ಕೊರೊನಾ ಲಾಕ್‌ಡೌನ್: ಬೆಂಗಳೂರು ಶಾಸಕರ ಅಭಿಪ್ರಾಯ ಏನಿದೆ?

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತದೆ. ಗುರುವಾರ ಒಂದೇ ದಿನ ನಗರದಲ್ಲಿ 113 ಪ್ರಕರಣಗಳು ಪತ್ತೆಯಾಗಿವೆ. ಪರಿಣಾಮ ಸೋಂಕಿತರ ಸಂಖ್ಯೆ 1791 ಕ್ಕೆ ತಲುಪಿದೆ. ಈ ಪೈಕಿ 1207 ಪ್ರಕರಣಗಳು ಸಕ್ರಿಯವಾಗಿದೆ. ಮುಂದಿನ ದಿನಗಳಲ್ಲಿ ಸೋಂಕು ಮತ್ತಷ್ಟು ತೀವ್ರ ಸ್ವರೂಪದಲ್ಲಿ ಹರಡುವ ಸಾಧ್ಯತೆ ಇರುವುದರಿಂದ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಬೆಂಗಳೂರು ನಗರದ ಎಲ್ಲಾ ಪಕ್ಷಗಳ ಶಾಸಕರ ಸಭೆಯನ್ನು ಕರೆದಿದ್ದಾರೆ. ಶುಕ್ರವಾರ 12 ಗಂಟೆಗೆ ಶಾಸಕರ ಜೊತೆಗೆ ಚರ್ಚೆ ನಡೆಸಿ ನಗರದಲ್ಲಿ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತಾಗಿ ಅಭಿಪ್ರಾಯ ಪಡೆಯಲಿದ್ದಾರೆ. ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಜಾರಿಗೊಳಿಸಬೇಕಾ ಬೇಡವೋ ಎಂಬ ವಿಚಾರವಾಗಿ ಶಾಸಕರಲ್ಲಿ ಭಿನ್ನಾಭಿಪ್ರಾಯಗಳಿವೆ. ಕೆಲವು ಶಾಸಕರು ಲಾಕ್‌ಡೌನ್ ಅಗತ್ಯ ಎಂದು ಹೇಳುತ್ತಿದ್ದರೆ ಮತ್ತೆ ಕೆಲವರು ಆರ್ಥಿಕ ದೃಷ್ಟಿಕೋನದಿಂದ ಸಂಪೂರ್ಣ ಲಾಕ್‌ಡೌನ್ ಬೇಡ ಎಂಬ ಅಭಿಪ್ರಾಯವನ್ನು ಹೊಂದಿದ್ದಾರೆ. ಮಾಧ್ಯಮವೊಂದರಲ್ಲಿ ಮಾತನಾಡುತ್ತಿದ್ದ ಸಚಿವ ಹಾಗೂ ಯಶವಂತಪುರ ಶಾಸಕರಾದ ಎಸ್‌.ಟಿ ಸೋಮಶೇಖರ್, ಸದ್ಯದ ಪರಿಸ್ಥಿತಿಯಲ್ಲಿ ಕೆಲವು ದಿನಗಳ ಕಾಲ ಕಾದು ನೋಡುವುದು ಒಳಿತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆರ್ಥಿಕ ದೃಷ್ಟಿಯಲ್ಲಿ ಮತ್ತೆ ಲಾಕ್‌ಡೌನ್ ಜಾರಿಗೊಂಡರೆ ಸಮಸ್ಯೆ ಅಧಿಕವಾಗುತ್ತದೆ. ಈ ನಿಟ್ಟಿನಲ್ಲಿ ಪರ್ಯಾಯ ವ್ಯವಸ್ಥೆ ಕೈಗೊಳ್ಳಬೇಕು ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ. “ಲಾಕ್‌ಡೌನ್ ಮಾಡುವುದರಿಂದ ಆರ್ಥಿಕ ಸಮಸ್ಯೆಗೆ ಮತ್ತಷ್ಟು ಬಿಗಡಾಯಿಸಬಹುದು. ಎಲ್ಲೆಲ್ಲಿ ಅನಿವಾರ್ಯತೆ ಇದೆ ಅಲ್ಲಿ ಮಾತ್ರ ಲಾಕ್‌ಡೌನ್ ಮಾಡಬಹುದು. ಸದ್ಯದ ಪರಿಸ್ಥಿತಿಯನ್ನು ಎರಡು ದೃಷ್ಟಿಕೋನದಲ್ಲಿ ನೋಡಬೇಕಾದ ಅಗತ್ಯ ಇದೆ. ಕೆಲವು ಸೂಕ್ಷ್ಮ ಪ್ರದೇಶಗಳನ್ನು ಲಾಕ್‌ಡೌನ್ ಮಾಡಿದರೆ ಒಳ್ಳೆಯದು” ಎನ್ನುತ್ತಾರೆ ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಇನ್ನು ಶಿವಾಜಿನಗರ ಕಾಂಗ್ರೆಸ್ ಶಾಸಕ ರಿಜ್ವಾನ್ ಹರ್ಷದ್ ಅವರ ಪ್ರಕಾರ ಮತ್ತೆ ಲಾಕ್‌ಡೌನ್ ಕೊರೊನಾ ನಿಯಂತ್ರಣಕ್ಕೆ ಪರಿಹಾರವಲ್ಲ. ಲಾಕ್‌ಡೌನ್‌ ಜಾರಿಗೊಳಿಸುವುದರಿಂದ ಸಮಸ್ಯೆ ನಿವಾರಣೆ ಸಾಧ್ಯವಿಲ್ಲ. ಆದರೆ ಪೂರ್ವ ಸಿದ್ಧತೆಗೆ ಸ್ವಲ್ಪ ಕಾಲಾವಕಾಶ ಸಿಗುತ್ತದೆ ಎನ್ನುತ್ತಾರೆ ಅವರು. “100 ದಿನಗಳ ಕಾಲ ಲಾಕ್‌ಡೌನ್ ಜಾರಿಯಲ್ಲಿತ್ತು. ಆ ಅವಧಿಯಲ್ಲಿ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿತ್ತು. ಆದರೆ ಅದರಲ್ಲಿ ಸರ್ಕಾರ ವಿಫಲವಾಗಿದೆ. ವೆಂಟಿಲೇಟರ್, ಆಂಬ್ಯುಲೆನ್ಸ್ ಖರೀದಿ ಮಾಡಿಲ್ಲ. ಖಾಸಗಿ ಆಸ್ಪತ್ರೆಯ ಬಳಕೆ ಕುರಿತಾಗಿಯೂ ನಿರ್ಧಾರ ಕೈಗೊಂಡಿರಲಿಲ್ಲ. ಇದರ ಪರಿಣಾಮ ನಾಲ್ಕು ಸರ್ಕಾರಿ ಆಸ್ಪತ್ರೆ ರೋಗಿಗಳಿಂದ ತುಂಬಿವೆ. ಸಿದ್ದತೆಯ ಕೊರತೆಯ ಪರಿಣಾಮ ಮತ್ತೆ ಲಾಕ್‌ಡೌನ್ ಬೇಡಿಕೆ ಬಂದಿದೆ” ಎಂದು ರಿಜ್ವಾನ್ ಹರ್ಷದ್ ಹೇಳುತ್ತಾರೆ. ಈ ನಿಟ್ಟಿನಲ್ಲಿ ಶುಕ್ರವಾರ ಎಲ್ಲಾ ಪಕ್ಷಗಳ ಬೆಂಗಳೂರು ಶಾಸಕರ ಸಭೆ ಮಹತ್ವ ಪಡೆದುಕೊಂಡಿದೆ. ಸಭೆಯಲ್ಲಿ ವಿ. ಸೋಮಣ್ಣ, ಗೋಪಾಲಯ್ಯ, ಎಸ್‌ಟಿ ಸೋಮಶೇಖರ್, ಮಂಜುನಾಥ್, ಅಖಂಡ ಶ್ರೀನಿವಾಸ್ ಮೂರ್ತಿ, ಎಂ ಕೃಷ್ಣಪ್ಪ, ಕೃಷ್ಣ ಬೈರೇಗೌಡ, ರಿಜ್ವಾನ್ ಹರ್ಷದ್ , ರವಿ ಸುಬ್ರಹ್ಮಣ್ಯ, ಸೌಮ್ಯ ರೆಡ್ಡಿ, ಬೈರತಿ ಸುರೇಶ್, ಸತೀಶ್ ರೆಡ್ಡಿ ಸೇರಿದಂತೆ ಬೆಂಗಳೂರು ಭಾಗದ ಶಾಸಕರು ಭಾಗಿಯಾಗಲಿದ್ದಾರೆ. ಶಾಸಕರ ಅಭಿಪ್ರಾಯಗಳನ್ನು ಪಡೆದುಕೊಂಡು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಒಂದು ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ. ನಗರದಲ್ಲಿ ಮತ್ತೆ ಲಾಕ್‌ಡೌನ್ ಮಾಡಬೇಕೋ ಅಥವಾ ಪರ್ಯಾಯ ವ್ಯವಸ್ಥೆಯನ್ನು ಕೈಗೊಳ್ಳಬೇಕಾ ಎಂಬುವುದು ಮುಂದಿನ ದಿನಗಳಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.


from India & World News in Kannada | VK Polls https://ift.tt/2YwLdCp

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...