ಬೆಂಗಳೂರು: ಶುಕ್ರವಾರದಿಂದ ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ಕೋರ್ ಕಮಿಟಿ ಹಾಗೂ ರಾಜ್ಯ ಕಾರ್ಯಕಾರಿಣಿ ಸಭೆ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಸಭೆಯಲ್ಲಿ ಬಿಜೆಪಿ ಪ್ರಮುಖರು ಭಾಗಿಯಾಗಲಿದ್ದು ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕ ಗೊಂದಲ ಸೇರಿದಂತೆ ಪಕ್ಷದ ಆಂತರಿಕ ವಿಚಾರಗಳ ಕುರಿತಾಗಿ ಮಹತ್ವದ ಚರ್ಚೆಗಳು ನಡೆಯಲಿದೆ. ಅಲ್ಲದೆ ಸಭೆಯಲ್ಲಿ ಸದ್ಯದ ಬೆಳವಣಿಗೆಗಳಿಂದ ಅಸಮಾಧಾನಿತರಾದ ಅತೃಪ್ತರ ಒಳಕುದಿ ಸ್ಫೋಟಗೊಳ್ಳುವ ಸಾಧ್ಯತೆ ಇದೆ. ಕೋರ್ ಕಮಿಟಿ ಹಾಗೂ ರಾಜ್ಯ ಕಾರ್ಯಕಾರಿಣಿ ಸಭೆಗೆ ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ನೇಮಕಗೊಂಡಿರುವ ಅರುಣ್ ಸಿಂಗ್ ಇದೇ ಮೊದಲ ಬಾರಿ ಆಗಮಿಸಲಿದ್ದಾರೆ. ಅವರ ಅಧ್ಯಕ್ಷತೆಯಲ್ಲೇ ಸಭೆಗಳು ನಡೆಯಲಿದೆ. ಈ ವೇಳೆ ಪಕ್ಷ ಸಂಘಟನೆ ಹಾಗೂ ಮುಂದಿನ ಕಾರ್ಯಸ್ವರೂಪದ ಕುರಿತಾಗಿ ಚರ್ಚೆ ನಡೆಯುವುದರ ಜೊತೆಗೆ ಸಂಪುಟ ವಿಸ್ತರಣೆ ಗೊಂದಲ, ನಿಗಮ ಮಂಡಳಿಯ ನೇಮಕಾತಿಯಲ್ಲಿ ಬಿಎಸ್ ಯಡಿಯೂರಪ್ಪ ಆಪ್ತರಿಗೆ ಮಣೆ ವಿಚಾರಗಳು ಪ್ರಸ್ತಾಪ ಆಗಲಿದೆ ಎನ್ನಲಾಗುತ್ತಿದೆ. ಪಕ್ಷದಲ್ಲಿ ನಡೆಯುತ್ತಿರುವ ಹಲವು ಬೆಳವಣಿಗೆಗಳಿಂದ ಕೆಲವರು ಅಸಮಾಧಾನಗೊಂಡಿದ್ದಾರೆ. ಜೊತೆಗೆ ಬಣ ರಾಜಕೀಯ ತೀವ್ರಗೊಳ್ಳುತ್ತಿರುವುದರಿಂದ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದೆ. ಕೆಲವು ಮುಖಂಡರ ಬಹಿರಂಗ ಹೇಳಿಕೆಗಳು ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತಿದೆ. ಇದು ಮುಂದಿನ ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಉಸ್ತುವಾರಿ ಮುಂದೆ ದೂರನ್ನು ಸಲ್ಲಿಸಲು ಕೆಲವರು ಸಿದ್ದತೆ ಮಾಡಿಕೊಂಡಿದ್ದಾರೆ ಎಂಬುವುದು ಮೂಲಗಳಿಂದ ತಿಳಿದುಬಂದ ಮಾಹಿತಿ. ಬಿಎಸ್ವೈ ಬಗ್ಗೆ ಅಸಮಾಧಾನ ನಿಗಮ ಮಂಡಳಿ, ಸಂಪುಟ ವಿಸ್ತರಣೆ ವಿಚಾರವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಕ್ಷದ ಇತರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ಅಸಮಾಧಾನ ಪಕ್ಷದ ಕೆಲವು ಮುಖಂಡರಲ್ಲಿದೆ. ನಿಗಮ ಮಂಡಳಿ ನೇಮಕಾತಿ ಸಂದರ್ಭದಲ್ಲಿ ತಮ್ಮ ಆಪ್ತರಿಗೆ ಮಣೆ ಹಾಕಿದ್ದಾರೆ. ಇದು ಪಕ್ಷ ನಿಷ್ಠರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಚಾರಗಳು ಕೋರ್ ಕಮಿಟಿ ಹಾಗೂ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ.
from India & World News in Kannada | VK Polls https://ift.tt/3ogsJ34