ಬೆಂಗಳೂರು: ಸದ್ಯಕ್ಕೆ ಕೊರೊನಾ ಹಾಟ್ಸ್ಪಾಟ್ ಆಗಿರುವ ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲಿ ಕೋವಿಡ್-19 ಸೋಂಕು ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಮಹಾರಾಷ್ಟ್ರದಿಂದ ಬರುವವರಿಗೆ ಸಂಚಾರ ನಿರ್ಬಂಧ ಇದೆ ಎಂದಿದ್ದರೂ ರೈಲಿನ ಮೂಲಕ ಹಾಗೂ ರಸ್ತೆಯ ಮೂಲಕ ಸಾಕಷ್ಟು ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಹೊರರಾಜ್ಯದಿಂದ ಆಗಮಿಸುತ್ತಿರುವ ಪ್ರಯಾಣಿಕರನ್ನು ಕಟ್ಟಿನಿಟ್ಟಿನ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಮುಂಬೈನಿಂದ ರೈಲು ಆಗಮಿಸಿದ್ದು ಈ ಪ್ರಯಾಣಿಕರನ್ನು ನೋಡಲು ಹಾಗೂ ಅವರ ಜೊತೆಗೆ ಮಾತನಾಡಲು ಕುಟುಂಬಸ್ಥರಿಗೂ ಅವಕಾಶವನ್ನು ಅಧಿಕಾರಿಗಳು ನೀಡುತ್ತಿಲ್ಲ. ಈಗಾಗಲೇ ರೈಲು ನಿಲ್ದಾಣಕ್ಕೆ ಬಂದಿರುವ ಪ್ರಯಾಣಿರ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಆಧಾರ್ ಕಾರ್ಡ್ ಸಹಿತ ಇತರ ಎಲ್ಲಾ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮುಂಜಾಗರೂಕಾ ಕ್ರಮವಾಗಿ ಅವರನ್ನು ಸಾಂಸ್ಥಿತ ಕ್ವಾರಂಟೈನ್ನಲ್ಲಿಡುವ ಸಾಧ್ಯತೆ ಇದೆ. ಲಾಕ್ಡೌನ್ ಕಾರಣದಿಂದಾಗಿ ಬಹಳ ದಿನಗಳ ಬಳಿಕ ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬಂದ ತಮ್ಮವರನ್ನು ನೋಡಲು ಅವರ ಕುಟುಂಬಸ್ಥರು ರೈಲು ನಿಲ್ದಾಣಕ್ಕೆ ಆಗಮಿಸಿದ್ದರು. ಆದರೆ ಅವರಿಗೆ ನಿರಾಶೆ ಕಾದಿತ್ತು. ಕೊರೊನಾ ಅಪಾಯದ ಕಾರಣದಿಂದಾಗಿ ಯಾರನ್ನೂ ಅವರ ಕುಟುಂಬಸ್ಥರ ಜೊತೆಗೆ ಮಾತನಾಡಲು ಅಧಿಕಾರಿಗಳು ಅವಕಾಶ ನೀಡಲಿಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ರಾಜ್ಯಕ್ಕೆ ಆಗಮಿಸುತ್ತಿದ್ದು ಸೋಂಕು ಪ್ರಕರಣದಲ್ಲಿ ಹೆಚ್ಚಳವಾಗಲು ಕಾರಣವಾಗಿದೆ. ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 388 ಪ್ರಕರಣಗಳು ಕಂಡುಬಂದಿವೆ. ಸದ್ಯ ರಾಜ್ಯದಲ್ಲಿ ಜೂನ್ 5 ರ ವರೆಗೆ 3796 ಪ್ರಕರಣಗಳು ದೃಢಪಟ್ಟಿವೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಅಪಾಯವಿದೆ.
from India & World News in Kannada | VK Polls https://ift.tt/2zMFChZ