ಹೊಸದಿಲ್ಲಿ: ಸೋಂಕು ಪ್ರಕರಣದ ದೇಶದೆಲ್ಲೆಡೆ ಹೆಚ್ಚುತ್ತಲೇ ಇದೆ. ಕೋವಿಡ್ 19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಭೀತಿ ಹಿನ್ನೆಲೆಯಲ್ಲಿ ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯನ್ನು ಏಪ್ರಿಲ್ 15ರ ವರೆಗೆ ಅಮಾನತಿನಲ್ಲಿಡಲಾಗಿದೆ. ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರಿಗೆ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ. ಅತ್ತ ಸದಾ ಬಿಡುವಿಲ್ಲದ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಅಧ್ಯಕ್ಷ ಕೂಡಾ ಕೆಲಸವಿಲ್ಲದೆ ಮನೆಯಲ್ಲಿ ಸಮಯ ಕಳೆಯುವಂತಾಗಿದೆ. ಬಿಸಿಸಿಐ ಬಾಸ್ ತಮ್ಮ ಇನ್ಸ್ಟಾಗ್ರಾಂ ಪುಟದಲ್ಲಿ ಈ ಬಗ್ಗೆ ಹಂಚಿಕೊಂಡಿದ್ದಾರೆ. ಅಲ್ಲದೆ ಕೊನೆಯದಾಗಿ ಯಾವಾಗ ಫ್ರೀ ಟೈಮ್ ಸಿಕ್ಕಿತೆಂಬುದು ನೆನಪಿಲ್ಲ ಎಂದು ಬರೆದುಕೊಂಡಿದ್ದಾರೆ. ಈ ಮಧ್ಯೆ ಕೊರೊನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ಬಿಸಿಸಿಐ ನೌಕರರಿಗೂ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಬಹುನಿರೀಕ್ಷಿತ ಐಪಿಎಲ್ ಟೂರ್ನಿಯು ಈ ಬಾರಿ ಆಯೋಜನೆಯಾಗಬಹುದೇ ಎಂಬುದು ಅನುಮಾನವೆನಿಸಿದೆ. ಇವೆಲ್ಲವೂ ಕೊರೊನಾ ವೈರಸ್ ವ್ಯಾಪ್ತಿಯ ಮೇಲೆ ಅವಲಂಬನೆಯಾಗಲಿದೆ. ಈ ನಡುವೆ ಬಿಸಿಸಿಐ ಹಾಗೂ ಎಲ್ಲ ಫ್ರಾಂಚೈಸಿಗಳು ಕಾದು ನೋಡುವ ತಂತ್ರವನ್ನು ಅನುಸರಿಸುತ್ತಿದೆ. ಆರಂಭದಲ್ಲಿ ಮಿನಿ ಐಪಿಎಲ್ ನಡೆಯುವ ಸೂಚನೆಯಿತ್ತಾದರೂ ಇದೀಗ ಜುಲೈನಿಂದ ಸೆಪ್ಟೆಂಬರ್ ವರೆಗಿನ ಅವಧಿಗೂ ಮುಂದೂಡುವ ಬಗ್ಗೆಯೂ ವರದಿ ಬಂದಿದೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿಯ ಕೊನೆಯ ಎರಡು ಪಂದ್ಯಗಳನ್ನು ರದ್ದುಗೊಳಿಸಲಾಗಿತ್ತು. ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಜಗತ್ತಿನ ಬಹುತೇಕ ಎಲ್ಲ ಕ್ರೀಡಾಕೂಟಗಳನ್ನು ರದ್ದುಗೊಳಿಸಲಾಗಿದೆ. ಮುಂಬರುವ ಟೋಕಿಯೊ ಒಲಿಂಪಿಕ್ಸ್ ಕೂಡಾ ಮುಂದೂಡಬೇಕೆಂಬ ಬಲವಾದ ಬೇಡಿಕೆ ಕೇಳಿಬಂದಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3a2D6AZ