ಬೆಂಗಳೂರು: ರಾಜ್ಯದಲ್ಲಿ ರಾಜ್ಯಸಭಾ ಚುನಾವಣೆ ಗರಿಗೆದರುತ್ತಿದೆ. ಈ ನಡುವೆ ಕಾಂಗ್ರೆಸ್ ಪಕ್ಷದಲ್ಲಿ ಪೈಪೋಟಿ ತೀವ್ರಗೊಂಡಿದೆ. ಅದರಲ್ಲೂ ಕಳೆದ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರಿಗಾಗಿ ತುಮಕೂರು ಲೋಕಸಭಾ ಕ್ಷೇತ್ರದದಲ್ಲಿ ಟಿಕೆಟ್ ಕಳೆದುಕೊಂಡ ಮಾಜಿ ಸಂಸದ ಮುದ್ದ ಹನುಮೇಗೌಡ ರಾಜ್ಯಸಭೆಯ ರೇಸ್ನಲ್ಲಿದ್ದಾರೆ. ಕಳೆದ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ವರಿಷ್ಠರು ಕೊಟ್ಟ ಮಾತನ್ನು ಈಡೇರಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ಮುದ್ದ ಹನುಮೇಗೌಡರು ಈಗಾಗಲೇ ಹಿರಿಯ ಮುಖಂಡರ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ದೆಹಲಿಯ ನಾಯಕರಲ್ಲೂ ಫೋನ್ ಮೂಲಕ ಸಂಭಾಷಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬೇಡಿಕೆಯನ್ನು ಪರಿಗಣಿಸುವ ಆಶ್ವಾಸನೆ ದೊರಕಿದೆ ಎಂಬ ಮಾಹಿತಿಯೂ ಇದೆ. ಈ ಕುರಿತಾಗಿ 'ವಿಜಯ ಕರ್ನಾಟಕದ' ಜೊತೆಗೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ಆ ಸಂದರ್ಭದಲ್ಲಿ ಪಕ್ಷದ ಮುಖಂಡರು ಕೊಟ್ಟ ಭರವಸೆಯನ್ನು ಈಡೇರಿಸುತ್ತಾರೆ ಎಂಬ ಭರವಸೆ ಇದೆ ಎಂದರು. "ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ದೆಹಲಿಯ ಮುಖಂಡರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಆದರೆ ಅವರ ಜೊತೆಗೆ ಫೋನ್ನಲ್ಲಿ ಮಾತುಕತೆ ನಡೆಸಿದ್ದೇನೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ಕಳೆದುಕೊಂಡ ನನಗೆ ರಾಜ್ಯಸಭೆಯಲ್ಲಿ ಸ್ಥಾನ ನೀಡುವ ಭರವಸೆಯನ್ನು ಕೊಟ್ಟಿದ್ದಾರೆ. ಪಕ್ಷದ ಹೈಕಮಾಂಡ್ಗೆ ನಾನು ಅದನ್ನು ಮತ್ತೆ ನೆನಪಿಸಿಕೊಳ್ಳುವ ಅವಶ್ಯಕತೆ ಇಲ್ಲ" ಎಂದರು. ಲೋಕಸಭೆಯಲ್ಲಿ ಸಕ್ರಿಯವಾಗಿದ್ದ ನನ್ನನ್ನು ರಾಜ್ಯಸಭೆಗೆ ಆಯ್ಕೆ ಮಾಡುವುದು ಸೂಕ್ತವಾದದ್ದು. ಬದಲಾಗಿ ಪಕ್ಷದಲ್ಲಿ ಇತರ ಸ್ಥಾನಮಾನ ಸರಿಹೊಂದುವುದಿಲ್ಲ. ಹೈಕಮಾಂಡ್ ಅಧಿಕೃತವಾಗಿ ರಾಜ್ಯಸಭಾ ಸ್ಥಾನವನ್ನು ನೀಡುವ ಭರವಸೆಯನ್ನು ಅಂದು ನೀಡಿದ್ದಾರೆ. ಅದನ್ನು ಈಡೇರಿಸುವ ಭರವಸೆ ಇದೆ. ಈ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎಂದರು. ಸದ್ಯಕ್ಕೆ ಅಧಿಕೃತ ಭರವಸೆಯನ್ನು ಯಾರಿಗೂ ಪಕ್ಷದ ವರಿಷ್ಠರು ನೀಡಿಲ್ಲ. ನಮ್ಮ ಬೇಡಿಕೆಯನ್ನು ಪರಿಗಣಿಸಲಾಗುವುದು ಎಂದಿದ್ದಾರೆ. ನಾನು ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ಈ ನಿಟ್ಟಿನಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಭಾವನೆ ಜಿಲ್ಲೆಯ ಜನರಲ್ಲಿ ಇದೆ. ನನಗೆ ಅನ್ಯಾಯವಾಗಿದೆ ಎಂಬ ಅಭಿಪ್ರಾಯ ಪಕ್ಷದ ಕೆಲವು ಮುಖಂಡರಲ್ಲೂ ಇದೆ. ಈ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯಸಭೆಗೆ ತನ್ನ ಆಯ್ಕೆ ಆಗಬಹುದು ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮುದ್ದ ಹನುಮೇಗೌಡರಿಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸ್ಪರ್ಧೆಯ ಹಿನ್ನೆಲೆಯಲ್ಲಿ ತುಮಕೂರು ಕ್ಷೇತ್ರದ ಟಿಕೆಟ್ ನಿರಾಕರಿಸಲಾಗಿತ್ತು. ಹಾಲಿ ಸಂಸದರಾಗಿದ್ದ ಅವರಿಗೆ ಟಿಕೆಟ್ ನಿರಾಕರಣೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿತ್ತು. ಪಕ್ಷದ ನಡೆಯನ್ನು ಖಂಡಿಸಿ ಪಕ್ಷೇತರವಾಗಿ ಮುದ್ದಹನುಮೇಗೌಡರು ಸ್ಪರ್ಧೆಗೆ ಮುಂದಾಗಿದ್ದರು. ಬಳಿಕ ವರಿಷ್ಠರ ಮಧ್ಯಪ್ರವೇಶದ ಹಿನ್ನೆಲೆಯಲ್ಲಿ ನಾಮಪತ್ರ ವಾಪಸ್ ಪಡೆದಿದ್ದರು. ಈ ಸಂದರ್ಭದಲ್ಲಿ ಅವರಿಗೆ ರಾಜ್ಯಸಭೆಗೆ ಅವಕಾಶ ನೀಡಲಾಗುವುದು ಎಂಬ ಭರವಸೆಯನ್ನು ನೀಡಲಾಗಿತ್ತು.
from India & World News in Kannada | VK Polls https://ift.tt/2yYMlVo