ಬೆಂಗಳೂರು: ಮುಖ್ಯಮಂತ್ರಿ ಅವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸಾಕಷ್ಟು ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡಿದ್ದರೂ ಬಿಎಸ್ವೈಗೆ ಸೋಂಕು ಹರಡಿದ ಮೂಲ ಯಾವುದು ಎಂಬುವುದನ್ನು ಪತ್ತೆ ಹಚ್ಚುವುದು ಅಧಿಕಾರಿಗಳಿಗೂ ಸವಾಲಿನ ಸಂಗತಿಯಾಗಿದೆ. ಕೋವಿಡ್ ತೀವ್ರವಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಕಚೇರಿ ಹಾಗೂ ನಿವಾಸದಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಸಾರ್ವಜನಿಕರಿಗೆ ಸಿಎಂ ಅವರನ್ನು ಭೇಟಿಯಾಗಲು ಅವಕಾಶ ನಿರಾಕರಿಸಲಾಗಿತ್ತು. ಆಪ್ತ ಸಿಬ್ಬಂದಿ, ಅಧಿಕಾರಿಗಳು ಹಾಗೂ ಸಚಿವರಿಗಷ್ಟೇ ಸಿಎಂ ಭೇಟಿಗೆ ಅವಕಾಶ ನೀಡಲಾಗಿತ್ತು. ಹಿರಿಯ ಅಧಿಕಾರಿಗಳ ಜೊತೆಗೆ ಸಭೆಗಳನ್ನು ನಡೆಸುವ ಸಂದರ್ಭದಲ್ಲೂ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿತ್ತು. ಬಿಎಸ್ವೈ ಸದಾ ಮಾಸ್ಕ್ ಧರಿಸುತ್ತಿದ್ದರು. ಕೋವಿಡ್ ಮುನ್ನೆಚ್ಚರಿಕೆಯ ಕ್ರಮವಾಗಿ ಎಲ್ಲಾ ಕಾರ್ಯಕ್ರಮಗಳನ್ನು ಆನ್ಲೈನ್ ಮೂಲಕವೇ ನಡೆಸುತ್ತಿದ್ದರು. ಜಿಲ್ಲಾ ಪ್ರವಾಸಗಳನ್ನು ಮೊಟಕುಗೊಳಿಸಲಾಗಿತ್ತು. ಹೀಗಿದ್ದರೂ ಅವರಿಗೆ ಕೋವಿಡ್ ಕಾಣಿಸಿಕೊಂಡಿದೆ. ಇದು ಯಾವ ಮೂಲದಿಂದ ಬಂದಿದೆ ಎಂಬ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಇದೀಗ ತನಿಖೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಎಸ್ವೈ ಇತ್ತೀಚೆಗೆ ಕೆಲವೊಂದು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಆದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಾಧನಾ ಸಮಾವೇಶ ಕಾರ್ಯಕ್ರಮ ನಡೆದಿತ್ತು. ಆದರೆ ಈ ಸಂದರ್ಭದಲ್ಲೂ ವೇದಿಕೆಯಲ್ಲಿ ಸಿಎಂ ಒಬ್ಬರೇ ಉಪಸ್ಥಿತರಿದ್ದರು. ಶುಕ್ರವಾರ ಬಿಎಸ್ವೈ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ (NEP) ಅಧ್ಯಕ್ಷರಾದ ಹಿರಿಯ ವಿಜ್ಞಾನಿ ಕಸ್ತೂರಿ ರಂಗನ್ ಅವರನ್ನು ಭೇಟಿಯಾಗಿ ಅವರಿಗೆ ಅಭಿನಂದನೆ ಸಲ್ಲಿದ್ದರು. ಅದೇ ದಿನ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಅವರ ಜೊತೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡಾ ಉಪಸ್ಥಿತರಿದ್ದರು. ಅಲ್ಲದೆ ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಆಯೋಜಿಸಿದ್ದ ಕಿಯೋನಿಕ್ಸ್ ವೇರ್ ಹೌಸಿಂಗ್ ಇನ್ ಕ್ಯೂಬೇಷನ್ ಮತ್ತು ಸ್ಟಾಟಪ್ ಸಂಸ್ಥೆಗಳ ಸೌಲಭ್ಯಗಳಿಗಾಗಿ ಹೆಚ್ ಎಸ್ ಆರ್ ಲೇಔಟ್ ನಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡದ ಉದ್ಘಾಟನೆಯನ್ನು ಶುಕ್ರವಾರದಂದು ಮಾಡಿದ್ದರು. ಜುಲೈ 30 ರಂದು ಶಿವಾಜಿನಗರದಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ಇವರ ಆಯೋಜಿಸಿರುವ ಬೆಂಗಳೂರು ಮೆಟ್ರೋ ಹಂತ-2 ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಿಂದ ಮತ್ತು ಶಿವಾಜಿನಗರ ಮೆಟ್ರೋ ನಿಲ್ದಾಣಗಳ ನಡುವೆ ಸುರಂಗ ಮಾರ್ಗಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಸಾಕಷ್ಟು ಜನರು ಭಾಗಿಯಾಗಿದ್ದರು. ಈ ಎಲ್ಲಾ ಕಾರ್ಯಕ್ರಮಗಳ ಜೊತೆಗೆ ಅಧಿಕಾರಿಗಳು ಹಾಗೂ ಪ್ರಮುಖ ಸಚಿವರು, ಶಾಸಕರ ಜೊತೆಗೂ ಬಿಎಸ್ವೈ ಸಭೆಗಳನ್ನು ನಡೆಸಿದ್ದರು. ಈ ಎಲ್ಲಾ ಮಾಹಿತಿಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಯಾವ ಮೂಲದಿಂದ ಕೋವಿಡ್ ಬಂದಿರುವ ಸಾಧ್ಯತೆ ಇದೆ ಎಂಬ ಬಗ್ಗೆಯೂ ತನಿಖೆ ನಡೆಸಲು ಸಾಧ್ಯತೆ ಇದೆ.
from India & World News in Kannada | VK Polls https://ift.tt/2EGZN2J