ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಸಿಎಂ ಯಾರು ಎಂಬ ಚರ್ಚೆ ಕಾಂಗ್ರೆಸ್ನಲ್ಲಿ ತೀವ್ರಗೊಂಡಿದೆ. ಸಿಎಂ ಪಟ್ಟಕ್ಕಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಶೀತಲ ಸಮರ ಆರಂಭವಾಗಿದೆ. ಕಾಂಗ್ರೆಸ್ ಪಕ್ಷದ ಒಂದು ವಿಭಾಗ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತರೆ ಮತ್ತೊಂದು ಬಣ ಡಿಕೆಶಿ ಮುಂದಿನ ಸಿಎಂ ಆಗಬೇಕು ಎನ್ನುತ್ತಿದೆ. ಚರ್ಚೆ ಆರಂಭ ಎಲ್ಲಿಂದ? ಚುನಾವಣೆಯ ಇನ್ನು ಎರಡುವರೆ ವರ್ಷ ಬಾಕಿ ಇರುವಾಗಲೇ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ಆರಂಭವಾಗಿದ್ದು ಆರ್.ಆರ್ ನಗರ ಹಾಗೂ ಶಿರಾ ಉಪಚುನಾವಣಾ ಪ್ರಚಾರ ಸಂದರ್ಭದಲ್ಲಿ. ಆರ್.ಆರ್ ನಗರ ಕ್ಷೇತ್ರವನ್ನು ಡಿಕೆಶಿ ಪ್ರತಿಷ್ಠೆಯ ಕಣವನ್ನಾಗಿ ಸ್ವೀಕರಿಸಿದರೆ ಶಿರಾ ಹೊಣೆಯನ್ನು ಸಿದ್ದರಾಮಯ್ಯ ವಹಿಸಿಕೊಂಡಿದ್ದಾರೆ. ಎರಡು ಕ್ಷೇತ್ರಗಳ ಸೋಲು ಗೆಲವು ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರಿಗೆ ಸಾಕಷ್ಟು ಮಹತ್ವವಾಗಿದೆ. ಈ ನಡುವೆ ದಿನಗಳ ಹಿಂದೆ ಬಾದಾಮಿಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆದರೆ 10 ಕೆಜಿ ಅಕ್ಕಿ ಕೊಡುವ ಭರವಸೆ ನೀಡಿದ್ದರು. ಈ ಮೂಲಕ ಕಾಂಗ್ರೆಸ್ನಲ್ಲಿ ಸಿಎಂ ಅಭ್ಯರ್ಥಿ ನಾನೇ ಎಂದು ಪರೋಕ್ಷವಾಗಿ ಘೋಷಿಸಿಕೊಂಡಿದ್ದರು. ಸಿದ್ದರಾಮಯ್ಯ ಆಪ್ತ ಜಮೀರ್ ಅಹಮ್ಮದ್ ಖಾನ್ ಕೂಡಾ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಘೋಷಿಸಿಬಿಟ್ಟರು. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣ ಡಿಕೆಶಿಯೇ ಮುಂದಿನ ಸಿಎಂ ಎಂಬ ಅರ್ಥದಲ್ಲಿ ಹೇಳಿಕೆ ನೀಡಲಾರಂಭಿಸಿದರು. ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಡೆದ ಒಕ್ಕಲಿಗ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜಯನಗರ ಶಾಸಕಿ ಸೌಮ್ಯ ರೆಡ್ಡಿ, ರಾಜ್ಯಸಭಾ ಸದಸ್ಯ ಚಂದ್ರಶೇಖರ್, ಹಾಗೂ ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಅವರು ಡಿಕೆಶಿಯೇ ಮುಂದಿನ ಸಿಎಂ ಎಂದು ಘೋಷಿಸಿಬಿಟ್ಟರು. ಡಿಕೆಶಿ ಪ್ರತಿಕ್ರಿಯೆ ಏನು? ಸಿಎಂ ಯಾರಾಗಬೇಕು ಎಂಬ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಬೇಕು ಎಂಬ ನಿರ್ಧಾರ ಹೈಕಮಾಂಡ್ಗೆ ಬಿಟ್ಟಿದ್ದು ಎಂದಿದ್ದಾರೆ. ಮೊದಲು ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಬಳಿಕ ಇತರ ನಿರ್ಧಾರಗಳು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಎಂಬ ಹೇಳಿಕೆ ಕೊಟ್ಟಿರುವ ಜಮೀರ್ ಕೆಲವೊಮ್ಮ ಭಾವನಾತ್ಮಕವಾಗಿ ಮಾತನಾಡುತ್ತಾರೆ. ಅವರು ನನ್ನ ಸ್ನೇಹಿತರು ಎಂದು ಹೇಳುವ ಮೂಲಕ ಮಾರ್ಮಿಕ ಉತ್ತರ ನೀಡಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮೊದಲೇ ಸಿಎಂ ಪಟ್ಟದ ಚರ್ಚೆ ಜೋರಾಗಿದೆ. ಇದರ ಪರಿಣಾಮ ಕೈಯೊಳಗೆ ಬಣ ರಾಜಕೀಯ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಆಯ್ಕೆಗೆ ಸಂಪೂರ್ಣ ಒಮ್ಮತ ನೀಡಿರದ ಸಿದ್ದರಾಮಯ್ಯ ಇದೀಗ ಸಿಎಂ ಸ್ಥಾನವನ್ನು ಕಳೆದಿಕೊಳ್ಳಲು ತಯಾರಿದ್ದಾರಾ ಎಂಬುವುದು ಮುಖ್ಯಪ್ರಶ್ನೆ. ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸಿಎಂ ಗಾದಿಗಾಗಿ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಹಗ್ಗಜಗ್ಗಾಟ ಎಲ್ಲಿಗೆ ಹೋಗಿ ತಲುಪುತ್ತದೆ ಎಂಬುವುದು ಸದ್ಯದ ಕುತೂಹಲ.
from India & World News in Kannada | VK Polls https://ift.tt/37EsKZN