ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಅಟ್ಟಹಾಸ ಮೆರೆಯುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಸೋಮವಾರ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಸೋಮವಾರ ಮಧ್ಯಾಹ್ಮ 3 ಗಂಟೆಗೆ ಹಿರಿಯ ಸಚಿವರ ಸಭೆ ವಿಧಾನಸೌಧದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲಿದ್ದಾರೆ. ಕೋವಿಡ್ ಪಾಸಿಟಿವ್ ಆಗಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಸಿಎಂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಕಾರಣಕ್ಕಾಗಿ ಅವರು ವರ್ಚುವಲ್ ಮೂಲಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಿಎಂ ಅನುಪಸ್ಥಿತಿಯಲ್ಲಿ ಸಚಿವರಾದ ಆರ್. ಅಶೋಕ್, ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸಭೆ ನಡೆಸುವವರಿದ್ದರು. ಆದರೆ ಈ ಸಭೆ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಇದೀಗ ಮುಖ್ಯಮಂತ್ರಿಗಳು ಕೂಡಾ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಬೆಂಗಳೂರಿನ ಸಚಿವರು, ಸಂಸದರು, ಶಾಸಕರು ಭಾಗಿಯಾಗಲಿದ್ದಾರೆ. ಜಾರಿಯಾಗುತ್ತಾ ಲಾಕ್ಡೌನ್? ರಾಜ್ಯದಲ್ಲಿ ಭಾನುವಾರ 19,067 ಹೊಸ ಪ್ರಕರಣಗಳು ವರದಿಯಾಗಿವೆ. 81 ಮಂದಿ ಕೋವಿಡ್ ಸೋಂಕಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕೋವಿಡ್ ನಿಯಂತ್ರಣ ಅತೀ ಅಗತ್ಯವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಲಾಕ್ಡೌನ್ ಅನಿವಾರ್ಯ ಎಂಬ ಅಭಿಪ್ರಾಯ ಕೆಲವರಲ್ಲಿ ವ್ಯಕ್ತವಾಗುತ್ತಿದೆ. ಆದರೆ ಸರ್ಕಾರ ಲಾಕ್ಡೌನ್ ಜಾರಿಗೊಳಿಸುವ ಯೋಚನೆಯಲ್ಲಿ ಇಲ್ಲ. ಬದಲಾಗಿ ಲಾಕ್ಡೌನ್ಗೆ ಪರ್ಯಾಯವಾಗಿ ಕೆಲವೊಂದು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಬಹುದು. ಈಗಾಗಲೇ ಮದುವೆ, ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿದೆ. ಹಾಗೂ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಇದನ್ನು ವಿಸ್ತರಣೆ ಮಾಡುವ ನಿಟ್ಟಿನಲ್ಲೂ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ. ಹಾಗೂ ಕೋವಿಡ್ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವುದರ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಗುಂಪು ಸೇರುವ ಸಾಧ್ಯತೆ ಇರುವ ಕಡೆಗಳಲ್ಲಿ ನಿರ್ಬಂಧ ಹೇರುವ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಸರ್ಕಾರಕ್ಕೆ ತಜ್ಞರು ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ. ಆದರೆ ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಅಡ್ಡಿ ಉಂಟಾಗದಂತೆ ನೋಡಿಕೊಳ್ಳುವುದು ಕೂಡಾ ಅನಿವಾರ್ಯ ಆಗಿದೆ. ಈ ಎಲ್ಲಾ ನಿಟ್ಟಿನಲ್ಲಿ ಸೋಮವಾರದಂದು ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
from India & World News in Kannada | VK Polls https://ift.tt/32tgvv3