ಬೆಂಗಳೂರು: ಮೇ ತಿಂಗಳ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರಕಾರ ತೆಗೆದುಕೊಂಡಿರುವ ತೀರ್ಮಾನದಂತೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರುವರೆ ಕೋಟಿ ಜನತೆಗೂ ಉಚಿತವಾಗಿ ಲಸಿಕೆಯನ್ನು ನೀಡುವ ಮೂಲಕ ನೆರವಿಗೆ ಧಾವಿಸಬೇಕೆಂದು ಮಾಜಿ ಸಿಎಂ ಮನವಿ ಮಾಡಿದ್ದಾರೆ. ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಈಗ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಲ್ಲಿ ಎಚ್ಡಿಕೆ ಮನವಿ ಮಾಡಿದ್ದಾರೆ. ಈಗಿನ ಸಂದರ್ಭದಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರಕಾರವೇ ಮುಂದೆ ಬಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಪ್ರಕಟಿಸಬೇಕೆಂಬುದು ನನ್ನ ಆಗ್ರಹವಾಗಿದೆ ಎಂದಿದ್ದಾರೆ. ಸುಮಾರು ಒಂದು ಕೋಟಿ ಡೋಸ್ ಲಸಿಕೆ ಕೊಳ್ಳಲು 400 ಕೋಟಿ ರೂ ಮೀಸಲಿಡಲಾಗಿದೆ. ಸರಿಸುಮಾರು ₹2.50 ಲಕ್ಷ ಕೋಟಿ ಬಜೆಟ್ ಮಂಡನೆ ಮಾಡುವ ಸರಕಾರಕ್ಕೆ ಕನಿಷ್ಠ ಪಕ್ಷ ₹2 ಸಾವಿರ ಕೋಟಿ ಹಣವನ್ನು ಲಸಿಕೆ ಖರೀದಿ ಮಾಡಲು ಮೀಸಲಿಡುವುದರಿಂದ ಬೊಕ್ಕಸಕ್ಕೆ ಭಾರೀ ಹೊರೆಯಾಗದು ಎಂದು ಅವರು ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬಡವ-ಬಲ್ಲಿದನೆಂಬ ತಾರತಮ್ಯ ತೋರದೆ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಈ ಮೂಲಕ ಆಗ್ರಹಿಸುತ್ತೇನೆ. ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ ಎಂದಿದ್ದಾರೆ.
from India & World News in Kannada | VK Polls https://ift.tt/32JdyXv