ಕೊರೊನಾ ಸಂಕಷ್ಟದಿಂದ ಪಾರಾಗಲು ಶ್ರೀಮಂತರ ಸಂಪತ್ತಿಗೆ ತೆರಿಗೆ! ಸಾಮಾಜಿಕ ಜಾಲತಾಣಗಳಲ್ಲಿ ಹೀಗೊಂದು ಅಭಿಯಾನ

ಬೆಂಗಳೂರು: ಕೊರೊನಾ ಸೋಂಕು ಜನರ ಆರೋಗ್ಯದ ಮೇಲೆ ಪರಿಣಾಮ ಬೀರಿದ್ದಲ್ಲದೆ ದೇಶದ ಆರ್ಥಿಕತೆಯ ಮೇಲೂ ಭಾರೀ ಪರಿಣಾಮ ಬೀರಿದೆ. ಇದನ್ನು ಸರಿಪಡಿಸಲು ಅತಿಶ್ರೀಮಂತರ ಆದಾಯದ ಮೇಲೆ ಶೇ. 2 ರಷ್ಟು ತೆರಿಗೆ ವಿಧಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನವೊಂದು ನಡೆಯುತ್ತಿದ್ದು ಗಮನಸೆಳೆಯುತ್ತಿದೆ. ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದಾಗಿ ಕೈಗಾರಿಕೆಗಳು, ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಸದ್ಯ ಸಡಿಲಿಕೆಯಿಂದಾಗಿ ಇದೀಗ ಮತ್ತೆ ಚೇತರಿಕೆಯ ಪ್ರಯತ್ನದಲ್ಲಿದೆ. ಆದರೆ ಬರೋಬ್ಬರಿ ಎರಡು ತಿಂಗಳ ಲಾಕ್‌ಡೌನ್ ಕಾರಣದಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು ವೇತನ ಕಡಿತ, ಉದ್ಯೋಗ ಕಡಿತದಂತಹ ನಿರ್ಧಾರಗಳನ್ನು ಕಂಪನಿಗಳು ತೆಗೆದುಕೊಂಡಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಪರಿಣಾಮವನ್ನು ಬೀರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಕೊರೋನಾ ಬಿಕ್ಕಟ್ಟನ್ನು ನಿಭಾಯಿಸಿ ಪ್ರಪಂಚ ಮಟ್ಟದಲ್ಲಿ ತಲೆಯೆತ್ತಿ ನಿಲ್ಲಲು ಮತ್ತು ಜನರ ಹಿತ ಕಾಪಾಡಲು ಸಾಂವಿಧಾನಿಕ ದಾರಿಯಾದ 1% ಅತಿಶ್ರೀಮಂತರಿಗೆ ಕೇವಲ 2% ಸಂಪತ್ತಿನ ತೆರಿಗೆ ವಿಧಿಸುವಂತೆ ಅಭಿಯಾನದ ಮೂಲಕ ಆಗ್ರಹಿಸಲಾಗಿದೆ. ಹಿರಿಯ ಸಾಹಿತಿಗಳಾದ ದೇವನೂರು ಮಹದೇವ, ಮೈಸೂರು ವಿಶ್ವವಿದ್ಯಾಲಯ ವಿಶ್ರಾಂತ ಪ್ರಾದ್ಯಾಪಕರಾದ ವಿ.ಕೆ.ನಟರಾಜ್, ಅಭಿವೃದ್ದಿ ಆರ್ಥಿಕ ತಜ್ಞರಾದ ಟಿ.ಆರ್.ಚಂದ್ರಶೇಖರ, ಎನ್‌ಐಎಎಸ್ ಬೆಂಗಳೂರು ನಿವೃತ್ತ ಪ್ರಾದ್ಯಾಪಕರಾದ ಎ. ಆರ್. ವಾಸವಿ ಸೇರಿದಂತೆ ಆರ್ಥಿಕ ತಜ್ಞರು, ಸಾಹಿತಿಗಳು, ಬರಹಗಾರರ ತಂಡ ಈ ಸಲಹೆಯನ್ನು ಅಭಿಯಾನದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. ಭಾರತವು ಕಲ್ಯಾಣರಾಜ್ಯ (Welfare State) ಕಡೆಗೆ ಚಲಿಸಬೇಕೆಂಬ ಆಶಯಗಳು ಇದ್ದಾಗ 1957ರಲ್ಲೇ ಸಂಪತ್ತಿನ ಮೇಲೆ ತೆರಿಗೆ ಪರಿಕಲ್ಪನೆ ಜಾರಿಯಲ್ಲಿತ್ತಾದರೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿರಲಿಲ್ಲ. ಆದರೆ, 1991ರ ನಂತರ ಮಾರುಕಟ್ಟೆ ಶಕ್ತಿಗಳು ಆಳ್ವಿಕೆಯನ್ನು ನಿಯಂತ್ರಿಸತೊಡಗಿದ ಪರಿಣಾಮವಾಗಿ 2015 ರಲ್ಲಿ ಕೇಂದ್ರ ಸರ್ಕಾರವು ಸಂಪತ್ತಿನ ಮೇಲಿನ ತೆರಿಗೆ ಪರಿಕಲ್ಪನೆಯನ್ನೇ ರದ್ದುಮಾಡಿಬಿಟ್ಟಿತು. ಆದರೀಗ, ಒಂದು ಲಕ್ಷ ದಾಟಿ ಓಡುತ್ತಿರುವ ಕೊರೊನಾ ಸೋಂಕಿನ ದಾಳಿಯಿಂದ ತತ್ತರಿಸುತ್ತಿರುವ ಭಾರತವು ಚೇತರಿಸಿಕೊಳ್ಳುವಂತಾಗಲು 1% ಅತಿಶ್ರೀಮಂತರಿಗೆ ಕೇವಲ 2% ಸಂಪತ್ತಿನ ತೆರಿಗೆ ವಿಧಿಸಿಯಾದರೂ ಕೊರೋನ ತಹಬಂದಿಗೆ ತರುವುದು ಇಂದಿನ ತುರ್ತಾಗಿದೆ. ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‍ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ. ಈ ವಿಚಾರದಲ್ಲಿ ಜನರಿಂದ ಆಯ್ಕೆಯಾದ ಮತ್ತು ಶಕ್ತಿಯುತವಾದ ಯಾವುದೇ ಸರ್ಕಾರವು ಹಿಂದೆ-ಮುಂದೆ ನೋಡದೆ ತುಂಬಾ ಶೀಘ್ರವಾಗಿ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಅಭಿಯಾನದ ಮೂಲಕ ಒತ್ತಾಯಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮಂದಿ ಇದಕ್ಕೆ ಸಹಮತ ವ್ಯಕ್ತಪಡಿಸಿ ತಮ್ಮ ಮುಖಪುಟಗಳಲ್ಲೂ ಹಂಚಿಕೊಂಡಿದ್ದಾರೆ. ಈ ಮೂಲಕ ಕೊರೊನಾ ಸಂಕಷ್ಟದಿಂದ ಪಾರಾಗಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆಯನ್ನು ಇಡಬೇಕು ಎಂದು ಆಗ್ರಹಿಸಿದ್ದಾರೆ.


from India & World News in Kannada | VK Polls https://ift.tt/2M1a8XP

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...