ಹೊಸದಿಲ್ಲಿ: ನೂತನ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿರಿಯ ರಾಜಕಾರಣಿ, ಕಾಂಗ್ರೆಸ್ ಮುಖಂಡ ಅವರು ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶದ 20 ರಾಜ್ಯಗಳಿಂದ ನೂತನವಾಗಿ ಆಯ್ಕೆಯಾಗಿರುವ ಒಟ್ಟು 61 ಮಂದಿ ರಾಜ್ಯ ಸಭಾ ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದ್ದು, ಕರ್ನಾಟಕದಿಂದ ಆಯ್ಕೆಯಾಗಿರುವ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರು ಕನ್ನಡಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ತಮ್ಮ ಕನ್ನಡದ ಅಸ್ಮಿತೆಯನ್ನು ಪ್ರತಿನಿಧಿಸಿದರು. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಇದೇ ಮೊದಲ ಬಾರಿಗೆ ಸ್ಪೀಕರ್ ಛೇಂಬರ್ನಲ್ಲಿ ರಾಜ್ಯಸಭೆಯ ನೂತನ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ನೂತನ ಸದಸ್ಯರಿಗೆ ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಧ್ಯಕ್ಷರೂ ಆಗಿರುವ ವೆಂಕಯ್ಯ ನಾಯ್ಡು ಪ್ರಮಾಣ ವಚನ ಬೋಧಿಸಿದ್ದಾರೆ. ಅಲ್ಲದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾದ ಅನಿವಾರ್ಯತೆಯಿಂದ ರಾಜ್ಯಸಭಾ ಸದಸ್ಯರ ಜೊತೆ ಓರ್ವ ಅತಿಥಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿಯಿಂದ ಸ್ಪರ್ಧಿಸಿದ್ದ ಉಮೇಶ್ ಜಾಧವ್ ವಿರುದ್ಧ ಸೋಲನುಭವಿಸಿದ್ದರು. ಮಲ್ಲಿಕಾರ್ಜುನ ಖರ್ಗೆ ಸೋಲು ದೆಹಲಿ ರಾಜಕಾರಣದಲ್ಲಿ ಕಾಂಗ್ರೆಸ್ಗೆ ಬಹುದೊಡ್ಡ ಹೊಡೆತವಾಗಿ ಪರಿಣಮಿಸಿತ್ತು. ಹೀಗಾಗಿ ಖರ್ಗೆ ಅವರನ್ನು ಮತ್ತೆ ದೆಹಲಿ ರಾಜಕಾರಣಕ್ಕೆ ಕರೆತರಬೇಕೆಂದು ಉದ್ದೇಶಿಸಿದ್ದ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸಭಾ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ಮುಖಂಡರ ಅಭಿಪ್ರಾಯವನ್ನೂ ಪಡೆಯದೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿತ್ತು. ಹೈಕಮಾಂಡ್ ಆಯ್ಕೆಗೆ ರಾಜ್ಯ ಕಾಂಗ್ರೆಸ್ ಕೂಡ ಸಮ್ಮತಿ ನೀಡಿತ್ತು. ನಿನ್ನೆಯಷ್ಟೇ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾನ ವಚನ ಸ್ವೀಕರಿಸಿದ ಬಳಿಕ ಟ್ವೀಟ್ ಮಾಡಿದ್ದು, ' ರಾಜ್ಯಸಭಾ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಿದ ಈ ಸಂಧರ್ಭದಲ್ಲಿ ರಾಜ್ಯದ ಜನತೆಗೆ, ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ, ಶ್ರೀ ರಾಹುಲ್ ಗಾಂಧಿ ಹಾಗೂ ರಾಜ್ಯದ ಮುಖಂಡರಿಗೆ ಧನ್ಯವಾದ ತಿಳಿಸಲು ಬಯಸುತ್ತೇನೆ. ರಾಜ್ಯದ ಶ್ರೇಯೋಭಿವೃದ್ಧಿಗಾಗಿ ನನ್ನ ಸಕಲ ಪ್ರಯತ್ನಗಳಿಗೆ ನಿಮ್ಮ ಆಶೀರ್ವಾದ ಹಾಗೂ ಸಹಕಾರ ಇರಲಿ ಎಂದು ಇಚ್ಚಿಸುತ್ತೇನೆ.' ಎಂದು ಟ್ವೀಟ್ ಮಾಡಿದ್ದಾರೆ.
from India & World News in Kannada | VK Polls https://ift.tt/39iFqEa