ಗಡಿ ಆಳ್ವಿಕೆಯ ಪರ್ವ: ಸುವರ್ಣ ಸೌಧಕ್ಕೆ ಸರ್ಕಾರಿ ಕಚೇರಿ ಸ್ಥಳಾಂತಕ್ಕೆ ಬಿಎಸ್‌ವೈ ಸೂಚನೆ!

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಲವು ಸರ್ಕಾರಿ ಕಚೇರಿಗಳನ್ನು ಬೆಂಗಳೂರಿನ ವಿಧಾನಸೌಧದಿಂದ ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಂದಿನ ಒಂದು ತಿಂಗಳ ಅವಧಿಯಲ್ಲಿ ಕೆಲವು ಪ್ರಮುಖ ಸರ್ಕಾರಿ ಕಚೇರಿಗಳನನು ಸುವರ್ಣ ಸೌಧಕ್ಕೆ ವರ್ಗಾಯಿಸುವಂತೆ ಅಧಿಕಾರಿಗಳಿಗೆ ಬಿಎಸ್‌ವೈ ಸೂಚಿಸಿದರು. ಬಿಎಸ್‌ವೈ ನೇತೃತ್ವದಲ್ಲಿ ಇಂದು ನಡೆದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಭೆಯಲ್ಲಿ ಅಧಿಕಾರಿಗಳಿಗೆ ಈ ಸೂಚನೆ ನೀಡಲಾಯಿತು. ಅಲ್ಲದೇ ಮುಂದಿನ ಸಭೆಯಲ್ಲಿ ತಾವು ಸೂಚಿಸಿದ ಇಲಾಖೆಗಳು ಸುವರ್ಣ ಸೌಧದಿಂದ ಕೆಲಸ ನಿರ್ವಹಿಸುವುದನ್ನು ಪರಿಶೀಲಿಸುವುದಾಗಿಯೂ ಸಿಎಂ ಸ್ಪಷ್ಟಪಡಿಸಿದ್ದಾರೆ. ಸುವರ್ಣ ಸೌಧಕ್ಕೆ ಕೆಲವು ಸರ್ಕಾರಿ ಕಚೇರಿಗಳನ್ನು ಸ್ಥಳಾಂತರಿಸಿ ಈ ಮೂಲಕ ಗಡಿ ಭಾಗದಲ್ಲಿ ಸರ್ಕಾರದ ಉಪಸ್ಥಿತಿಯನ್ನು ಮತ್ತಷ್ಟು ಹೆಚ್ಚಿಸುವುದು ಬಿಎಸ್‌ವೈ ಯೋಜನೆಯಾಗಿದೆ. ಸುವರ್ಣ ಸೌಧದಿಂದ ಕೆಲವು ಪ್ರಮುಖ ಸರ್ಕಾರಿ ಕಚೇರಿಗಳು ಕೆಲಸ ನಿರ್ವಹಿಸುವುದರಿಂದ ಜನರಿಗೆ ಅನುಕೂಲವಾಗುವುದು. ಈ ಹಿನ್ನೆಲೆಯಲ್ಲಿ ಬಿಎಸ್‌ವೈ ಈ ಪ್ರಮುಖ ನಿರ್ಣಯ ಕೈಗೊಂಡಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಬಿಎಸ್‌ವೈ ನೇತೃತ್ವದ ಇಂದಿನ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಇಂತಿವೆ.
  • ಪ್ರವಾಹದಿಂದ ಹಾಳಾದ ರಸ್ತೆಗಳು ಹಾಗೂ ಮೇಲ್ಸೇತುವೆಗಳ ದುರಸ್ತಿ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸುವಂತೆ ಸೂಚನೆ.
  • ಇದಕ್ಕಾಗಿ 500 ಕೋಟಿ ರೂ. ಮೀಸಲಿರಿಸಲಾಗಿದ್ದು, ಈಗಾಗಲೇ ಕಾಮಗಾರಿ ಆರಂಭವಾಗಿದೆ.
  • ಇಂಜಿನಿಯರ್ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವುದರಿಂದ ನಿರುದ್ಯೋಗಿ ಇಂಜಿನಿಯರ್‌ಗಳನ್ನು ಟ್ರೈನಿಗಳೆಂದು ನೇಮಕ ಮಾಡಿಕೊಳ್ಳುವಂತೆ ಸಿಎಂ ಸೂಚನೆ.
  • ಶಿವಮೊಗ್ಗ ನಗರದ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸಲು ಸೂಚನೆ.
  • ವಿಜಯಪುರ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಜಮೀನು ಗುರುತಿಸುವ ಪ್ರಕ್ರಿಯೆಯನ್ನು ಪುನರ್ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಆದೇಶ.
  • ರಾಜ್ಯದ 1650 ಕಿ.ಮೀ ಉದ್ದದ ಗ್ರಾಮೀಣ ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಹಾಗೂ 10,110 ಕಿ.ಮೀ ಜಿಲ್ಲಾ ಮುಖ್ಯ ರಸ್ತೆಯನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ತೀರ್ಮಾನ.
  • ಕೆರೆ, ಹಳ್ಳ ಹಾಗೂ ನದಿಪಾತ್ರದ ಮಣ್ಣನ್ನು ರಸ್ತೆ ಕಾಮಾಗಾರಿಗಳಿಗೆ ಬಳಸಿಕೊಳ್ಳುವಂತೆ ಸೂಚನೆ.
  • ರಾಜ್ಯದಲ್ಲಿ ಒಟ್ಟು 4813 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳನ್ನು 30, 675 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಈ ಕುರಿತಾದ ಪ್ರಗತಿ ವರದಿ.
ಹೀಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವದ ನೀಡಲಾಗಿದೆ.ಇಂದಿನ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


from India & World News in Kannada | VK Polls https://ift.tt/2XOyuJC

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...