ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ಹೈಕೋರ್ಟ್ ಆದೇಶ ಕಾಂಗ್ರೆಸ್ ಪಾಲಿಗೆ ರಾಜಕೀಯ ಅಸ್ತ್ರ ಸಿಕ್ಕಂತ್ತಾಗಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಹೋರಾಟ ತೀವ್ರಗೊಳಿಸಲು ಪಕ್ಷ ನಿರ್ಧರಿಸಿದೆ. ಈಗಾಗಲೇ ಪತ್ರಿಕಾಗೋಷ್ಠಿ ನಡೆಸುವ ಮೂಲಕ ವಿರೋಧ ಪಕ್ಷದ ನಾಯಕ , ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಎಸ್ ಯಡಿಯೂರಪ್ಪ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಕೋವಿಡ್ ಹಾಗೂ ಇತರ ವಿಚಾರವಾಗಿ ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಕಾಂಗ್ರೆಸ್ ಗಮನ ಸೆಳೆಯುವ ಯಾವುದೇ ಹೋರಾಟವನ್ನು ಇದುವರೆಗೆ ಸಂಘಟಿಸಿಲ್ಲ. ವಿರೋಧ ಪಕ್ಷವಾಗಿ ಸರ್ಕಾರದ ವಿರುದ್ಧ ಸೆಟೆದು ನಿಲ್ಲಬೇಕಾಗಿರುವ ಕಾಂಗ್ರೆಸ್ ಕೇವಲ ಟ್ವೀಟ್, ಪತ್ರಿಕಾ ಹೇಳಿಕೆ ಹಾಗೂ ಪತ್ರ ಬರೆಯುವ ಮೂಲಕ ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಾ ಬಂದಿದೆ. ಕಾಂಗ್ರೆಸ್ ಈ ನಡೆಗೆ ಚರ್ಚೆಗೂ ಗ್ರಾಸವಾಗುತ್ತಿದೆ. ಕೋವಿಡ್ ಸಮಸ್ಯೆಯ ಜೊತೆಗೆ ಪಕ್ಷದಲ್ಲಿರುವ ಅಂತರಿಕ ಭಿನ್ನಮತವೂ ಇದಕ್ಕೆ ಕಾರಣ ಎಂಬ ವಿಚಾರವೂ ಚರ್ಚೆಯಲ್ಲಿದೆ. ಈ ನಿಟ್ಟಿನಲ್ಲಿ ಇದೀಗ ಕಾಂಗ್ರೆಸ್ ಪಾಲಿಗೆ ಹೈಕೋರ್ಟ್ ಆದೇಶ ಬಿಜೆಪಿ ವಿರುದ್ಧದ ಹೋರಾಟಕ್ಕೆ ಪ್ರಬಲ ರಾಜಕೀಯ ಅಸ್ತ್ರವಾಗಿದೆ. ಏನಿದು ಪ್ರಕರಣ 2000-2001 ನೇ ಸಾಲಿನಲ್ಲಿ ಬೆಂಗಳೂರಿನ ವೈಟ್ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸುಮಾರು 500 ಎಕರೆ ಪ್ರದೇಶವನ್ನು ಐಟಿ ಕಾರಿಡಾರ್ ಆಗಿ ಸರ್ಕಾರ ಘೋಷಣೆ ಮಾಡಿತ್ತು. ಇದಕ್ಕಾಗಿ ಮಾರತಹಳ್ಳಿ, ಬೆಳ್ಳಂದೂರು ಸುತ್ತಮುತ್ತಲ ಗ್ರಾಮಗಳಲ್ಲಿ 434 ಎಕರೆ ಸ್ವಾಧೀನಕ್ಕೆ ಕೆಐಎಡಿಬಿ ಅಧಿಸೂಚನೆ ಹೊರಡಿಸಿತ್ತು. ಆದರೆ 2006 ರಲ್ಲಿ ಸಿಎಂ ಆಗಿದ್ದ ಸಂದರ್ಭದಲ್ಲಿ, ಸ್ವಾಧೀನಕ್ಕೆ ಅಧಿಸೂಚನೆ ಆಗಿದ್ದ ಜಮೀನಿನ ಪೈಕಿ, ದೇವರಬೀಸನಹಳ್ಳಿ ಸರ್ವೇ ನಂಬರ್ 49 ರಲ್ಲಿ 4 ಎಕರೆ 30 ಗುಂಟೆ, ಬೆಳ್ಳಂದೂರು ಗ್ರಾಮದ ಸರ್ವೇ ನಂಬರ್ 46/1 ರಲ್ಲಿ 1 ಎಕರೆ 17 ಗುಂಟೆ ಹಾಗೂ ಸರ್ವೆ ನಂ 18 ರಲ್ಲಿ 1 ಎಕರೆ 10ಗುಂಟೆ, ಸರ್ವೆ ನಂಬರ್ 10 ರಲ್ಲಿ 30ಗುಂಟೆ ಜಾಗವನ್ನು ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ ಎಂದು ಆರೋಪಿಸಿ ವಾಸುದೇವರೆಡ್ಡಿ ಎಂಬುವವರು 2013 ಜುಲೈ 10 ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಾಯುಕ್ತ ನ್ಯಾಯಾಲಯ ತನಿಖೆ ನಡೆಸುವಂತೆ ಆದೇಶಿಸಿತ್ತು. 2015 ರಲ್ಲಿ ಎಫ್ಐಆರ್ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು ಆರ್. ವಿ ದೇಶಪಾಂಡೆ ಅವರನ್ನು ಮೊದಲ ಆರೋಪಿಯನ್ನಾಗಿ ಬಿಎಸ್ ಯಡಿಯೂರಪ್ಪ ಅವರನ್ನು 2 ನೇ ಆರೋಪಿಯನ್ನಾಗಿದ್ದರು. ಆದರೆ ಈ ಪ್ರಕಣಕ್ಕೆ ಸಂಬಂಧಿಸಿದಂತೆ 2019 ರಲ್ಲಿ ಹೈಕೋರ್ಟ್ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದ ಬಿಎಸ್ವೈ ಸಕ್ಷಮ ಪ್ರಾಧಿಕಾರದಿಂದ ಪುರ್ವಾನುಮತಿ ಪಡೆಯದೆ ತಮ್ಮ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ದೂರಿದ್ದರು. ಆದರೆ ಇದೀಗ ಲೋಕಾಯುಕ್ತ ವಿಶೇಷ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
from India & World News in Kannada | VK Polls https://ift.tt/34I0NO9