ಬೆಂಗಳೂರು: ಕೊರೊನಾ ಸೋಂಕು ಹರಡದಂತೆ ರಾಜ್ಯ ಸರ್ಕಾರ ಸಾಕಷ್ಟು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಕೈಗೆ ಮುದ್ರೆ ಹಾಕಲಾಗುತ್ತಿದೆ. ವಿದೇಶದಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಯಾಣಿಕರನ್ನು 14 ದಿನಗಳ ಕಾಲ ಪ್ರತ್ಯೇಕವಾಗಿರುವ ನಿಟ್ಟಿನಲ್ಲಿ ಗುರುತಿಗಾಗಿ ಸ್ಟ್ಯಾಂಪಿಂಗ್ ಮಾಡಲಾಗುತ್ತಿದೆ. ಪ್ರಯಾಣಿಕರು ಇದಕ್ಕೆ ಸಹಕಾರ ನೀಡುತ್ತಿದ್ದಾರೆ. ವಿದೇಶದಿಂದ ಆಗಮಿಸುತ್ತಿರುವ ಪ್ರಯಾಣಿಕರನ್ನು ಹೀಗೆ ಪ್ರತ್ಯೇಕವಾಗಿಡುವ ಮೂಲಕ ಸೋಂಕು ಹರಡದಂತೆ ಮುನ್ನೆಚ್ಚರಿಕೆಯನ್ನು ಕೈಗೊಳ್ಳುವುದು ಸರ್ಕಾರ ಚಿಂತನೆಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಅನುಕೂಲವಾಗಲಿದೆ. ಈ ಹಿಂದಿನ ಪ್ರಕರಣಗಳಲ್ಲಿ ಸೋಂಕು ಪೀಡಿತ ವ್ಯಕ್ತಿ ವಿಮಾನ ನಿಲ್ದಾಣದಿಂದ ಹೊರಬಂದು ಹಲವರನ್ನು ಭೇಟಿಯಾಗಿದ್ದರು. ಇದರ ಪರಿಣಾಮ ಸೋಂಕು ಇತರರಿಗೂ ಹರಡಲು ಸಾಧ್ಯವಾಯಿತು. ಈ ನಿಟ್ಟಿನಲ್ಲಿ ಮುಂಬೈ ಮಾದರಿಯಲ್ಲಿ ಪ್ರಯಾಣಿಕರ ಕೈಗಳ ಮೇಲೆ ಸ್ಟ್ಯಾಂಪಿಂಗ್ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ವಿದೇಶದಿಂದ ಬಂದ ಪ್ರಯಾಣಿಕರು 14 ದಿನಗಳ ಕಾಲ ಮನೆಯಲ್ಲೇ ಉಳಿಯಬೇಕಾಗುತ್ತದೆ. ಅವರ ಮೇಲೆ ನಿಗಾ ಇಡಲು ಈ ವ್ಯವಸ್ಥೆ ಅನುಕೂಲಕರವಾಗಿದೆ. ರಾಜ್ಯದಲ್ಲಿ ಇದುವರೆಗೂ 14 ಜನರಲ್ಲಿ ಕೋವಿಡ್ -19 ಸೋಂಕು ಇರುವುದು ದೃಢಪಟ್ಟಿದೆ. ಇವರಿಗೆಲ್ಲಾ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಅಲ್ಲದೆ ಹಲವು ಶಂಕಿತರನ್ನು ಆಸ್ಪತ್ರೆ ಹಾಗೂ ಮನೆಯಲ್ಲಿ ನಿಗಾದಲ್ಲಿ ಇಡಲಾಗಿದೆ. ರಾಜ್ಯದಲ್ಲಿ ಕೋವಿಡ್ -19 ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮಾರ್ಚ್ 31 ರ ತನಕ ನಿರ್ಬಂಧ ಜಾರಿಗೊಳಿಸಲಾಗದೆ. ಈ ಅವಧಿಯಲ್ಲಿ ಯಾವುದೇ ಸಭೆ, ಸಮಾರಂಭಗಳನ್ನು ಆಯೋಜನೆ ಮಾಡದಂತೆ ಸರ್ಕಾರ ಆದೇಶಿಸಿದೆ.
from India & World News in Kannada | VK Polls https://ift.tt/2U2fpTD