
: ಭ್ರಷ್ಟ ಅಧಿಕಾರಿಗಳಿಗೆ ಮಂಗಳವಾರ ಬೆಳ್ಳಂಬೆಳಗ್ಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ರಾಜ್ಯದ 7 ಸರಕಾರಿ ಅಧಿಕಾರಿಗಳ ಮನೆ, ಕಚೇರಿಗಳು ಸೇರಿ ರಾಜ್ಯಾದ್ಯಂತ 30 ಕಡೆ ಏಕಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು ನಗರ, ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ ಹಾಗೂ ಕಲಬುರಗಿಯ ವಿವಿಧೆಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸಹಕಾರ ಸಂಘಗಳ ಜಂಟಿ ನಿಬಂಧಕ ಡಿ.ಪಾಂಡುರಂಗ ಗರಗ್ ಅವರಿಗೆ ಸಂಬಂಧಿಸಿದ ವಿಜಯನಗರದ ಮನೆ, ಜಯನಗರ, ಮಲ್ಲೇಶ್ವರಂ ಕಚೇರಿ ಹಾಗೂ ಚಿತ್ರದುರ್ಗದ ಮನೆ ಸೇರಿ ಐದು ಕಡೆ ರೇಡ್ ಆಗಿದೆ. ವಿಮ್ಸ್ ಮಾಜಿ ನಿರ್ದೇಶಕ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಯ ಔಷಧ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿಯ ವಡ್ಡರ ನಾಗಪ್ಪ ಕಾಲೋನಿಯಲ್ಲಿರುವ ನಿವಾಸ ಹಾಗೂ ಕೊಪ್ಪಳದ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಮಂಗಳೂರು ಮಹಾನಗರ ಪಾಲಿಕೆಯ ಯೋಜನಾ ಅಧಿಕಾರಿ ಮನೆ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ಸಣ್ಣ ನೀರಾವರಿ ಇಲಾಖೆ ಇಇ ದೇವರಾಜ್ ಶಿಗ್ಗಾಂವಿ ಎಂಬುವವರ ಹುಬ್ಬಳ್ಳಿಯ ಗೋಕುಲ ರಸ್ತೆ, ವಿದ್ಯಾನಗರ, ಕೋಟಿಲಿಂಗೇಶ್ವರ ನಗರದ ಮನೆಗಳಲ್ಲಿ ಮೂರು ಎಸಿಬಿ ತಂಡಗಳು ಪರಿಶೀಲನೆ ನಡೆಸುತ್ತಿವೆ. ಮಾವನ ಬೆಂಗೇರಿ ಬಳಿಯ ಬಾಲಾಜಿ ನಗರದ ಮನೆಯಲ್ಲೂ ದಾಖಲಾತಿಗಳನ್ನು ಪರಿಶೀಲಿಸಲಾಗುತ್ತಿದೆ. ಧಾರವಾಡ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಶ್ರೀನಿವಾಸ್ ಎಂಬುವವರ ಚಿತ್ರದುರ್ಗದ ಮನೆ ಮೇಲೆ ದಾಳಿ ನಡೆಸಲಾಗಿದೆ. ಅವರಿಗೆ ಸೇರಿದ ವಿದ್ಯಾನಗರದ ಮನೆ ಹಾಗೂ ಬಸವೇಶ್ವರ ಮೆಡಿಕಲ್ ಕಾಲೇಜು ಬಳಿಯ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದ್ದು, ಚಿತ್ರದುರ್ಗ ತಾಲೂಕಿನ ಮಾರಘಟ್ಟ ಗ್ರಾಮದ ಬಳಿಯ ತೋಟದ ಮನೆ ಮೇಲೂ ದಾಳಿ ನಡೆಸಲಾಗಿದೆ. ಕೋಲಾರದಲ್ಲಿ ಡಿಹೆಚ್ಒ ಡಾ. ವಿಜಯ್ ಕುಮಾರ್ ಅವರ ಮನೆ ಕಚೇರಿ ಸೇರಿ ಒಟ್ಟು 6 ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. ಡಾ.ವಿಜಯ್ ಕುಮಾರ್ ಅವರ ಮನೆ, ಕಚೇರಿ, ಮುಳಬಾಗಿಲಿನಲ್ಲಿರುವ ಮನೆ ಹಾಗೂ ಅವರ ಖಾಸಗಿ ಆಸ್ಪತ್ರೆ ಮೇಲೆ ಎಸಿಬಿ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಜೊತೆಗೆ ಚಿಂತಾಮಣಿಯಲ್ಲಿರುವ ಮನೆ ಹಾಗೂ ಬೆಂಗಳೂರಿನ ಫ್ಲಾಟ್ ಸೇರಿ ಒಟ್ಟು ಆರು ಕಡೆ ದಾಳಿ ನಡೆದಿದೆ.
from India & World News in Kannada | VK Polls https://ift.tt/3pE9u4A