ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಭಯದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸಜ್ಜಾಗಿದ್ದಾರೆ. 8,48,203 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಆತಂಕದ ನಡುವೆಯೂ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶುಭ ಹಾರೈಸಿದ್ದಾರೆ. ಗುರುವಾರ ಬೆಳಗ್ಗೆ ಫೇಸ್ಬುಕ್ ಲೈವ್ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಧೈರ್ಯ ತುಂಬಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಅತ್ಯಮೂಲ್ಯವಾದ ಈ ಪರೀಕ್ಷೆಯನ್ನು ನೀವು ನಿರ್ಭೀತಿಯಿಂದ. ಆತ್ಮವಿಶ್ವಾಸದಿಂದ ಎದುರಿಸಿ ಎಂದರು. ವಿದ್ಯಾರ್ಥಿಗಳಿಗೆ ಹಾಗೂ ಪೋಷಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ನಿಮಗೆ ಅಗತ್ಯವಾದ ಎಲ್ಲ ಸುರಕ್ಷತಾ ಕಾರ್ಯಕ್ರಮಗಳನ್ನು ನಾವು ಕೈಗೊಂಡಿದ್ದೇವೆ.ಇಡೀ ರಾಜ್ಯದ ಜನತೆ ನಿಮ್ಮೊಂದಿಗೆ ಇದ್ದಾರೆ. ಅವರ ಆಶೀರ್ವಾದ ನಿಮ್ಮ ಜೊತೆ ಇದೆ ಎಂದು ಶುಭಹಾರೈಸಿದ್ದಾರೆ. ಕೊರೊನಾ ಕಾರಣದಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಬಾರದು ಎಂದು ಹಲವರು ವಿರೋಧ ವ್ಯಕ್ತಪಡಿಸಿದ್ದರು. ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಕೂಡಾ ಸರ್ಕಾರದ ನಡೆಯನ್ನು ವಿರೋಧಿಸಿದ್ದರು. ಹೀಗಿದ್ದರೂ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಗೊಂಡಿದೆ. ಜೂನ್ 25 ರಂದು ಆರಂಭವಾಗಿರುವ ಪರೀಕ್ಷೆ ಜುಲೈ ನಾಲ್ಕರ ವರೆಗೆ ನಡೆಯಲಿದೆ. ರಾಜ್ಯಾದ್ಯಂತ 3,209 ಪರೀಕ್ಷಾ ಕೇಂದ್ರಗಳಿದ್ದು 50, 787 ಕೊಠಡಿ ಮೇಲ್ವಿಚಾರಕರು ಇದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು 7,115 ಥರ್ಮಲ್ ಸ್ಕಾನರ್ ಹಾಗೂ 5,755 ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇನ್ನು ಕರ್ನಾಟಕದಲ್ಲಿ ಓದುತ್ತಿರುವ ಕೇರಳ ರಾಜ್ಯದ ಗಡಿಗ್ರಾಮಗಳಿಂದ 367 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕುಳಿತಿದ್ದಾರೆ. ಎಲ್ಲಾ 367 ಮಕ್ಕಳೂ ಪರೀಕ್ಷೆಗೆ ಹಾಜರಾಗಿದ್ದಾರೆ. ಅವರನ್ನೆಲ್ಲಾ ಸುರಕ್ಷಿತವಾಗಿ ಮಂಗಳೂರಿನ ತಲಪಾಡಿ ಚೆಕ್ ಪೋಸ್ಟ್ ನಿಂದ ಬಸ್ ನಲ್ಲಿ ಕರೆತರಲಾಗಿದೆ. ಈ ವಿಚಾರವನ್ನು ಸುರೇಶ್ ಕುಮಾರ್ ತಮ್ಮ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ.
from India & World News in Kannada | VK Polls https://ift.tt/3hZZ2RD