ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿ ಒಂದು ವರ್ಷವಾಗುತ್ತಿದೆ. ಇದೇ ಸಂದರ್ಭದಲ್ಲಿ ಮತ್ತೆ ದೋಸ್ತಿ ಸಹವಾಸ ಬೇಡ ಎಂದಿರುವ ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಖಡಕ್ ಆಗಿಯೇ ಉತ್ತರಿಸಿದ್ದಾರೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಮಾತನಾಡಿದ್ದ ದಿನೇಶ್ ಗುಂಡೂರಾವ್ “ಮತ್ತೆ ದೋಸ್ತಿ ಸಹವಾಸ ಬೇಡ. ಪಕ್ಷ ಏಕಾಂಗಿಯಾಗಿ ಚುನಾವಣೆ ಎದುರಿಸೋಣ” ಎಂದಿದ್ದರು. ಈ ಮೂಲಕ ದೋಸ್ತಿ ಸಹವಾಸಕ್ಕೆ ಕೈ ಹಾಕದಂತೆ ಪರೋಕ್ಷವಾಗಿ ಡಿಕೆಶಿಗೆ ಸಿದ್ದರಾಮಯ್ಯ ಬಣ ನೀಡಿದ ಸೂಚನೆಯಾಗಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಇದೇ ರೀತಿಯ ಹೇಳಿಕೆಯನ್ನು ನೀಡುವ ಮೂಲಕ ಮೈತ್ರಿ ವಿರುದ್ಧವಾಗಿ ಮಾತನಾಡಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧೆ ನಡೆಸಿದ್ದರೆ ಎಂಟತ್ತು ಸ್ಥಾನಗಳನ್ನು ಗೆಲ್ಲುತ್ತಿದ್ದೆವು ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದರು. ಕಾಂಗ್ರೆಸ್ ನಾಯಕರ ಈ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದವು. ಆದರೆ ಈ ಕುರಿತಾಗಿ ಕುಮಾರಸ್ವಾಮಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿರಲಿಲ್ಲ. ಆದರೆ ಇದೀಗ ಕಾರ್ಯಕರ್ತರಿಗೆ ಬರೆದಿರುವ ಸುದೀರ್ಘ ಪತ್ರದಲ್ಲಿ ‘ಮೈತ್ರಿ ಅನ್ಯಾಯ’ದ ಕುರಿತಾಗಿ ಮನದಾಳದ ಮಾತನ್ನು ತೆರೆದಿಟ್ಟಿದ್ದಾರೆ. ಬಹುಮತವಿಲ್ಲದ ಸಂದಿಗ್ದ ಪರಿಸ್ಥಿತಿಯಲ್ಲಿ ರಚನೆಯಾದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಲು ಬಿಜೆಪಿ ಜೊತೆಗೆ ರಾಜ್ಯ ಕಾಂಗ್ರೆಸ್ ನಾಯಕರ ಒಂದು ವರ್ಗ ನಾನು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಅಸಹನೆಯ ಕೆಂಡದುಂಡೆ ಉಗುಳುತ್ತಿತ್ತು ಎಂದಿದ್ದಾರೆ. ಅಲ್ಲದೆ ಜೆಡಿಎಸ್ ಪಕ್ಷವನ್ನು ವಿಭಜಿಸುವ ಹಾಗೂ ನನ್ನ ಸರ್ಕಾರವನ್ನು ಕೆಡವಲು ರಹಸ್ಯ ಕಾರ್ಯಸೂಚಿಯ ಒಳ ತಂತ್ರಗಳಿಗೆ ಮೊರೆಹೋಗಿದ್ದು ಇನ್ನು ಹಚ್ಚಹಸಿರಾಗಿದೆ ಎಂದು ಉಲ್ಲೇಖಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಅವಧಿಯ ಯೋಜನೆಗಳನ್ನು ಮುಂದುವರಿಸಿಕೊಂಡು ಬಂದರೂ ತೃಪ್ತಿಗೊಳ್ಳದೆ ಮೈತ್ರಿ ಕೆಡವಲು ಲೋಕಸಭಾ ಚುನಾವಣೆ ಮುಗಿಯಲಿ, ಅಲ್ಲಿಯವರಿಗೆ ತಡೆಯಿರಿ ಎಂಬ 'ಸಿದ್ಧೌಷಧ' ಮಂತ್ರ ಜಪಿಸುತ್ತಲೇ ಕಾಂಗ್ರೆಸ್ಸಿಗರು ಬಂದರು. ಅದು ಜಗಜ್ಜಾಹೀರಾಯಿತು ಎಂದಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ನನ್ನ ಸರ್ಕಾರ ತೆಗೆಯುವ ವಿಷಯದಲ್ಲಿ ಎಷ್ಟೊಂದು ಒಳ ಮತ್ತು ಕುಟಿಲ ತಂತ್ರಗಳ ಮೊರೆಹೋದರು ಎಂಬುದನ್ನು ಆ ದೊಡ್ಡ ನಾಯಕರೇ ಆತ್ಮಾವಲೋಕನ ಮಾಡಿಕೊಳ್ಳಲಿ. ಕಾಂಗ್ರೆಸ್ ಜೊತೆಗೆ ಮೈತ್ರಿಗೆ ಜೆಡಿಎಸ್ ಎಂದೂ ಮುಂದಾಗಿರಲಿಲ್ಲ. ಮುಂದೆಯೂ ಕೂಡ ಮೈತ್ರಿಗೆ ನಾವು ಹಪಾಹಪಿಸುತ್ತಿಲ್ಲ ಎಂದು ಹೇಳುವ ಮೂಲಕ ಕೈ ನಾಯಕರಿಗೆ ತಿರುಗೇಟು ನೀಡಿದ್ದಾರೆ. ನಾನು ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿರುವುದು ಒಂದು ವರ್ಗದ ನಾಯಕರಿಗೆ ಅಪಥ್ಯವಾಗಿತ್ತು. ಪ್ರಮಾಣವಚನ ಸ್ವೀಕಾರ ಸ್ವೀಕಾರಕ್ಕೆ ದೇಶದ 24 ರಾಜ್ಯಗಳ ಪ್ರಮುಖ ನಾಯಕರು ಹಾಗೂ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದು ಕೂಡ ಕೆಲ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಕಾರಣವಾಗಿತ್ತು. ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರೆ ಸಾಕು ಎಂದು ಸಲಹೆ ಕೂಡ ಕೊಟ್ಟಿದ್ದರು. ಬಿಜೆಪಿ ವಿರುದ್ಧ ದೇಶಕ್ಕೆ ಒಂದು ಸಂದೇಶ ರವಾನಿಸುವ ಉದ್ದೇಶದಿಂದ ವಿಧಾನಸೌಧದ ಎದುರು ಐತಿಹಾಸಿಕ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ಬಣದ ವಿರುದ್ಧ ಕಿಡಿಕಾರಿದ್ದಾರೆ. ದೋಸ್ತಿ ಸರ್ಕಾರ ಪತನದ ಬಳಿಕ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತಕ್ಕ ಮಟ್ಟಿಗೆ ತಣ್ಣಗಾಗಿತ್ತು. ಇದೀಗ ದೋಸ್ತಿ ಪತನಕ್ಕೆ ಒಂದು ವರ್ಷ ಆಗುತ್ತಿದ್ದಂತೆ ಈ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.
from India & World News in Kannada | VK Polls https://ift.tt/30OHr7B