ಬೆಂಗಳೂರು: ತಾವು ಕೆಲಸ ಮಾಡುವ ಗ್ರಾಮದ ವ್ಯಾಪ್ತಿಯಲ್ಲಿ ವಾಸವಾಗುತ್ತಿಲ್ಲ, ಇದರಿಂದ ಜನರ ಕೈಗೆ ಸಿಗುತ್ತಿಲ್ಲ ಎಂಬ ಆರೋಪವನ್ನು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ ಮಾಡಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ಸಂದರ್ಭದಲ್ಲಿ ಈ ಬಗ್ಗೆ ಪ್ರಶ್ನೆ ಕೇಳಿದ ಅವರು, ರಾಜ್ಯದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಕೊರತೆ ಇದೆ, ಇರುವ ಗ್ರಾಮಲೆಕ್ಕಾಧಿಕಾರಿಗಳು ಸಿಟಿಯಲ್ಲಿ ವಾಸ ಮಾಡುತ್ತಿದ್ದಾರೆ. ಅವರಿಗೆ ಹಳ್ಳಿಯಲ್ಲಿ ವಾಸ್ತವ್ಯ ಹೂಡಲು ಸೂಚನೆ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಶಾಸಕ ಬಸವರಾಜ ದದ್ದಲ್ ಕೂಡಾ ಧ್ವನಿಗೂಡಿಸಿದರು. ಅಲ್ಲದೆ ಗ್ರಾಮಲೆಕ್ಕಾಧಿಕಾರಿಗಳ ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ದ್ವಿತೀಯ ದರ್ಜೆ ಸಹಾಯಕರ ಮಾದರಿಯಲ್ಲಿ ಲಿಖಿತ ಪರೀಕ್ಷೆ ನಡೆಸಿ ನೇಮಕ ಮಾಡುವ ಯೋಚನೆ ಸರ್ಕಾರಕ್ಕೆ ಇದೆಯಾ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರ ನೀಡಿದ ಕಂದಾಯ ಸಚಿವ ಆರ್. ಅಶೋಕ್, ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಜಿಲ್ಲಾಧಿಕಾರಿಯ ನೇತೃತ್ವದಲ್ಲಿ ಪಿ.ಯು.ಸಿ ಅಂಕದ ಆಧಾರದಲ್ಲಿ ನಡೆಯುತ್ತಿದೆ. ಇನ್ನು ಗ್ರಾಮಲೆಕ್ಕಾಧಿಕಾರಿಗಳು ಗ್ರಾಮದ ವ್ಯಾಪ್ತಿಯಲ್ಲಿ ಉಳಿದುಕೊಳ್ಳುವಂತೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.
from India & World News in Kannada | VK Polls https://ift.tt/3sajPqk