ಮುಂಬೈ: ಮಹಾರಾಷ್ಟ್ರದ ಶಿವಸೇನೆ, ಕಾಂಗ್ರೆಸ್-ಎನ್ಸಿಪಿ ಮೈತ್ರಿಕೂಟದಲ್ಲಿ ಬಿರುಕು ಮೂಡಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ನಡೆಸಿದ್ದಾರೆ. ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರೀಯಲ್ಲಿ ಮಹತ್ವದ ಸಭೆ ನಡೆಸಿದ ಠಾಕ್ರೆ ಹಾಗೂ ಪವಾರ್, ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಬಿರುಕು ಮೂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಹಾವಳಿ ಹಾಗೂ ಲಾಕ್ಡೌನ್ ವಿಸ್ತರಣೆ ವಿಷಯದಲ್ಲಿ ಶಿವಸೇನೆ ಹಾಗೂ ಎನ್ಸಿಪಿ ನಡುವೆ ಬಿರುಕು ಮೂಡಿದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಠಾಕ್ರೆ ಹಾಗೂ ಪವಾರ್, ನಿನ್ನೆ(ಮೇ. 25 )ಸಂಜೆಯೇ ಸಭೆ ನಡೆಸಿ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಿವಸೇನೆ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ರಾವುತ್, ಉಭಯ ನಾಯಕರು ಭೇಟಿ ಮಾಡಿರುವುದು ಒಗ್ಗಟ್ಟಿಗೆ ಸಾಕ್ಷಿ ಎಂದು ಹೇಳಿದ್ದಾರೆ. ದೋಸ್ತಿ ಸರ್ಕಾರದಲ್ಲಿ ಬಿರುಕು ಮೂಡಿದೆ ಎಂಬುದನ್ನು ವದಂತಿ ಎಂದ ಸಂಜಯ್ ರಾವುತ್, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ ಎಂಬುದೂ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. ಒಟ್ಟಿನಲ್ಲಿ ಕೊರೊನಾ ವೈರಸ್ ಕಾರಣಕ್ಕೆ ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಗಳನ್ನು ಶಿವಸೇನೆ, ಎನ್ಸಿಪಿ-ಕಾಂಗ್ರೆಸ್ ಮೈತ್ರಿಕೂಟ ಸ್ಪಷ್ಟವಾಗಿ ಅಲ್ಲಗಳೆದಿದೆ.
from India & World News in Kannada | VK Polls https://ift.tt/2X2rkmb