ಬೆಂಗಳೂರು: ಕರ್ನಾಟಕದಲ್ಲೂ ಕೊರೊನಾ ಭೀತಿ ಎದುರಾಗಿರುವುದರಿಂದ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ವಿವಿಧ ದೇಶಗಳ ವಿಮಾನಗಳು ಆಗಮಿಸುತ್ತಿದ್ದು, ಸಾವಿರಾರು ಸಂಖ್ಯೆಯ ಪ್ರಯಾಣಿಕರು ಬರುತ್ತಾರೆ. ಈ ಹಿನ್ನೆಲೆಯಲ್ಲಿ ಕೊರೊನಾ ಘಟಕಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಲಾಗಿದೆ. ಸಿಂಗಾಪುರ, ನೇಪಾಲ, ಥೈಲೆಂಡ್, ಇಂಡೋನೇಷ್ಯಾ, ಕೊರಿಯಾ ಸೇರಿದಂತೆ 12 ದೇಶಗಳಿಂದ ಆಗಮಿಸುವ ವಿಮಾನಗಳ ಪ್ರಯಾಣಿಕರನ್ನು ವ್ಯಾಪಕ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಹಾಗೂ ಪ್ರತಿಯೊಬ್ಬರ ಮೇಲೂ ನಿಗಾ ಇಡಲಾಗಿದೆ. ಕೇವಲ ವಿಮಾನ ನಿಲ್ದಾಣ ಮಾತ್ರವಲ್ಲದೆ ಮೆಜೆಸ್ಟಿಕ್ ಬಸ್ ನಿಲ್ದಾಣಗಳಲ್ಲೂ ಕಟ್ಟೆಚ್ಚರವನ್ನು ಕೈಗೊಳ್ಳಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಈ ಕುರಿತಾಗಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಕೊರೊನಾ ಸೋಂಕು ಪೀಡಿತ ವ್ಯಕ್ತಿಯು ಬೆಂಗಳೂರಿನಿಂದ ಹೈದರಾಬಾದ್ಗೆ ತೆರಳಿದ್ದಾಗಿ ತಿಳಿದುಬಂದ ಹಿನ್ನೆಲೆಯಲ್ಲಿಈ ಆತಂಕ ಮೂಡಿದ್ದು ಜನರು ಗೊಂದಲಕ್ಕೆ ಒಳಗಾಗದಂತೆಯೂ ಅಧಿಕಾರಿಗಳು ವಿನಂತಿಸಿದ್ದಾರೆ.
from India & World News in Kannada | VK Polls https://ift.tt/2TklWJg