ತಾಗುತ್ತಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯ, ವೈರಸ್ ಸೋಂಕು ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಶಾಲಾ ಮಕ್ಕಳು ಮತ್ತು ಪೋಷಕರಲ್ಲಿ ಅರಿವು ಮೂಡಿಸುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸುತ್ತೋಲೆ ಹೊರಡಿಸಿರುವ ಇಲಾಖೆ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಾಲೆಯ ಇತರೆ ಸಿಬ್ಬಂದಿಗಳು ವುಹಾನ್ ಅಥವಾ ಚೀನಾದಿಂದ ಹಿಂದಿರುಗಿರುವ ಯಾವುದೇ ವ್ಯಕ್ತಿಯೊಂದಿಗೆ ನಿಟಕ ಸಂಪರ್ಕ ಹೊಂದುವ ಸಾಧ್ಯತೆಯಿದ್ದಲ್ಲಿ, ಅಂತಹ ವಿದ್ಯಾರ್ಥಿಗಳು ತಮ್ಮ ಇತರೆ ಸಂಬಂಧಿಕರ ಮನೆಗಳಲ್ಲಿ ವಾಸ್ತವ್ಯ ಹೂಡಿ, ಅಲ್ಲಿಂದಲೇ ಶಾಲೆಗಳಿಗೆ ಬರುವಂತೆ ಸೂಚಿಸಿದೆ. ಕೊರೊನಾ ವೈರಸ್ ಬಾಧಿತ ವ್ಯಕ್ತಿಗಳೊಂದಿಗೆ ಯಾವುದೇ ವಿದ್ಯಾರ್ಥಿ ಸಂಪರ್ಕದಲ್ಲಿರುವುದು ಖಚಿತವಾದಲ್ಲಿ, ಅಂತಹ ವಿದ್ಯಾರ್ಥಿಗಳನ್ನು ಮನೆಗಳಲ್ಲಿ ಪ್ರತ್ಯೇಕವಾಗಿರಿಸಬೇಕು. ಯಾವುದೇ ವಿದ್ಯಾರ್ಥಿ, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿಗಳು ಜ್ವರ, ಶೀತ ಅಥವಾ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರೆ ಅಂತವರು ಕಡ್ಡಾಯವಾಗಿ ಶಾಲೆಗೆ ಹಾಜರಾಗದಂತೆ ತಿಳಿಸಬೇಕು. ಈ ಲಕ್ಷಣಗಳು ಕಂಡುಬಂದ ವಿದ್ಯಾರ್ಥಿಗಳು ಮಾರುಕಟ್ಟೆ, ದೇವಸ್ಥಾನ ಇತ್ಯಾದಿ ಜನನಿಬಿಡ ಪ್ರದೇಶಗಳಿಗೆ ಹೋಗದೆ ತಮ್ಮ ಮನೆಗಳಲ್ಲೇ ಪ್ರತ್ಯೇಕವಾಗಿರಬೇಕು. ಆರೋಗ್ಯ ಸುಧಾರಣೆ ಕುರಿತು ವೈದ್ಯರಿಂದ ಖಚಿತಪಡಿಸಿಕೊಂಡ ನಂತರವೇ ಶಾಲೆಗೆ ಹಿಂತಿರುಗುವಂತೆ ಇಲಾಖೆ ತಿಳಿಸಿದೆ. ಶಾಲೆಯಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡಲ್ಲಿ, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳು ಅಂತಹ ವಿದ್ಯಾರ್ಥಿಗಳನ್ನು ತಕ್ಷಣವೇ ಮನೆಗೆ ಕಳುಹಿಸಬೇಕು. ವಿದ್ಯಾರ್ಥಿನಿಲಯಗಳಲ್ಲಿ ರೋಗಕ್ಕೆ ತುತ್ತಾಗುವ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಇರಿಸಬೇಕು. ಕೊರೊನಾ ವೈರಸ್ ಪೀಡಿತ ಪ್ರದೇಶಗಳಿಗೆ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಬಾರದು ಎಂದು ಇಲಾಖೆಯ ಆಯುಕ್ತ ಡಾ.ಕೆ.ಜಿ. ಜಗದೀಶ್ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
from India & World News in Kannada | VK Polls https://ift.tt/2uPM4C8