ನವೆಂಬರ್ 5ರಂದು ಮುಖ್ಯಮಂತ್ರಿಯವರಿಂದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟನೆ

ಮಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಜ್ಯ ಕಾರ‍್ಯಕಾರಿ ಸಮಿತಿ ಸಭೆ ನ. 5ರಂದು ಮಂಗಳೂರಿನ ಟಿ.ವಿ. ರಮಣ ಪೈ ಕನ್ವೆನ್ಶನ್‌ ಸೆಂಟರ್‌ನಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕಾರ‍್ಯಕಾರಿಣಿ ಸಮಿತಿ ಸಭೆಯನ್ನು ಉದ್ಘಾಟಿಸುವರು. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರ ಚಿಂತನೆಯಂತೆ ಮಂಗಳೂರಿನಲ್ಲಿ ಕಾರ‍್ಯಕಾರಿ ಸಮಿತಿ ಸಭೆ ಆಯೋಜನೆಗೊಂಡಿದೆ. ಈ ಸಭೆಯ ಆತಿಥ್ಯ ಸಿಕ್ಕಿರುವುದು ನಮ್ಮ ಪಾಲಿನ ಸುಯೋಗ. ಸಭೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು. ನ. 5ರಂದು ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕಾರ‍್ಯಕಾರಿ ಸಮಿತಿ ಸಭೆ ಉದ್ಘಾಟಿಸುವರು. ಬಳಿಕ ವಿವಿಧ ವಿಷಯಗಳ ಬಗ್ಗೆ ವಿಚಾರ ವಿನಿಮಯ ನಡೆಯಲಿದೆ. ಕೇಂದ್ರ, ರಾಜ್ಯ ಸರಕಾರಗಳ ಕಾರ‍್ಯಕ್ರಮಗಳ ಅನುಷ್ಠಾನ ಬಗ್ಗೆ ಚರ್ಚೆ ನಡೆಯಲಿದೆ. ಉದ್ಘಾಟನೆ ಕಾರ‍್ಯಕ್ರಮಕ್ಕೆ ಇತರ ಗಣ್ಯರಿಗೂ ಆಹ್ವಾನ ಇರುತ್ತದೆ. ಆದರೆ ಕಾರ‍್ಯಕಾರಿ ಸಮಿತಿ ಸಭೆಗೆ ಅಪೇಕ್ಷಿತರಿಗೆ ಮಾತ್ರ ಅವಕಾಶವಿರುತ್ತದೆ. ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅಧ್ಯಕ್ಷತೆ ವಹಿಸುವರು. ರಾಜ್ಯ ಬಿಜೆಪಿಯ ವಿವಿಧ ಪದಾಧಿಕಾರಿಗಳು, ಸಂಚಾಲಕರು, ಪ್ರಭಾರಿಗಳು, ಸಹ ಪ್ರಭಾರಿಗಳು, 7 ಮೋರ್ಚಾಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ‍್ಯದರ್ಶಿ ಬಿ.ಎಲ್‌. ಸಂತೋಷ್‌ ಕೂಡ ಭಾಗವಹಿಸುವರು ಎಂದು ಸುದರ್ಶನ್‌ ಮಾಹಿತಿ ನೀಡಿದರು. ಕೋರ್‌ ಕಮಿಟಿ ಸಭೆ ರಾಜ್ಯ ಕಾರ‍್ಯಕಾರಿ ಸಮಿತಿ ಸಭೆ ಜತೆಯಲ್ಲಿ ಪ್ರತಿ ತಿಂಗಳು ನಡೆಯುವ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆಯೂ ನಡೆಯಲಿದೆ. ಈ ಕಮಿಟಿ ಸದಸ್ಯರಾಗಿರುವ ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಪ್ರಹ್ಲಾದ್‌ ಜೋಷಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ‍್ಯದರ್ಶಿ ಸಿ.ಟಿ. ರವಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸಮ್ಮೇಳನ ಯಶಸ್ವಿಯಾಗಿ ನಡೆಯಲು ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿದ್ದೇವೆ. 16 ವಿಭಾಗಗಳನ್ನು ನೇಮಿಸಿ ಆ ಮೂಲಕ ಬೇಕಾದ ತಯಾರಿ ನಡೆಸಿದ್ದೇವೆ. ನಗರವನ್ನು ಸಿಂಗರಿಸಿ ಅತಿಥಿಗಳನ್ನು ಸ್ವಾಗತಿಸುತ್ತೇವೆ. ವಸತಿ, ಊಟೋಪಚಾರಕ್ಕೂ ಸಿದ್ಧತೆ ನಡೆಸಿದ್ದೇವೆ ಎಂದು ಅವರು ಮಾಹಿತಿ ನೀಡಿದರು. ಪುತ್ತೂರು ಶಾಸಕ ಸಂಜೀವ ಮಠಂದೂರು, ದಕ್ಷಿಣ ಶಾಸಕ ಡಿ. ವೇದವ್ಯಾಸ್‌ ಕಾಮತ್‌, ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಪ್ರದೀಪ್‌ ಜಿ. ಪೈ, ಬಿಜೆಪಿ ಪ್ರಧಾನ ಕಾರ‍್ಯದರ್ಶಿಗಳಾದ ಸುಧೀರ್‌ ಶೆಟ್ಟಿ ಕಣ್ಣೂರು, ಕಸ್ತೂರಿ ಪಂಚ, ರಾಮ್‌ದಾಸ್‌ ಬಂಟ್ವಾಳ, ಬಿಜೆಪಿ ವಕ್ತಾರರಾದ ರವಿಶಂಕರ್‌ ಮಿಜಾರ್‌, ರಾಧಾಕೃಷ್ಣ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


from India & World News in Kannada | VK Polls https://ift.tt/3oP6HFB

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...