ಬೆಂಗಳೂರು: ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಪತ್ನಿ ಕುಸುಮಾ ಅವರು ಭಾನುವಾರ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆಲಿರುವ ಕಾರ್ಯಕ್ರಮದಲ್ಲಿ ಕುಸುಮಾ ಕಾಂಗ್ರೆಸ್ ಸದಸ್ಯತ್ವವನ್ನು ಪಡೆದುಕೊಳ್ಳಲಿದ್ದಾರೆ. ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕುಸುಮಾ ಟಿಕೆಟ್ ಆಕಾಂಕ್ಷಿಯಾಗಿದ್ದು ಅವರಿಗೆ ಟಿಕೆಟ್ ನೀಡಲಾಗುತ್ತಾ ಎಂಬುವುದು ಕುತೂಹಲ ಕೆರಳಿಸಿದೆ. ನವೆಂಬರ್ 3 ರಂದು ಉಪಚುನಾವಣೆ ನಡೆಯಲಿದ್ದು ಕಾಂಗ್ರೆಸ್ನಿಂದ ಹಲವು ಆಕಾಂಕ್ಷಿಗಳಿದ್ದಾರೆ. ಈ ಪೈಕಿ ಡಿ.ಕೆ ರವಿ ಪತ್ನಿ ಕುಸುಮಾ ಹೆಸರು ಮುಂಚೂಣಿಯಲ್ಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಕುಸುಮಾ ಅವರ ತಂದೆ ಹನಮಂತರಾಯಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸುಮಾ ಅವರಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಡಿಕೆ ರವಿ ಕುಟುಂಬಸ್ಥರ ವಿರೋಧ ಮುಳುವಾಗುತ್ತಾ? ಈ ನಡುವೆ ದಿವಂಗತ ಡಿ.ಕೆ ರವಿ ಅವರ ತಾಯಿ ಹಾಗೂ ಕುಟುಂಬಸ್ಥರು ಕುಸುಮಾ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ತಮ್ಮ ಮಗನ ಹೆಸರಿನಲ್ಲಿ ಚುನಾವಣೆಗೆ ನಿಲ್ಲಬಾರದು ಎಂದು ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಲ್ಲೂ ಇದು ಸಾಕಷ್ಟು ಸುದ್ದಿ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ಕುಸುಮಾ ಅವರಿಗೆ ಟಿಕೆಟ್ ನೀಡಿದರೆ ಅದು ಚುನಾವಣೆಯಲ್ಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕುಸುಮಾ ಅವರಿಗೆ ಟಿಕೆಟ್ ಕೈತಪ್ಪಿದರೂ ಅಚ್ಚರಿ ಇಲ್ಲ ಎಂದು ಕಾಂಗ್ರೆಸ್ ಮೂಲಗಳು ಹೇಳುತ್ತಿವೆ.
from India & World News in Kannada | VK Polls https://ift.tt/3lhmD17