ಮಂಡ್ಯ: ರಾಜ್ಯದೆಲ್ಲೆಡೆ ಕೊರೊನಾ ಪಾಸಿಟಿವ್ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಗುತ್ತಿರುವ ಹೊತ್ತಲ್ಲೇ ಇದೀಗ ಮತ್ತೊಬ್ಬ ಸಂಚಾರಿ ಕಾಣಿಸಿಕೊಂಡಿದೆ. ಮಂಡ್ಯ ಜಿಲ್ಲೆಯ ಸಂಚಾರಿ ಪೊಲೀಸ್ ಠಾಣಾ ಸಿಬ್ಬಂದಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಈ ಹಿನ್ನೆಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಯನ್ನು ಕ್ಯಾರೆಂಟೈನ್ಗೆ ಒಳಪಡಿಸಿದ್ದಾರೆ. ಅಲ್ಲದೇ ಮದ್ದೂರು ಪಟ್ಟಣದ ಪೊಲೀಸ್ ಠಾಣೆ ಮತ್ತು ಸಂಚಾರಿ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಿ ಎಲ್ಲಾ ಸಿಬ್ಬಂದಿಯನ್ನು ಕ್ವಾರೆಂಟೈನ್ ಮಾಡಲು ಎಸ್ಪಿ ಕೆ.ಪರಶುರಾಂ ಆದೇಶಿಸಿದ್ದಾರೆ. ಸಂಚಾರಿ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡ ಬೆನ್ನಲ್ಲೇ ಅವರ ಜೊತೆ ಕೆಲಸ ಮಾಡುತ್ತಿದ್ದ ಇತರ ಪೊಲೀಸ್ ಸಿಬ್ಬಂದಿಗೂ ಆತಂಕ ಎದುರಾಗಿದ್ದು, ಆ ಪೊಲೀಸ್ ಸಿಬ್ಬಂದಿ ಮದ್ದೂರಿನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹೀಗಾಗಿ ಪೊಲೀಸ್ ಸಿಬ್ಬಂದಿಯ ಸಂಪರ್ಕದಲ್ಲಿದ್ದ ಮದ್ದೂರು ನ್ಯಾಯಾಲಯದ ನ್ಯಾಯಾಧೀಶರಿಗೂ ಕೊರೊನಾ ಆತಂಕ ಎದುರಾಗಿದೆ. ಮದ್ದೂರಿನ ಪೊಲೀಸ್ ಠಾಣೆ ಮತ್ತು ಸಂಚಾರಿ ಪೊಲೀಸ್ ಠಾಣೆ ಸೀಲ್ಡೌನ್ ಆದ ಪರಿಣಾಮ ನಾಳೆಯಿಂದ ಬೇರೆ ಕಡೆ ಎರಡೂ ಪೊಲೀಸ್ ಠಾಣೆಗಳು ಕರ್ತವ್ಯ ನಿರ್ವಹಿಸಲಿದ್ದು, ಈಗಾಗಲೇ ಸ್ಥಳಕ್ಕೆ ಎಸ್ಪಿ ಕೆ.ಪರಶುರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿರೋದು ಇದೇ ಮೊದಲೇನಲ್ಲ. ಈ ಹಿಂದೆಯೂ ರಾಜ್ಯದ ವಿವಿಧ ಪೊಲೀಸ್ ಠಾಣೆಗಳ ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿತ್ತು. ಆಗಲೂ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಿ ಸಿಬ್ಬಂದಿಯನ್ನು ಕ್ವಾರೆಂಟೈನ್ಗೆ ಕಳುಹಿಸಲಾಗಿತ್ತು. ಇದೀಗ ಮದ್ದೂರು ಠಾಣೆಯ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರೋದು ಅಲ್ಲಿನ ಸಿಬ್ಬಂದಿಗೆ ಮಾತ್ರವಲ್ಲದೇ ಅವರ ಜೊತೆ ಸಂಪರ್ಕದಲ್ಲಿದ್ದ ಎಲ್ಲರಲ್ಲೂ ಭಯ ಆತಂಕ ಸೃಷ್ಟಿಸುವಂತೆ ಮಾಡಿದೆ.
from India & World News in Kannada | VK Polls https://ift.tt/2NFjiu1