ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ಗೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಬಹಿರಂಗ ಹೇಳಿಕೆ ನೀಡಿರುವ ಬೆನ್ನಲ್ಲೇ ಕಮಲ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಸಿಪಿವೈಗೆ ಮಂತ್ರಿ ಗಿರಿ ತಪ್ಪಿಸಲು ಇತರ ಸಚಿವಾಕಾಂಕ್ಷಿಗಳು ತಂತ್ರ ರೂಪಿಸುತ್ತಿದ್ದು ಡಿಸೆಂಬರ್ 7 ಅಥವಾ 8 ರಂದು ಸಭೆ ನಡೆಸಲು ನಿರ್ಧರಿಸಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ , ಸಿಪಿ ಯೋಗೇಶ್ವರ್ಗೆ ಸಚಿವ ಸ್ಥಾನ ನೀಡುವುದಾಗಿ ತಿಳಿಸಿದ್ದರು. ನೂರಕ್ಕೆ ನೂರರಷ್ಟು ಸಿಪಿವೈಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ನೀಡಿದ್ದರು. ಆದರೆ ಸಿಎಂ ಈ ಹೇಳಿಕೆ ಇತರ ಸಚಿವಾಕಾಂಕ್ಷಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದಾರೆ. ಯೋಗೇಶ್ವರ್ಗೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ನೀಡಿರುವ ಹೇಳಿಕೆಯಿಂದ ಆಘಾತವಾಗಿದೆ ಎಂದಿದ್ದಾರೆ. ಅವರು ಮಾತ್ರವಲ್ಲದೆ ಶಾಸಕ ರಾಜೂಗೌಡ ಸೇರಿದಂತೆ ಇತರ ಕೆಲವು ಶಾಸಕರು ಸಿಪಿವೈಗೆ ಸಚಿವ ಸ್ಥಾನ ನೀಡಲು ಆಕ್ಷೇಪ ಎತ್ತಿದ್ದಾರೆ. ಈ ನಿಟ್ಟಿನಲ್ಲಿ ಯಡಿಯೂರಪ್ಪ ಹಾಗೂ ವರಿಷ್ಠರ ಗಮನ ಸೆಳೆಯುವ ನಿಟ್ಟಿನಲ್ಲಿ ಡಿಸೆಂಬರ್ 7 ಅಥವಾ 8 ರಂದು ಬೆಂಗಳೂರಿನಲ್ಲಿ ಸಭೆ ಸೇರಲು ನಿರ್ಧಾರ ಮಾಡಿದ್ದಾರೆ. ಈ ಮೂಲಕ ಒತ್ತಡ ತಂತ್ರ ಪ್ರಯೋಗ ಮಾಡಲು ಇತರ ಸಚಿವಾಕಾಂಕ್ಷಿಗಳು ಮುಂದಾಗಿದ್ದಾರೆ. ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಿಪಿ ಯೋಗೇಶ್ವರ್ಗೆ ಸಚಿವ ಸ್ಥಾನ ನೀಡಬಾರದು ಎಂಬ ವಿರೋಧ ಆರಂಭದಿಂದಲೇ ವ್ಯಕ್ತವಾಗಿತ್ತು. ಆದರೂ ಸಿಪಿವೈ ಸಚಿವ ಸ್ಥಾನ ಪಡೆದುಕೊಳ್ಳಲು ನಾನಾ ಕಸರತ್ತು ನಡೆಸುತ್ತಾ ಬಂದಿದ್ದಾರೆ. ಇದೀಗ ಸಚಿವ ರಮೇಶ್ ಜಾರಕಿಹೊಳಿ ಮೂಲಕ ಹೈಕಮಾಂಡ್ಗೆ ಒತ್ತಡ ಹೇರಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮಂಗಳವಾರ ಸಿಪಿ ಯೋಗೇಶ್ವರ್ಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ.
from India & World News in Kannada | VK Polls https://ift.tt/2I3r6GG