ಬೆಂಗಳೂರು: ಮುಖ್ಯಮಂತ್ರಿ ಅವರು ಮಂಗಳವಾರ ಮೆಕ್ಕೆ ಜೋಳ ಹಾಗೂ ಹೂವು ಬೆಳೆಗಾರರಿಗೆ 666 ಕೋಟಿ ರೂಪಾಯಿಗಳ ಮೊತ್ತವನ್ನು ಆನ್ಲೈನ್ ಮೂಲಕ ರೈತರ ಖಾತೆಗೆ ಬಿಡುಗಡೆ ಮಾಡಿದರು. ಮಂಗಳವಾರ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ನಂತರ ಸ್ವತಃ ತಾವೇ ರೈತರಿಗೆ ಕರೆ ಮಾಡಿ ಪರಿಹಾರ ಹಣ ಖಾತೆಗಳಿಗೆ ವರ್ಗಾವಣೆ ಆಗಿರುವುದನ್ನು ಖಾತ್ರಿಪಡಿಸಿಕೊಂಡರು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ಡೌನ್ ಘೋಷಿಸಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ತಮ್ಮ ಬೆಳೆಯನ್ನು ಮಾರಾಟ ಮಾಡಲಾಗದೆ ಭಾರಿ ನಷ್ಟ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರೈತರಿಗೆ ಪರಿಹಾರ ಘೋಷಣೆ ಮಾಡಿತ್ತು. ಇನ್ನು ಪ್ರಗತಿ ಪರಿಶೀಲನೆ ಸಭೆ ವೇಳೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ 100 ದಿನಗಳ ಪ್ರಗತಿಯ ವರದಿಯನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು. ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಕೆ. ನಾರಾಯಣಗೌಡ, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಉಪಸ್ಥಿತರಿದ್ದರು.
from India & World News in Kannada | VK Polls https://ift.tt/3gP0rdk