ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ತಡೆಗಟ್ಟುವ ನಿಟ್ಟಿನಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಈ ವಿಚಾರವಾಗಿ ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಮುಂದಿನ ದಿನಗಳಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿ ಕಳೆದ 16 ದಿನಗಳಿಂದ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ಕಾರಣಕ್ಕಾಗಿ ಕೆಲವು ಪ್ರದೇಶಗಳಲ್ಲಿ ಸೀಲ್ಡೌನ್ ಮಾಡಿದ್ದೇವೆ. ಈ ವಿಚಾರವಾಗಿ ಚರ್ಚೆ ನಡೆಸಲು 1 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರುಗಳು ಹಾಗೂ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಕೊರೊನಾ ಹರಡದಂತೆ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಶುಕ್ರವಾರ 12 ಗಂಟೆಗೆ ಬೆಂಗಳೂರಿನ ಎಲ್ಲಾ ಪಕ್ಷಗಳ ಶಾಸಕರ ಸಭೆಯನ್ನು ಕರೆಯಲಾಗಿದೆ. ಚರ್ಚೆ ನಡೆಸಿದ ಬಳಿಕ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭಗೊಂಡಿದ್ದು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು ಎಂದು ಸಿಎಂ ಇದೇ ವೇಳೆ ಮನವಿ ಮಾಡಿದರು. ಸೋಂಕು ಪ್ರಕರಣಗಳು ಹೆಚ್ಚಾಗಿರುವ ಬೆಂಗಳೂರಿನಲ್ಲಿ ಕೆಲವು ಏರಿಯಾಗಳಲ್ಲಿ ಲಾಕ್ಡೌನ್ ಇದೆ. ಕೆಲವು ದಿನಗಳ ಕಾಲ ಅದು ಮುಂದುವರಿಯುತ್ತೆ.ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ದೇಶದಲ್ಲಿ ಬೆಂಗಳೂರು ನಗರ ಮಾದರಿಯಾಗಿದೆ. ಬೇರೆ ರಾಜ್ಯದ ನಗರಗಳಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಸೋಂಕು ನಿಯಂತ್ರಣದಲ್ಲಿ ಇದೆ ಎಂದರು. ಆದರೆ ಕಳೆದ 16 ದಿನಗಳಲ್ಲಿ ವೈರಸ್ ಹರಡುತ್ತಿರುವ ಪ್ರಕರಣಗಳು ಜಾಸ್ತಿಯಾಗುತ್ತಿವೆ.ಈ ನಿಟ್ಟಿನಲ್ಲಿ ಇನ್ನೂ ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು ಎದು ನಿರ್ಧರಿಸಲಾಗಿದೆ. ಸ್ಲಂಗಳಲ್ಲಿ ಸೋಂಕು ಹರಡುತ್ತಿದ್ದು ಬೆಂಗಳೂರು ಸೀಲ್ಡೌನ್ ಆಗಬಾರದು ಎಂದು ಇದ್ದರೆ ಜನರು ಸಾಮಾಜಿಕ ಅಂತರ ಕಾಪಾಡಬೇಕು ಹಾಗೂ ಆರೋಗ್ಯ ಇಲಾಖೆ, ಸರ್ಕಾರದ ಸೂಚನೆಗಳನ್ನು ಪಾಲನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
from India & World News in Kannada | VK Polls https://ift.tt/3ezrtDL