ಹೊಸದಿಲ್ಲಿ: ಕೃಷಿ ಕಾಯ್ದ ಜಾರಿಯನ್ನು ತಡೆಹಿಡಿಯಲು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಆಗ್ರಹಿಸಲು, ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು(ಡಿ.24-ಗುರುವಾರ) ರಾಷ್ಟ್ರಪತಿ ಭವನಕ್ಕೆ ಪಾದಯಾತ್ರೆ ಹಮ್ಮಿಕೊಂಡಿದೆ. ದೆಹಲಿಯ ವಿಜಯ್ ಚೌಕ್ನಿಂದ ರಾಷ್ಟ್ರಪತಿ ಭವನದವರೆಗೆ ಪಾದಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕರು, ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಿದ್ದಾರೆ. ಜಾರಿ ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಕಾಯ್ದೆ ಹಿಂಪಡೆಯುವುದಿಲ್ಲ ಎಂದು ಹೇಳುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಮಧ್ಯಪ್ರವೇಶಿಸಿ ವಿವಾದ ಬಗೆಹರಿಸಬೇಕೆಂದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಕಾಂಗ್ರೆಸ್ ನಿಯೋಗ ಆಗ್ರಹಿಸಲಿದೆ. ಈ ಮಧ್ಯೆ ಕಾಂಗ್ರೆಸ್ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ನವದೆಹಲಿ ಹೆಚ್ಚುವರಿ ಡಿಸಿಪಿ ದೀಪಕ್ ಯಾದವ್, ಕಾಂಗ್ರೆಸ್ ಪಾದಯಾತ್ರೆಗೆ ಅನುಮತಿ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಅನುಮತಿ ನೀಡಿರುವ ಮೂವರು ಕಾಂಗ್ರೆಸ್ ನಾಯಕರನ್ನು ಮಾತ್ರ ಒಳಗೆ ಬಿಡಲಾಗುವುದು ಎಂದು ದೀಪಕ್ ಯಾದವ್ ಹೇಳಿದ್ದಾರೆ. ಆದರೆ ಪೊಲೀಸರ ನಿರ್ಧಾರ ಖಂಡಿಸಿರುವ ಕಾಂಗ್ರೆಸ್ ನಾಯಕರು, ರಾಷ್ಟ್ರಪತಿ ಭವನದವರೆಗೆ ಪಾದಯಾತ್ರೆ ನಡೆಸುವುದು ಶತಸಿದ್ಧ ಎಂದು ಹೇಳಿದ್ದಾರೆ. ರೈತರ ಸಂಕಷ್ಟಗಳನ್ನು ಸರ್ಕಾರ ಅರಿಯದಾದಾಗ ರಾಷ್ಟ್ರಪತಿ ಅವರ ಗಮನಕ್ಕೆ ತರುವುದು ಕಾಂಗ್ರೆಸ್ ಕರ್ತವ್ಯ ಎಂದು ಶಶಿ ತರೂರ್ ಹೇಳಿದ್ದಾರೆ.
from India & World News in Kannada | VK Polls https://ift.tt/3ppQkz3