ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ ಶಿರಾ ಹಾಗೂ ಆರ್.ಆರ್ ನಗರ ಉಪಚುನಾವಣೆಯಲ್ಲಿ ಕನಿಷ್ಠ ಒಂದು ಕ್ಷೇತ್ರವನ್ನಾದರೂ ತಮ್ಮದಾಗಿಸಿಕೊಳ್ಳಲು , ಜೆಡಿಎಸ್ ಹಾಗೂ ಕಾಂಗ್ರೆಸ್ ನಾನಾ ತಂತ್ರಗಾರಿಕೆಯನ್ನು ನಡೆಸುತ್ತಿವೆ. ಈ ಎರಡೂ ಕ್ಷೇತ್ರಗಳು ಪ್ರತಿಷ್ಠೆಯೆ ಕ್ಷೇತ್ರಗಳಾಗಿದ್ದು ಜಿದ್ದಾಜಿದ್ದಿಯ ಕಣಗಳಾಗಿ ಮಾರ್ಪಟ್ಟಿವೆ. ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮುನಿರತ್ನಗೆ ಟಿಕೆಟ್ ಸಿಕ್ಕದೆ ಬಿಜೆಪಿಗೆ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಆದರೆ ಕಮಲದಲ್ಲಿರುವ ಆಂತರಿಕ ಭಿನ್ನಮತ ದುಬಾರಿಯಾಗಿ ಪರಿಣಮಿಸುವ ಸಾಧ್ಯತೆಯನ್ನು ಅಲ್ಲಗಳೆಯುವ ಹಾಗಿಲ್ಲ. ಈ ನಿಟ್ಟಿನಲ್ಲಿ ಒಳಜಗಳವನ್ನು ಲಾಭವನ್ನಾಗಿ ಪರಿವರ್ತಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ತಂತ್ರ ರೂಪಿಸುತ್ತಿದೆ. ಬಿಜೆಪಿ ಅಭ್ಯರ್ಥಿಗೆ ಸಲಾವಾಗಿ ನಿಲ್ಲುವ ಪ್ರಬಲ ಅಭ್ಯರ್ಥಿಯ ಹುಡುಕಾಟದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಇದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ರವಿ ಪತ್ನಿ ಕುಸುಮಾ ಹೆಸರು ಚಾಲ್ತಿಯಲ್ಲಿದೆ. ಆದರೆ ಟಿಕೆಟ್ ಇನ್ನೂ ಫೈನಲ್ ಆಗಿಲ್ಲ. ಜೆಡಿಎಸ್ ಪಕ್ಷ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಪ್ರಮುಖರ ಸಭೆ ನಡೆಸಿದೆ. ಯಾರನ್ನು ಕಣಕ್ಕೆ ಇಳಿಸಬೇಕು ಎಂಬ ನಿಟ್ಟಿನಲ್ಲಿ ಚರ್ಚೆ ನಡೆಸಿದೆ. ಈ ನಡುವೆ ಶಿರಾ ಹಾಗೂ ಆರ್ಆರ್ ನಗರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಒಳಒಪ್ಪಂಡ ನಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಟಿಬಿ ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿ ಘೋಷಣೆ ಇನ್ನೂ ಮಾಡಿಲ್ಲ. ದಿವಂಗತ ಸತ್ಯನಾರಾಯಣ ಅವರ ಕುಟುಂಬಕ್ಕೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ತೀವ್ರಗೊಂಡಿದೆ. ಆದರೆ ಅಂತಿಮ ನಿರ್ಧಾರವನ್ನು ಇನ್ನೂ ದಳಪತಿಗಳು ಕೈಗೊಂಡಿಲ್ಲ. ಈ ಬೆಳವಣಿಗಳ ನಡುವೆ ಡಾ. ರಾಜೇಶ್ ಬಿಜೆಪಿಗೆ ಸೇರ್ಪಡೆಗೊಂಡಿದ್ದು ಅವರೇ ಸಂಭವನೀಯ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಶಿರಾದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತೀವ್ರ ಪೈಪೋಟಿ ನಡೆಯುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಎರಡು ಕ್ಷೇತ್ರಗಳಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಾಲಿಗೂ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಾಲಿಗೂ ಈ ಚುನಾವಣೆ ಮಹತ್ವದ್ದಾಗಿದೆ. ಇಷ್ಟೇ ಅಲ್ಲ ಆಪರೇಷನ್ ಕಮಲದಿಂದ ಬಿಜೆಪಿಗೆ ಬಂದ ಮುನಿರತ್ನ ರಾಜಕೀಯ ಭವಿಷ್ಯ ಕೂಡಾ ಈ ಚುನಾವಣೆಯ ಮೇಲೆ ನಿಂತಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಮತದಾರನ ಒಲವು ಗಿಟ್ಟಿಸಿಕೊಳ್ಳಲು ರಾಜಕೀಯ ಪಕ್ಷಗಳು ನಾನಾ ಕಸರತ್ತನ್ನು ಈಗಾಗಲೇ ಆರಂಭಿಸಿವೆ.
from India & World News in Kannada | VK Polls https://ift.tt/36wKJAv