ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಗರಣದ ಆರೋಪದ ಸುದ್ದಿ ಭಾರೀ ಸದ್ದು ಮಾಡುತ್ತಿರುವ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ಸಾಕಷ್ಟು ಕುತೂಹಲ ಕೆರಳಿಸಿದೆ. ಗುರುವಾರ ಬೆಳಗ್ಗೆ 11.30 ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಇಬ್ಬರು ಮುಖಂಡರ ಜಂಟಿ ಪತ್ರಿಕಾಗೋಷ್ಠಿ ನಡೆಯಲಿದೆ. ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಕೋವಿಡ್ ವೈದ್ಯಕೀಯ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಲೆಕ್ಕಕೊಡಿ ಅಭಿಯಾನ ನಡೆಸುತ್ತಿದೆ. ಕೋವಿಡ್ ಉಪಕರಣಗಳ ಖರೀದಿಯಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯ ಮೂಲಕ ಆರೋಪ ಮಾಡಿದ್ದರು. ಆದರೆ ಈ ಆರೋಪವನ್ನು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ನಿರಾಕರಣೆ ಮಾಡಿದ್ದಾರೆ. ಕೋವಿಡ್ ಉಪಕರಣಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಕೆಲವೊಂದು ದಾಖಲೆಗಳನ್ನು ತೋರಿಸಿ ಸಮರ್ಥಿಸಿಕೊಂಡಿದ್ದರು. ಇದರಿಂದ ತೃಪ್ತರಾಗದ ಕಾಂಗ್ರೆಸ್ ಮುಖಂಡರು ಮತ್ತಷ್ಟು ದಾಖಲೆಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಗುರುವಾರ ನಡೆಯಲಿರುವ ಜಂಟಿ ಪತ್ರಿಕಾಗೋಷ್ಠಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
from India & World News in Kannada | VK Polls https://ift.tt/2D1Yefa