ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಕುರಿತಾಗಿ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರವಾಗಿ ಮಧ್ಯಪ್ರವೇಶದಕ್ಕೆ ಆಗ್ರಹಿಸಿ ಮುಖಂಡರ ನಿಯೋಗ ಬುಧವಾರ ರಾಜ್ಯಪಾಲರನ್ನು ಭೇಟಿಯಾಗಲಿದೆ. ಬುಧವಾರ ಬೆಳಗ್ಗೆ 10.45 ಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ನಿಯೋಗ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ. ಯತ್ನಾಳ್ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶ ನೀಡುವ ವಿಚಾರವಾಗಿ ರಾಜ್ಯಪಾಲರು ತಮ್ಮ ವಿಶೇಷಾಧಿಕಾರವನ್ನು ಬಳಸಬೇಕು ಎಂದು ನಿಯೋಗ ಮನವಿ ಸಲ್ಲಿಸಲಿದೆ. ವಿಧಾನಸಭೆಯಲ್ಲಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕೆಂದು ಸಂವಿಧಾನದ 175ನೇ ಪರಿಚ್ಛೇದಡಿ ನಿರ್ದೇಶನ ನೀಡಲು ರಾಜ್ಯಪಾಲರಿಗೆ ಅಧಿಕಾರ ಇದೆ. ಇದನ್ನು ಚಲಾಯಿಸಲು ಒತ್ತಾಯಿಸಿ ಪಕ್ಷದ ನಾಯಕರೊಂದಿಗೆ ನಾನು ನಾಳೆ ಬೆಳಿಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಲಿದ್ದೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಶಾಸಕ ಯತ್ನಾಳ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ವಿರೋಧ ಪಕ್ಷಗಳು ಕಳೆದ ಎರಡು ದಿನಗಳಿಂದ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ. ಮಂಗಳವಾರ ಸಂವಿಧಾನದ ಮೇಲಿನ ಚರ್ಚೆಗೂ ಅವಕಾಶವನ್ನು ನೀಡಲಿಲ್ಲ. ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಬೇಕು ಎಂಬುವುದು ಕಾಂಗ್ರೆಸ್ ಬೇಡಿಕೆಯಾಗಿದೆ. ಬುಧವಾರವೂ ಸದನದಲ್ಲಿ ಸಂವಿಧಾನದ ಮೇಲೆ ಚರ್ಚೆ ನಡೆಯಲಿದ್ದು ವಿರೋಧ ಪಕ್ಷಗಳು ಪ್ರತಿಭಟನೆಯನ್ನು ಮುಂದುವರಿಸಲಿವೆ.
from India & World News in Kannada | VK Polls https://ift.tt/2Tkq4sp