ಬೆಂಗಳೂರು: ಕನ್ನಡದ ನಿಘಂಟು ತಜ್ಞರೆಂದೇ ಪ್ರಸಿದ್ಧಿ ಹೊಂದಿರುವ ಖ್ಯಾತ ಭಾಷಾ ತಜ್ಞ, ಶತಾಯುಷಿ ಪದ್ಮಶ್ರೀ ಪ್ರೊ.ಜಿ ವೆಂಕಟಸುಬ್ಬಯ್ಯ (108) ಅವರು ಬೆಂಗಳೂರಿನ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಭಾನುವಾರ ತಡರಾತ್ರಿ 1.15ಕ್ಕೆ ಅವರು ವಯೋಸಹಜ ಕಾರಣದಿಂದ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಸಾರಸ್ವತ ಲೋಕದಲ್ಲಿ ಜಿವಿ ಎಂದೇ ಸುವಿಖ್ಯಾತರಾಗಿರುವ ಪ್ರೊ. ಜಿ. ವೆಂಕಟಸುಬ್ಬಯ್ಯ, ಅವರು ನಾಡಿನ ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರಾಗಿ ಹೆಸರು ಗಳಿಸಿದ್ದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂ.ಎ. ಪದವಿ, ನಂತರ ಬಿ.ಟಿ. ಪದವಿ ಗಳಿಸಿದ್ದರು. ನಂತರ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿದ ಅವರು ಬಳಿಕ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ವೆಂಕಟಸುಬ್ಬಯ್ಯರಿಗೆ ಸಲ್ಲುತ್ತದೆ. ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂದು ಜನಜನಿತರಾಗಿರುವ ವೆಂಕಟಸುಬ್ಬಯ್ಯ ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. 50ಕ್ಕೂ ಹೆಚ್ಚು ಪುಸ್ತಕಗಳನ್ನು, 14ಕ್ಕೂ ಹೆಚ್ಚು ನಿಘಂಟುಗಳನ್ನು ಇವರು ಪ್ರಕಟಗೊಳಿಸಿದ್ದಾರೆ. ಇನ್ನು ‘ಇಗೋ ಕನ್ನಡ’ ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದರು. ನಿಘಂಟು ಪರಿವಾರ, ಅಕ್ರೂರ ಚರಿತ್ರೆ (ಸಂಪಾದನೆ), ಇಗೋ ಕನ್ನಡ (ಸಾಮಾಜಿಕ ನಿಘಂಟು), ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದವು ಇವರ ಪ್ರಮುಖ ಕೃತಿಗಳಾಗಿದೆ. ಇದೀಗ ಇವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.
from India & World News in Kannada | VK Polls https://ift.tt/3gmo8vB