ಗ್ವಾಲಿಯರ್: ಗ್ವಾಲಿಯರ್ನಲ್ಲಿ ಭೀಕರ ಅಪಘಾತ ಸಂಭವಿಸಿ 13 ಮಂದಿ ದಾರುಣವಾಗಿ ಸಾವನಪ್ಪಿರುವ ಘಟನೆ ನಡೆದಿದೆ. ಆಟೋ ರಿಕ್ಷಾ ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಸಾವಿಗೀಡಾದವರಲ್ಲಿ 11 ಮಂದಿ ಮಹಿಳೆಯರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಟಿ ಪೊಲೀಸ್ ವರಿಷ್ಠಾಧಿಕಾರಿ ರವಿ ಭದೋರಿಯಾ, 9 ಮಹಿಳೆಯರು ಮತ್ತು ಆಟೊ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಉಳಿದವರು ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಅಸುನೀಗಿದ್ದಾರೆ. ಅಂಗನವಾಡಿ ಕೇಂದ್ರದಲ್ಲಿನ ಕಾರ್ಯಕ್ರಮಕ್ಕೆ ಅಡುಗೆ ಮಾಡಲು ಹೋಗುತ್ತಿದ್ದ 13 ಮಹಿಳೆಯರು ಆಟೋ ರಿಕ್ಷಾದಲ್ಲಿದ್ದರು. ವಿರುದ್ಧ ದಿಕ್ಕಿನಿಂದ ವೇಗವಾಗಿ ಬಂದ ಬಸ್, ರಿಕ್ಷಾಗೆ ಡಿಕ್ಕಿ ಹೊಡೆದಿದೆ ಎಂದು ಭದೊರಿಯಾ ಘಟನೆ ಬಗ್ಗೆ ವಿವರಿಸಿದ್ದಾರೆ. ಇನ್ನು ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿಗಳಿಗೆಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಂತಾಪ ಸೂಚಿಸಿದ್ದಾರೆ. ಗ್ವಾಲಿಯರ್ನಲ್ಲಿ ಬಸ್ ಮತ್ತು ಆಟೊ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಹಲವಾರು ಜನರು ಸಾವಿಗೀಡಾಗಿರುವುದು ದುಃಖವನ್ನುಂಟು ಮಾಡಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ , ಮೃತರ ಕುಟುಂಬದವರಿಗೆ ಈ ನೋವನ್ನು ಸಹಿಸುವ ಶಕ್ತಿ ಸಿಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಚೌಹಾಣ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಮೃತರ ಕುಟುಂಬದವರು ಏಕಾಂಗಿ ಎಂಬ ಭಾವನೆ ಬೇಡ. ಮೃತರ ಕುಟುಂಬದವರಿಗೆ ₹4 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಪರಿಹಾರ ನೀಡುವುದಾಗಿ ಟ್ವೀಟ್ ಮಾಡಿದ್ದಾರೆ.
from India & World News in Kannada | VK Polls https://ift.tt/3shGxwS