ಬೆಂಗಳೂರು: ಆಯುಷ್ ಇಲಾಖೆ ಆಯೋಜಿಸಿದ್ದ ವರ್ಚುವಲ್ ತರಬೇತಿಯಲ್ಲಿ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕೊಟೆಚಾ 'ಹಿಂದಿ ಮಾತನಾಡಲು ಆಗದವರು ತರಬೇತಿಯಿಂದ ಹೊರನಡೆಯಬಹುದು ಎಂದು ಸೂಚಿಸಿದ್ದ ವಿವಾದಕ್ಕೆ ಕಾರಣವಾಗಿದೆ. ಇಲಾಖೆಯ ಕಾರ್ಯದರ್ಶಿಯ ನಡೆಗೆ ಮಾಜಿ ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್ ಮಾಡಿದ ಅವರು ನನಗೆ ಚೆನ್ನಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ, ಎಂದು ಹೇಳಿರುವುದು ತಿಳಿಯಿತು. ಇದೇನು ಇಂಗ್ಲಿಷ್ ಬಾರದೆಂಬ ವಿನಂತಿಯೋ, ಹಿಂದಿ ಹೇರಬೇಕು ಎಂಬ ನಾಚಿಕೆ ಇಲ್ಲದ ಉತ್ಸಾಹವೋ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಸಂವಿಧಾನ ಬದ್ಧ ‘ಒಕ್ಕೂಟ ವ್ಯವಸ್ಥೆ’ ಎಂಬುದು ಈ ದೇಶದ ಒಗ್ಗಟ್ಟಿನ ಮಂತ್ರ. ಇಲ್ಲಿನ ಪ್ರತಿ ಭಾಷೆಗಳೂ ಒಕ್ಕೂಟ ವ್ಯವಸ್ಥೆಯ ಭಾಗ. ಹೀಗಿರುವಾಗ, ಹಿಂದಿ ಮಾತನಾಡಲು ಬಾರದ ಕಾರಣಕ್ಕೆ ತರಬೇತಿ ಕಾರ್ಯಕ್ರಮದಿಂದ ಹೊರ ಹೋಗಿ ಎಂಬುದು ಒಕ್ಕೂಟ ವ್ಯಸ್ಥೆಯ ಉಲ್ಲಂಘನೆಯಲ್ಲವೇ? ಸಂವಿಧಾನ ವಿರೋಧಿ ನಡೆಯಲ್ಲವೇ? ಎಂದು ಕಿಡಿಕಾರಿದ್ದಾರೆ. ಹಿಂದಿ ಬಾರದೆಂಬ ಕಾರಣಕ್ಕೆ ಕನ್ನಡಿಗರೂ ಸೇರಿದಂತೆ ಮಿಕ್ಕೆಲ್ಲ ಭಾಷೆಗಳ ಜನ ಈ ದೇಶದಲ್ಲಿ ಇನ್ನೆಷ್ಟು ತ್ಯಾಗ ಮಾಡಬೇಕು? ಹಿಂದಿ ಶ್ರೇಷ್ಠತೆಯ ಗೀಳಿನಲ್ಲಿರುವ ಆಯುಷ್ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕೊಟೆಚಾ ಅವರ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳ ಬೇಕು. ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
from India & World News in Kannada | VK Polls https://ift.tt/2Es7VUG