ಬೆಂಗಳೂರು: ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಯ ಮತದಾನ ಶನಿವಾರ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ತಪ್ಪದೆ ಮತದಾನ ಮಾಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಮತದಾರರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಆತ್ಮೀಯ ಮತದಾರ ಬಂಧುಗಳೇ, ಇಂದು ತಪ್ಪದೇ ಮತ ಚಲಾಯಿಸಿ. ಪ್ರಜಾಪ್ರಭುತ್ವದ ಆಧಾರವೇ ಮತದಾನ, ಅದು ನಮ್ಮ ಹಕ್ಕೂ ಹೌದು, ಕರ್ತವ್ಯವೂ ಹೌದು. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ನಿಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿ, ಪ್ರಜಾತಂತ್ರವನ್ನು ಬಲಪಡಿಸಿ ಎಂದು ಮನವಿ ಮಾಡಿದ್ದಾರೆ. ಕೋವಿಡ್ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ ಜ್ವರದ ನಡುವೆಯೂ ಬೆಳಗಾವಿಯಲ್ಲಿ ಪ್ರಚಾರ ನಡೆಸಿದ್ದರು. ಗುರುವಾರ ತೀವ್ರ ಜ್ವರ ಇದ್ದರೂ ಪ್ರಚಾರ ನಡೆಸಿ ಬಳಿಕ ಅರ್ಧದಲ್ಲಿ ಪ್ರಚಾರದಿಂದ ವಾಪಸ್ ಆಗಿದ್ದರು. ಇದಾದ ಬಳಿಕ ಅವರಿಗೆ ಕೋವಿಡ್ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಸದ್ಯ ಮಣಿಪಾಲ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಬೆಳಗಾವಿ, ಮಸ್ಕಿ, ಬಸವಲ್ಯಾಣ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ಕೋವಿಡ್ ಆತಂಕದ ನಡುವೆಯೂ ಮತದಾನ ಆರಂಭಗೊಂಡಿದ್ದು ಜನರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
from India & World News in Kannada | VK Polls https://ift.tt/3getWHu