ಬೆಂಗಳೂರು: ಭಾನುವಾರ ರಾಜ್ಯ ಪದಾಧಿಕಾರಿಗಳ ಮಹತ್ವದ ಸಭೆ ನಡೆಯಲಿದೆ. ರಾಷ್ಟ್ರೀಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ನಾಯಕತ್ವ ಬದಲಾವಣೆಯ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ತಂಡ ರಚನೆಯಾದ ನಂತರದಲ್ಲಿ ಮೊದಲ ಸಭೆ ಇದಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ನೂತನ ಪದಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಿದ್ದಾರೆ. ರಾಜ್ಯದಲ್ಲಿ ಪಕ್ಷ ಸಂಘಟನೆ ಹಾಗೂ ಮುಂದಿನ ಕಾರ್ಯಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಕೋವಿಡ್ ನಿರ್ವಹಣೆ ಸೇರಿದಂತೆ ಆಡಳಿತ ಪಕ್ಷ ಬಿಜೆಪಿ ಬಗ್ಗೆ ಇರುವ ಜನರ ಅಭಿಪ್ರಾಯದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ನಡೆಗಳೇನು ಎಂಬ ಕುರಿತಾಗಿಯೂ ಚರ್ಚೆ ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ಕೆಲವೊಂದು ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಪದಾಧಿಕಾರಿಗಳಿಗೆ ರಾಜ್ಯ ನಾಯಕರು ಕೆಲವೊಂದು ಟಾಸ್ಕ್ಗಳನ್ನು ನೀಡಲಿದ್ದಾರೆ ಎಂಬ ಮಾಹಿತಿಯೂ ಇದೆ. ನಾಯಕತ್ವ ಬದಲಾವಣೆ ಚರ್ಚೆ? ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯೂ ಮುನ್ನೆಲೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಭಾನುವಾರದ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಈಗಾಗಲೇ ಬಿಎಲ್ ಸಂತೋಷ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಂಪುಟ ವಿಸ್ತರಣೆಯ ಚರ್ಚೆಯೂ ಈ ಮಾತುಕತೆಯ ಸಂದರ್ಭದಲ್ಲಿ ನಡೆದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇನ್ನು ಪದಾಧಿಕಾರಿಗಳ ಸಭೆಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯೂ ನಡೆಯುವ ಸಾಧ್ಯತೆ ಇದೆ. ಬಿಎಲ್ ಸಂತೋಷ್ ಹಾಗೂ ನಳಿನ್ ಕುಮಾರ್ ಕಟೀಲ್ ಅವರು ಪದಾಧಿಕಾರಿಗಳ ಅಭಿಪ್ರಾಯವನ್ನು ಸಂಗ್ರಹ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿಯೂ ಬಿಜೆಪಿ ಮೂಲಗಳಿಂದ ಲಭ್ಯವಾಗುತ್ತಿದೆ.
from India & World News in Kannada | VK Polls https://ift.tt/2YsCzEz