ಕೋವಿಡ್ 2ನೇ ಅಲೆ ಬಗ್ಗೆ ತಜ್ಞರ ಎಚ್ಚರಿಕೆ ನಿರ್ಲಕ್ಷಿಸಿದ್ದೇ ಕರ್ನಾಟಕಕ್ಕೆ ಮುಳುವಾಯಿತೆ?

ಬೆಂಗಳೂರು: ಮಾರಕ ಎರಡನೇ ಅಲೆಗೆ ತತ್ತರಿಸಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕು ಪ್ರಕರಣಗಳನ್ನು ಕಂಡು ಜನತೆ ಬೆಚ್ಚಿ ಬೀಳುವಂತಾಗಿದೆ. ಆದರೆ ರಾಜ್ಯದಲ್ಲಿ ಹೆಚ್ಚಲು ಕಾರಣವೇನು ಎಂಬುದು ಇದೀಗ ಎಲ್ಲರ ಪ್ರಶ್ನೆಯಾಗಿದ್ದು, ಈ ಮೊದಲು ತಜ್ಞರು ನೀಡಿದ್ದ ಎಚ್ಚರಿಕೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿತೇ ಎಂಬ ಪ್ರಶ್ನೆ ಕಾಡುತ್ತಿದೆ. ಹೌದು, ರಾಜ್ಯದಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ಕೊರೊನಾ ಎರಡನೇ ಅಲೆ ಅಪ್ಪಳಿಸುವ ಸಾಧ್ಯತೆ ಹೆಚ್ಚು ಎಂದು ಕಳೆದ ನವೆಂಬರ್‌ನಲ್ಲೇ ತಜ್ಞರ ಸಮಿತಿ ಎಚ್ಚರಿಸಿತ್ತು. ಆದರೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳು ಮಾತ್ರ ಶೂನ್ಯ ಎಂದೇ ಹೇಳಬಹುದಾಗಿದೆ. ಕಳೆದ ವರ್ಷದ ನ.30ರಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು, ವೈದ್ಯರು ಮತ್ತು ಸಾರ್ವಜನಿಕ ನೀತಿ ತಜ್ಞರನ್ನು ಒಳಗೊಂಡ ತಾಂತ್ರಿಕ ಸಲಹಾ ಸಮಿತಿ, 2021ರ ಏಪ್ರಿಲ್-ಮೇ ತಿಂಗಳಲ್ಲಿ ರಾಜ್ಯಕ್ಕೆ ಕೊರೊನಾ ಎರಡನೇ ಅಲೆ ಅಪ್ಪಳಿಸಲಿದೆ ಎಂದು ಎಚ್ಚರಿಸಿತ್ತು. ಇಷ್ಟೇ ಅಲ್ಲದೇ ಈ ಕೊರೊನಾ ಎರಡನೇ ಅಲೆಯನ್ನು ಎದುರಿಸುವ ಸಲಹೆಗಳನ್ನೂ ಈ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ವರದಿಯ ರೂಪದಲ್ಲಿ ಸಲ್ಲಿಸಿತ್ತು. ಐಸಿಯು ಬೆಡ್‌ಗಳ ಸಂಖ್ಯೆ ಹೆಚ್ಚಿಸುವುದು, ವೆಂಟಿಲೇಟರ್ ಹಾಗೂ ಆಮ್ಲಜನಕ ಪೂರೈಕೆಯ ಕೊರತೆಯಾಗದಂತೆ ನೋಡಿಕೊಳ್ಳುವುದು, ನಗರ ಮತ್ತು ಗ್ರಾಮೀಣ ಭಾಗದಲ್ಲಿ ಆಂಬುಲೆನ್ಸ್ ಸೇವೆಗೆ ಒತ್ತು ನೀಡುವುದು ಸೇರಿದಂತೆ ಹಲವು ಸಲಹೆಗಳನ್ನು ರಾಜ್ಯ ಸರ್ಕಾರಕ್ಕೆ ನೀಡಲಾಗಿತ್ತು. ಆದರೆ ರಾಜ್ಯ ಸರ್ಕಾರ ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ಈ ಎಚ್ಚರಿಕೆಗೆ ಉದಾಸೀನ ತೋರಿದ್ದಲ್ಲದೇ, ಸಮಿತಿಯ ಸಲಹೆಗಳನ್ನೂ ಕಡೆಗಣಿಸಿದಂತೆ ಭಾಸವಾಗುತ್ತಿದೆ. ರಾಜ್ಯದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಕಳೆದ ಫೆಬ್ರವರಿಯಿಂದಲೇ ಕೋವಿಡ್ ಅಲೆ ನಿಯಂತ್ರಣಕ್ಕೆ ಯೋಜನೆ ರೂಪಿಸಿ, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಆದರೆ ಇದಕ್ಕೂ ಮೊದಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಮೂರು ತಿಂಗಳ ಅವಧಿಯಲ್ಲಿ ಪಕ್ಷದಲ್ಲಿ ಭುಗಿಲೆದ್ದಿದ್ದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸುವತ್ತ ಗಮನಹರಿಸಿದ್ದರು. ಈ ಸಂದರ್ಭದಲ್ಲಿ ಕಠಿಣ ಮತ್ತು ಸೂಕ್ಷ್ಮ ನಿರ್ಣಯಗಳನ್ನು ಕೈಗೊಳ್ಳುವಲ್ಲಿ ಅನುಸರಿಸಿದ ವಿಳಂಬ ಧೋರಣೆಯೇ ರಾಜ್ಯ ಈಗ ಅನುಭವಿಸುತ್ತಿರುವ ಸಂಕಷ್ಟಕ್ಕೆ ಕಾರಣ ಎಂಬ ಆರೋಪಗಳೂ ಕೇಳಿ ಬರುತ್ತಿವೆ. ಇಂತದ್ದೇ ಆರೋಪಗಳನ್ನು ಮಾಡುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೇವಲ ಚುನಾವಣೆಗಳನ್ನು ಎದುರಿಸುವಲ್ಲೇ ಬ್ಯುಸಿಯಾಗಿರುವ ರಾಜ್ಯ ಸರ್ಕಾರ ರಾಜ್ಯದ ಆರೋಗ್ಯ ಪರಿಸ್ಥಿತಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಕಿಡಿಕಾರುತ್ತಿದ್ದಾರೆ. ಒಟ್ಟಿನಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ರಾಜ್ಯದಲ್ಲಿ ಎರಡನೇ ಅಲೆ ಅಪ್ಪಳಿಸುವ ಕುರಿತು ಕಳೆದ ನ.30ರಂದೇ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಸಿದ್ದರೂ, ಸರ್ಕಾರ ಈ ನಿಟ್ಟಿನಲ್ಲಿ ಏನು ಕ್ರಮ ಕೈಗೊಳ್ಳದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.


from India & World News in Kannada | VK Polls https://ift.tt/3xhBgYU

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...