ರಾಯಚೂರು: ಕೊರೊನಾ ಆತಂಕದ ಮಧ್ಯೆಯೇ ಇಂದಿನಿಂದ ಆರಂಭವಾಗಿದೆ. ಸರ್ಕಾರವೇನೋ ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದೇವೆ. ಯಾವುದೇ ಆತಂಕವಿಲ್ಲದೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು ಎಂದು ತಿಳಿಸಿತ್ತು. ಆದರೆ ರಾಯಚೂರಿನಲ್ಲಿ ಪರೀಕ್ಷಾ ಕೇಂದ್ರದಲ್ಲಿನ ಅವ್ಯವಸ್ಥೆ ಮಾತ್ರ ವಿದ್ಯಾರ್ಥಿಗಳನ್ನು ಮೊದಲೇ ದಿನವೇ ಆತಂಕಕ್ಕೀಡಾಗುವಂತೆ ಮಾಡಿದೆ. ಜಿಲ್ಲೆಯ ಅನೇಕ ಕಡೆ ಹಾಲ್ ಟಿಕೆಟ್ನಲ್ಲಿ ಪರೀಕ್ಷಾ ಕೇಂದ್ರದ ಹೆಸರು ದಾಖಲಾಗಿದ್ದರೂ ಕೂಡ ಆ ಕೇಂದ್ರಕ್ಕೆ ಬಂದರೆ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಪತ್ತೆಯಾಗಿಲ್ಲ. ಇದರಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ರಾಯಚೂರಿನ ಸರಕಾರಿ ಬಾಲಕ ಮತ್ತು ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಈ ಅವ್ಯವಸ್ಥೆ ಕಂಡು ಬಂದಿದ್ದು, ಇನ್ನೂ ಅನೇಕ ಕಡೆ ಇಂತಹದ್ದೇ ಗೊಂದಲ ಉಂಟಾಗಿದೆ ಎನ್ನಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ತಮ್ಮ ನೋಂದಣಿ ಸಂಖ್ಯೆ ಇಲ್ಲದ್ದರಿಂದ ಆತಂಕಗೊಂಡ ವಿದ್ಯಾರ್ಥಿಗಳು, ಕೂಡಲೇ ವಿವಿಧೆಡೆಯ ಕಾಲೇಜುಗಳಿಗೆ ಹೋಗಿ ಅಲ್ಲಿನ ಸೂಚನಾ ಫಲಕದಲ್ಲಿ ತಮ್ಮ ನೋಂದಣಿ ಸಂಖ್ಯೆ ಮತ್ತು ಪರೀಕ್ಷಾ ಕೇಂದ್ರವನ್ನು ಹುಡುಕುತ್ತಾ ಅಲೆದಾಡಿದ್ದಾರೆ. ಇನ್ನೊಂದೆಡೆ ಬಹುತೇಕ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಕೊರೊನಾ ಸೋಂಕು ಹರಡುವಿಕೆ ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಕೆಲವೆಡೆ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಬಳಿಕವೂ ಪೋಷಕರು ಅಲ್ಲೇ ನಿಂತಿದ್ದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಬಳಿಕ ಪೊಲೀಸರು ಬಂದು ಪರೀಕ್ಷೆ ಮುಗಿದ ಬಳಿಕ ಬರುವಂತೆ ಪೋಷಕರಲ್ಲಿ ವಿನಂತಿಸಿಕೊಂಡಿದ್ದಾರೆ. ರಾಯಚೂರು ಜಿಲ್ಲೆಯಾದ್ಯಂತ ಒಟ್ಟು 77 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 30413 ವಿದ್ಯಾರ್ಥಿಗಳ ನೋಂದಣಿಯಾಗಿದೆ. ಇಂದು ಪರೀಕ್ಷೆಗೆ ಆಗಮಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ತಪಾಸಣೆಗೊಳಿಸಿದ ಬಳಿಕವೇ ಪರೀಕ್ಷಾ ಕೇಂದ್ರದ ಒಳಗೆ ಕಳುಹಿಸಲಾಗಿದೆ.
from India & World News in Kannada | VK Polls https://ift.tt/37XMxkM