ಬೆಂಗಳೂರು: ಮಧ್ಯಪ್ರದೇಶದ ರಾಜಕೀಯ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಹೈಡ್ರಾಮಗಳು ನಡೆಯುತ್ತಿವೆ. ಬೆಂಗಳೂರಿನ ಹೊಟೇಲ್ನಲ್ಲಿರುವ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ಬಂದಿದ್ದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಅವರನ್ನು ವಶಕ್ಕೆ ಪಡೆದುಕೊಂಡ ಪೊಲೀಸರ ವರ್ತನೆಯನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಬುಧವಾರ ಬೆಳಗ್ಗೆ ದಿಗ್ವಜಯ್ ಸಿಂಗ್ ಸೇರಿದಂತೆ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡರು ಬೆಂಗಳೂರಿಗೆ ಆಗಮಿಸಿದ್ದರು. ಅಲ್ಲಿಂದ ನೇರವಾಗಿ ಶಾಸಕರು ಉಳಿದುಕೊಂಡಿರುವ ಯಲಹಂಕ ಸಮೀಪದ ರಮಡಾ ರೆಸಾರ್ಟ್ಗೆ ತೆರಳಿದರು. ರೆಸಾರ್ಟ್ನಲ್ಲಿದ್ದ ಶಾಸಕರನ್ನು ಭೇಟಿ ಮಾಡಲು ದಿಗ್ವಿಜಯ್ ಸಿಂಗ್ ಯತ್ನಿಸಿದ್ದು ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ. ಪೊಲೀಸರ ನಡೆಯನ್ನು ಖಂಡಿಸಿ ದಿಗ್ವಿಜಯ್ ಸಿಂಗ್ ಹಾಗೂ ಕಾಂಗ್ರೆಸ್ ಮುಖಂಡರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಪೊಲೀಸರ ನಡೆಗೆ ವಿರೋಧ ವ್ಯಕ್ತಪಡಿಸಿದ ಡಿ.ಕೆ ಶಿವಕುಮಾರ್, ಪೊಲೀಸರು ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರ ನಡೆಯನ್ನು ಖಂಡಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ದೂರನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಕಮಲನಾಥ್ ಸರ್ಕಾರ ಪತನದ ಹಾದಿಯಲ್ಲಿದೆ. ಸರ್ಕಾರ ಉಳಿಸಿಕೊಳ್ಳಲು ಕಮಲನಾಥ್ ಹಾಗೂ ದಿಗ್ವಿಜಯ್ ಸಿಂಗ್ ಕೊನೆಯ ಹಂತದ ಪ್ರಯತ್ನಕ್ಕೆ ಮುಂದಾಗಿದ್ದು ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇದಕ್ಕೆ ಸಾಥ್ ನೀಡಿದ್ದಾರೆ.
from India & World News in Kannada | VK Polls https://ift.tt/38XL4do