ಬೆಂಗಳೂರು: ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಡಿ.30ರಿಂದ 2021ರ ಜ.2ರವರೆಗೆ ಹೋಟೆಲ್, ಪಬ್, ರೆಸ್ಟೋರೆಂಟ್, ಕ್ಲಬ್ ಸೇರಿದಂತೆ ಇತರೆ ಸ್ಥಳ ಹಾಗೂ ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೆ ಹೆಚ್ಚು ಜನರು ಸೇರುವಂತಹ ಟಿಕೆಟ್ ಪಡೆದ ವಿಶೇಷ ಪಾರ್ಟಿಗಳು, ವಿಶೇಷ ಡಿಜಿ ಮತ್ತು ಡ್ಯಾನ್ಸ್ ಕಾರ್ಯಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ() ಆದೇಶ ಹೊರಡಿಸಿದೆ. ಆದರೆ, ಹೋಟೆಲ್, ರೆಸ್ಟೋರೆಂಟ್, ಪಬ್, ಕ್ಲಬ್, ಕ್ಲಬ್ ಹೌಸ್ಗಳಲ್ಲಿ ನಿಯಮಿತ ಚಟುವಟಿಕೆಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಮುಚ್ಚಿದ ಸ್ಥಳಗಳಲ್ಲಿ, ಹಾಲ್ ಸಾಮರ್ಥ್ಯದ ಗರಿಷ್ಠ ಶೇ.50ರಷ್ಟು ಅಥವಾ ಸುಮಾರು 200 ಜನರು ಸೇರಲು ಅವಕಾಶ ಕಲ್ಪಿಸಿದೆ. ಮುಖ್ಯವಾಗಿ ಚರ್ಚ್ ಸ್ಟ್ರೀಟ್, ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಸಮಾನಾಂತರ ರಸ್ತೆಗಳು, ಕೋರಮಂಗಲ, ಇಂದಿರಾನಗರ, ವೈಟ್ಫೀಲ್ಡ್ ಸೇರಿದಂತೆ ಸುತ್ತಮುತ್ತಲಿನ ಸ್ಥಳಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಹೊಸ ಸೋಂಕು ಪ್ರಕರಣಗಳು ಮತ್ತು ಮರಣ ಪ್ರಮಾಣ ಕಡಿಮೆಯಾಗುತ್ತಿದ್ದರೂ, ಯಥಾಸ್ಥಿತಿ ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಹಬ್ಬಗಳು ಮತ್ತು ಹೊಸ ವರ್ಷದ ಆಚರಣೆ ವೇಳೆ ನಡೆಯುವ ಕೂಟಗಳು ರೋಗ ನಿಯಂತ್ರಣಕ್ಕೆ ತೊಡಕುಂಟು ಮಾಡಲಿವೆ. ಹಾಗಾಗಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಸಾಮೂಹಿಕ ಕೂಟ(ಪಾರ್ಟಿ), ಬೃಹತ್ ಸಮಾರಂಭಗಳ ಆಚರಣೆಗಳನ್ನು ನಿಯಂತ್ರಿಸುವ ಮತ್ತು ನಿಷೇಧಿಸುವ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರೂ ಆದ, ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯಲ್ಲಿ ಬಿಬಿಎಂಪಿ ಆಯುಕ್ತರು, ನಗರ ಪೊಲೀಸ್ ಆಯುಕ್ತರೂ ಸೇರಿದಂತೆ ನಾನಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಚರ್ಚಿಸಿ ಕ್ರಿಸ್ಮಸ್ ಮತ್ತು ವೇಳೆ ಅನುಸರಿಸಬೇಕಾದ ವಿಶೇಷ ಮಾರ್ಗಸೂಚಿ ಮತ್ತು ಎಸ್ಒಪಿಗಳನ್ನು ಬಿಬಿಎಂಪಿ ಜಾರಿಗೆ ತಂದಿದೆ. ನಿಯಮ ಉಲ್ಲಂಘಿಘಿಸುವ ವ್ಯಕ್ತಿ ಅಥವಾ ಸಂಸ್ಥೆಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯಿದೆ ಹಾಗೂ ಐಪಿಸಿ ಸೆಕ್ಷನ್ 188 ಅಡಿಯಲ್ಲಿ ಕಾನೂನು ಕ್ರಮದ ಜತೆಗೆ, ವಿಪತ್ತು ನಿರ್ವಹಣಾ ಕಾಯ್ದೆಯಡಿ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಹಸ್ತಲಾಘವ, ಆಲಿಗನಕ್ಕೆ ನಿರ್ಬಂಧ..! ಕೋವಿಡ್ 19 ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಕ್ರಿಸ್ಮಸ್ ವೇಳೆ ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನಕ್ಕೂ ನಿರ್ಬಂಧ ವಿಧಿಸಿದ್ದು, ಚರ್ಚ್, ದೇವಸ್ಥಾನ, ಮಸೀದಿ ಹಾಗೂ ಇತರೆ ಧಾರ್ಮಿಕ ಸ್ಥಳಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮೇಲ್ವಿಚಾರಕರು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಬಿಬಿಎಂಪಿ ಸೂಚಿಸಿರುವ ಮಾರ್ಗಸೂಚಿಗಳು ಹೀಗಿವೆ:
- ಚರ್ಚ್, ದೇವಸ್ಥಾನ, ಮಸೀದಿ ಮತ್ತು ಇತರೆ ಧಾರ್ಮಿಕ ಸ್ಥಳಗಳಲ್ಲಿ ಒಮ್ಮೆಗೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಯೋಜಕರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
- ಹಬ್ಬದ ಆಚರಣೆ ವೇಳೆ ಕೋವಿಡ್-19 ಸೋಂಕು ತಡೆಗಟ್ಟಲು ಸಾರ್ವಜನಿಕರು ಹಸ್ತಲಾಘವ ಮತ್ತು ಆಲಿಂಗನ ಮಾಡುವುದನ್ನು ನಿಷೇಧಿಸಲಾಗಿದೆ.
- ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳ, ಮುಖ್ಯ ರಸ್ತೆಗಳಲ್ಲಿ ಮತ್ತು ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಪ್ರದೇಶಗಳಲ್ಲಿ ಸಂಭ್ರಮಾಚರಣೆಯನ್ನು ನಿರ್ಬಂಧಿಸಲಾಗಿದೆ.
- ಡಿಜೆಗಳು ಮತ್ತು ನೃತ್ಯ ಮಹಡಿಗಳೊಂದಿಗೆ ವಿಶೇಷ ಕಾರ್ಯಕ್ರಮಗಳಿಗೂ ಅವಕಾಶವಿಲ್ಲ.
- ಆಯ್ದ ರಸ್ತೆ ಮತ್ತು ಸ್ಥಳಗಳಿಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು.
- 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು, 10 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು ಮನೆಯಲ್ಲೇ ಇರತಕ್ಕದ್ದು.
- ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಹೋಟೆಲ್, ಮಾಲ್, ಪಬ್, ರೆಸ್ಟೋರೆಂಟ್ಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ.
- ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕು.
- ಪ್ರವೇಶ ದ್ವಾರ, ವಾಹನ ನಿಲುಗಡೆ ಹಾಗೂ ಇತರೆ ಮುಖ್ಯ ಸ್ಥಳಗಳಲ್ಲಿ ಸ್ಯಾನಿಟೈಸರ್ ಕಡ್ಡಾಯವಾಗಿ ಇರುವಂತೆ ನೋಡಿಕೊಳ್ಳಬೇಕು.
- ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಪಬ್ ಮತ್ತು ಬಾರ್ಗಳಲ್ಲಿ ಮುಂಗಡ ಬುಕ್ಕಿಂಗ್ ವ್ಯವಸ್ಥೆ ಜಾರಿಗೆ ತರಬೇಕು.
- ಪೆಂಡಾಲ್, ಫುಡ್ ಕೋರ್ಟ್, ಪ್ರದರ್ಶನಗಳಲ್ಲಿ ಕೋವಿಡ್ ಮಾನದಂಡಗಳ ಅನ್ವಯ ಸಾಮಾಜಿಕ ಅಂತರ ಕಾಪಾಡುವ ಮೂಲಕ ಆಸನ ವ್ಯವಸ್ಥೆ ಮಾಡಬೇಕು.
- ಥರ್ಮಲ್ ಸ್ಕ್ಯಾನಿಂಗ್, ಸಾಮಾಜಿಕ ಅಂತರ ಮತ್ತು ಫೇಸ್ ಮಾಸ್ಕ್ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಲು ಸ್ವಯಂ ಸೇವಕರನ್ನು ನಿಯೋಜಿಸಬೇಕು.
- ಜ್ವರ, ಕೆಮ್ಮು ಸೇರಿದಂತೆ ಇತರೆ ರೋಗ ಲಕ್ಷಣ ಕಂಡುಬಂದವರಿಗೆ ನಯವಾಗಿ ಪ್ರವೇಶ ನಿರಾಕರಿಸಬೇಕು. ರೋಗ ಲಕ್ಷಣ ಕಂಡುಬಂದ ವ್ಯಕ್ತಿಯನ್ನು ಪ್ರತ್ಯೇಕವಾಗಿರಿಸಲು ಪ್ರತ್ಯೇಕ ಕೊಠಡಿ, ತುರ್ತು ಸಂದರ್ಭಗಳಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು.
- ಕೋವಿಡ್-19 ತಡೆಗಟ್ಟುವ ಕುರಿತು ಪೋಸ್ಟರ್ಗಳು, ಸ್ಟ್ಯಾಂಡೀಸ್, ಆಡಿಯೊ ಮತ್ತು ವಿಡಿಯೊಗಳನ್ನು ಕಾರ್ಯಕ್ರಮದ ಸ್ಥಳದಲ್ಲಿ ಎಲ್ಲರಿಗೂ ಕಾಣುವಂತೆ ಪ್ರದರ್ಶಿಸಬೇಕು.
from India & World News in Kannada | VK Polls https://ift.tt/3rsbfmC